ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೃಷಿ ಸಚಿವ ಚಲುವರಾಯಸ್ವಾಮಿ
ಧಾರವಾಡ, ಜೂನ್ 27: ಕರ್ನಾಟಕ ರಾಜ್ಯಾದ್ಯಂತ ರೈತರ ಬೇಡಿಕೆ ಹಿನ್ನಲೆಯಲ್ಲಿ ಕೆಲವು ಕೃಷಿ ಸೂಕ್ಷ್ಮ ನೀರಾವರಿ ಪರಿಕರಗಳ ಸೌಲತ್ತು ಪಡೆಯಲು ಇರುವ ಕಾಲಮಿತಿಯನ್ನು ಏಳು ವರ್ಷಗಳಿಂದ 5 ವರ್ಷಗಳಿಗೆ ಇಳಿಸಲು ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ.
ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕ್ಷೇತ್ರದ ಹೆಬ್ಬಳ್ಳಿ ಗ್ರಾಮದಲ್ಲಿ ವಿವಿಧ ಕೃಷಿ ಪ್ರಾತ್ಯಕ್ಷಿಕೆ ಉದ್ಘಾಟಿಸಿದರು. ಈ ವೇಳೆ ಅರ್ಹ ಫಲಾನುಭವಿಗಳಿಗೆ ಸೌಲತ್ತು ವಿತರಿಸಿ ಅವರು ಮಾತನಾಡಿದರು.

ನಮ್ಮ ಸರ್ಕಾರ ಹಿಂದೆಂದಿಗಿಂತ ಕೃಷಿಗೆ ಹೆಚ್ಚಿನ ಆದ್ಯತೆ ನೀಡಿದೆ. ಮುಂಗಾರು ಹಂಗಾಮಿಗೆ 1700 ಕೋಟಿ ರೂ ಬೆಳೆ ವಿಮೆ ಪಾವತಿಸಲಾಗಿದೆ. ಕಳೆದ ಸಾಲಿನಲ್ಲಿ ಸುಮಾರು 1000 ಕೋಟಿ ರೂ ವೆಚ್ಚದಲ್ಲಿ ಕೃಷಿ ಪರಿಕರಗಳನ್ನು ವಿತರಿಸಲಾಗಿದೆ.
ವಿಶ್ವ ವಿದ್ಯಾನಿಲಯಗಳ ಮೂಲಕ ರೈತರಿಗೆ ಸಂಶೋದನೆ, ಮಾರ್ಗದರ್ಶನಗಳ ನೆರವು ನೀಡಲಾಗುತ್ತಿದೆ. ಶಾಸಕ ವಿನಯ್ ಕುಲಕರ್ಣಿ ಕೇತ್ರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದ್ದಾರೆ. ನಿರಂತರವಾಗಿ ಕ್ಷೇತ್ರದ ಅಭಿವೃದ್ಧಿಗೆ ಎಲ್ಲಾ ಸಚಿವರ ಸಂಪರ್ಕ ಹೊಂದಿದ್ದಾರೆ ಎಂದು ಹೇಳಿದರು.

ಕೃಷಿಯಲ್ಲಿ ತಂತ್ರಜ್ಞಾನ ಬಳಸಿ ಅಭಿವೃದ್ಧಿಗೆ ಶ್ರಮಿಸಿ
ಇದಾದ ಬಳಿಕ ಧಾರವಾಡ ಕೃಷಿ ವಿಶ್ವವಿದ್ಯಾಲಯದ 37 ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಕೃಷಿ ಪದವೀಧರರು ತಮ್ಮ ತಾಂತ್ರಿಕ ಜ್ಞಾನ ಬಳಸಿ ನಾಡಿನ ಸರ್ವತೋಮುಖ ಏಳಿಗೆಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
ಕೃಷಿ ಪದವೀಧರರು ಉದ್ಯೋಗ ಅರಸುವ ಬದಲು ಕೆಲಸ ನೀಡುವವರಾಗಿ ಬೆಳೆಯಬೇಕು. ಕೃಷಿ ಕ್ಷೇತ್ರದಲ್ಲಿ ಮೌಲ್ಯವರ್ಧನೆ ಹಾಗೂ ಅಭಿವೃದ್ಧಿಗೆ ವ್ಯಾಪಕ ಅವಕಾಶ ಇದೆ. ಕೃಷಿ ಪದವಿಧರರು ತಮ್ಮ ಕೌಶಲ್ಯವನ್ನು ಈ ಕ್ಷೇತ್ರದ ವಿಕಾಸಕ್ಕೆ ಬಳಸಬೇಕು ಎಂದು ಸಲಹೆ ನೀಡಿದರು.
ಧಾರವಾಡದ ಕೃಷಿ ವಿವಿಯ 69 ಪಿ.ಹೆಚ್.ಡಿ, 237 ಸ್ನಾತಕೋತ್ತರ ಹಾಗೂ 627 ಸ್ನಾತಕ ಪದವಿ ಸೇರಿದಂತೆ 933 ಅಭ್ಯರ್ಥಿಗಳಿಗೆ ಪದವಿ ಪಡೆದಿದ್ದಕ್ಕೆ ಸಚಿವರು ಹರ್ಷ ವ್ಯಕ್ತಪಡಿಸಿದರು.
ಧಾರವಾಡ ಕೃಷಿ ವಿ.ವಿ ದೇಶದ ಶ್ರೇಷ್ಠ ವಿಶ್ವವಿದ್ಯಾಲಗಳಲ್ಲಿ ಒಂದಾಗಿದ್ದು, ಹೊಸ ಹೊಸ ಸಂಶೋಧನೆಗಳ ಮೂಲಕ ಕೃಷಿ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿರುವುದು ಪ್ರಶಂಸನೀಯ. ವಿಶ್ವವಿದ್ಯಾಲಯಗಳು ರೈತರಿಗೆ ಆತ್ಮವಿಶ್ವಾಸ ತುಂಬುವ ಜೊತೆಗೆ ವೈಜ್ಞಾನಿಕ, ತಾಂತ್ರಿಕ ನೆರವು ಒದಗಿಸಬೇಕು ಎಂದು ಅವರು ಸೂಚನೆ ನೀಡಿದರು.












Click it and Unblock the Notifications