Hubballi-Dharawad: ಹುಬ್ಬಳ್ಳಿಯಲ್ಲಿ ರಿವರ್ಸ್ ಆಪರೇಷನ್; ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಪ್ರಮುಖ ನಾಯಕ
2023ರ ಕರ್ನಾಟಕ ವಿಧಾನಸಭೆ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕಣದಲ್ಲಿರುವ ಎಲ್ಲಾ ಅಭ್ಯರ್ಥಿಗಳು ಗೆಲುವಿಗಾಗಿ ಭಾರೀ ಕಸರತ್ತು ನಡೆಸುತ್ತಿದ್ದಾರೆ. ಎದುರಾಳಿಗಳನ್ನು ಸೋಲಿಸಲು ತಂತ್ರ- ಪ್ರತಿತಂತ್ರದ ಮೊರೆ ಹೋಗಿದ್ದಾರೆ.
ಬಿಜೆಪಿಗೆ ಗುಡ್ಬೈ ಹೇಳಿದ್ದ ಉತ್ತರ ಕರ್ನಾಟಕ ಭಾಗದ ಪ್ರಮುಖ ಲಿಂಗಾಯತ ನಾಯಕರಾದ ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಸೆಳೆದುಕೊಳ್ಳುವಲ್ಲಿ ಕಾಂಗ್ರೆಸ್ ಪಕ್ಷ ಯಶಸ್ವಿಯಾಗಿತ್ತು.

ಕೆಲವು ನಾಯಕರು ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ, ಉಳಿದ ನಾಯಕರು ಮತ್ತು ಕಾರ್ಯಕರ್ತರು ಪಕ್ಷ ತೊರೆಯದಂತೆ ನೋಡಿಕೊಳ್ಳುತ್ತಿದ್ದಾರೆ. ಉತ್ತರ ಕರ್ನಾಟಕದಲ್ಲಿ ಸದೃಢವಾಗಿರುವ ಬಿಜೆಪಿ ತನ್ನ ಕಾರ್ಯಕರ್ತರಿಗೆ ಹುಮ್ಮಸ್ಸು ತುಂಬಿ ಪಕ್ಷ ಸಂಘಟನೆಯತ್ತ ಗಮನ ಹರಿಸುತ್ತಿದೆ.
ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್, ತವನಪ್ಪ ಅಷ್ಟಗಿ ಅವರನ್ನು ಸೆಳೆದುಕೊಂಡ ಕಾಂಗ್ರೆಸ್ಗೆ ರಿವರ್ಸ್ ಆಪರೇಷನ್ ಮೂಲಕ ಬಿಜೆಪಿ ತಿರುಗೇಟು ನೀಡಿದೆ. ಹುಬ್ಬಳ್ಳಿ-ಧಾರವಾಡ ಸ್ಥಳೀಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ್ ಮಲಕಾರಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.
ಇಂದು (ಏಪ್ರಿಲ್ 24, ಸೋಮವಾರ) ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ. ಕಾಂಗ್ರೆಸ್ನಿಂದ ಟಿಕೆಟ್ ತಪ್ಪಿದ ಹಿನ್ನೆಲೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ ಇಂದು ಬಸವರಾಜ್ ಮಲಕಾರಿ ನಾಮಪತ್ರ ಹಿಂಪಡೆಯಲಿದ್ದಾರೆ.
ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಬಸವರಾಜ್ ಮಲಕಾರಿ ನಾಮಪತ್ರ ಸಲ್ಲಿಸಿದ್ದರು. ಬಳಿಕ ಬಿಜೆಪಿ ಶಾಸಕ ಅಮೃತ್ ದೇಸಾಯಿ ಮನವೊಲಿಕೆಯ ಬಳಿಕ ಬಸವರಾಜ್ ಮಲಕಾರಿ ನಾಮಪತ್ರ ಹಿಂಪಡೆಯಲಿದ್ದಾರೆ.

ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿ ತವನಪ್ಪ ಅಷ್ಟಗಿ ಅವರನ್ನು ಸೇರಿಸಿಕೊಳ್ಳುವಲ್ಲಿ ಕಾಂಗ್ರೆಸ್ ಪಕ್ಷ ಯಶಸ್ವಿಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಬಿಜೆಪಿ, ರಿವರ್ಸ್ ಅಪರೇಷನ್ ಮಾಡಿ ಕಾಂಗ್ರೆಸ್ಗೆ ಠಕ್ಕರ್ ಕೊಟ್ಟಿದೆ.
ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ಗೆ ಬಂಡಾಯ ಬಿಸಿ
ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರಿರುವ ಹುಬ್ಬಳ್ಳಿ-ಧಾರವಾಡದ ಪ್ರಭಾವಿ ಲಿಂಗಾಯತ ನಾಯಕ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಸ್ಥಳೀಯ ಕಾಂಗ್ರೆಸ್ ನಾಯಕರಿಂದ ಬಂಡಾಯದ ಬಿಸಿ ತಾಗುತ್ತಿದೆ.
ಸೋಮವಾರ (ಏಪ್ರಿಲ್ 24) ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಬಂಡಾಯ ಅಭ್ಯರ್ಥಿಗಳ ಮನವೊಲಿಕೆಗೆ ಜಗದೀಶ್ ಶೆಟ್ಟರ್ ಮತ್ತು ಕಾಂಗ್ರೆಸ್ ನಾಯಕರು ಪ್ರಯತ್ನಿಸುತ್ತಿದ್ದಾರೆ. ಆದರೆ, ಯಾವುದೇ ಕಾರಣಕ್ಕೆ ನಾಮಪತ್ರ ಹಿಂಪಡೆಯಲ್ಲ ಎಂದು ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಲ್ತಾಫ್ ಕಿತ್ತೂರ್ ತಿಳಿಸಿದ್ದಾರೆ.
ತವನಪ್ಪ ಅಷ್ಟಗಿ ನಾಮಪತ್ರ ವಾಪಸ್
ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಗದೀಶ್ ಶೆಟ್ಟರ್ ಆಪ್ತ ತವನಪ್ಪ ಅಷ್ಟಗಿ ಅವರು ಸೋಮವಾರ ನಾಮಪತ್ರ ವಾಪಸ್ ಪಡೆಯಲಿದ್ದಾರೆ. ಈಗಾಗಲೇ ಕಾಂಗ್ರೆಸ್ ಸೇರಿರುವ ಕಾರಣ ತವನಪ್ಪ ಅಷ್ಟಗಿ ಅವರು ಪಕ್ಷದ ಅಧಿಕೃತ ಅಭ್ಯರ್ಥಿ ವಿನಯ್ ಕುಲಕರ್ಣಿಗೆ ಬೆಂಬಲಿಸಲಿದ್ದಾರೆ.
2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ ಮತ್ತು ಪರಿಶೀಲನೆ ಪ್ರಕ್ರಿಯೆ ಮುಕ್ತಾಯವಾಗಿದೆ. ಇನ್ನು ನಾಮಪತ್ರ ವಾಪಸ್ ಪಡೆಯಲು ಇಂದು (ಏಪ್ರಿಲ್ 24) ಕೊನೆಯ ದಿನಾವಾಗಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದರೆ, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.












Click it and Unblock the Notifications