ಕೈ ತಪ್ಪಿದ ಟಿಕಟ್, ಬಿಜೆಪಿ ತೊರೆದ ಸೀಮಾ ಮಸೂತಿ!
ಧಾರವಾಡ, ಏಪ್ರಿಲ್ 12 : ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಬಳಿಕ ಉಂಟಾಗಿರುವ ಭಿನ್ನಮತ ಇನ್ನೂ ಶಮನಗೊಂಡಿಲ್ಲ. ಧಾರವಾಡ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಸೀಮಾ ಮಸೂತಿ ಬಿಜೆಪಿ ತೊರೆದಿದ್ದಾರೆ.
ಕರ್ನಾಟಕ ಬಿಜೆಪಿ ಭಾನುವಾರ 72 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಧಾರವಾಡ ಕ್ಷೇತ್ರದಲ್ಲಿ ಅಮೃತ್ ದೇಸಾಯಿ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿತ್ತು. ಇದರಿಂದಾಗಿ ಅಸಮಾಧಾನ ಭುಗಿಲೆದ್ದಿದೆ.
ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಧಾರವಾಡದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸೀಮಾ ಮಸೂತಿ ಅವರು, 'ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. 2018ರ ಚುನಾವಣೆಗೆ ಧಾರವಾಡ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ' ಎಂದು ಘೋಷಣೆ ಮಾಡಿದರು.
'ಕಳೆದ 20 ವರ್ಷಗಳಿಂದ ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ. 2008ರ ಚುನಾವಣೆಯಲ್ಲಿ ಗೆದ್ದು ಶಾಸಕಿಯಾಗಿದ್ದೆ. ಆದರೆ, ಈ ಬಾರಿ ನಿಷ್ಠಾವಂತರನ್ನು ಕಡೆಗಣಿಸಿ ಈ ಬಾರಿ ಟಿಕೆಟ್ ಹಂಚಿಕೆ ಮಾಡಲಾಗಿದೆ' ಎಂದು ಅವರು ಆರೋಪಿಸಿದರು.
ಅಫಜಲಪುರ : ಬಿಜೆಪಿ ಭಿನ್ನಮತ, ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ
'ಒಂದು ಬಾರಿ ಕ್ಷೇತ್ರದಲ್ಲಿ ನಾನು ಗೆಲುವು ಸಾಧಿಸಿದ್ದೇನೆ. ಈ ಬಾರಿಯ ಚುನಾವಣೆಯಲ್ಲಿಯೂ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ, ಬೇರೆಯವರಿಗೆ ಟಿಕೆಟ್ ನೀಡಲಾಗಿದೆ. ಆದ್ದರಿಂದ, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ' ಎಂದರು.
ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಅವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದು, 'ಸೀಮಾ ಮಸೂತಿ ಅವರು ಅಸಮಾಧಾನಗೊಂಡಿರುವ ವಿಚಾರ ತಿಳಿದಿದೆ. ಬಿ.ಎಸ್.ಯಡಿಯೂರಪ್ಪ ಮತ್ತು ನಾನು ಅವರ ಜೊತೆ ಮಾತುಕತೆ ನಡೆಸಿ ಮನವೊಲಿಸುತ್ತೇವೆ' ಎಂದು ಹೇಳಿದ್ದಾರೆ.
ಆಳಂದ ಅಭ್ಯರ್ಥಿ ಘೋಷಣೆ : ಬಿಜೆಪಿಯಲ್ಲಿ ಅಸಮಾಧಾನ
2008ರ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸೀಮಾ ಮಸೂತಿ ಅವರು 35,417 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಕಾಂಗ್ರೆಸ್ನ ವಿನಯ್ ಕುಲಕರ್ಣಿ ಅವರನ್ನು ಸೋಲಿಸಿದ್ದರು.
2013ರ ಚುನಾವಣೆಯಲ್ಲಿ ವಿನಯ್ ಕುಲಕರ್ಣಿ ಅವರು 53,453 ಮತಗಳನ್ನು ಪಡೆದು ಜಯಗಳಿಸಿದ್ದರು. ಸೀಮಾ ಮಸೂತಿ ಅವರು 16,896 ಮತಗಳನ್ನು ಪಡೆದು 4ನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದರು. ಈ ಬಾರಿಯ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಕೈ ತಪ್ಪಿದೆ.