ದ್ವಿತೀಯ ಪಿಯು ಮರುಪರೀಕ್ಷೆ: ಧಾರವಾಡದಲ್ಲಿ ಬಿಗಿ ಭದ್ರತೆ
ಹುಬ್ಬಳ್ಳಿ,ಏಪ್ರಿಲ್, 11: ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಮರು ಪರೀಕ್ಷೆಗೆ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದ್ದು, ಮಂಗಳವಾರ ನಡೆಯಲಿರುವ ಪರೀಕ್ಷೆಗೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ.
ಎರಡು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಕಾರಣ ಇದು ಮತ್ತೊಮ್ಮೆ ಮರುಕಳಿಸದಿರುವಂತೆ ನೋಡಿಕೊಳ್ಳುವ ಸಲುವಾಗಿ ವ್ಯಾಪಕ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸಚಿವ ಕಿಮ್ಮನೆ ರತ್ನಾಕರ್ ಅವರೇ ಪರೀಕ್ಷೆಯ ಎಲ್ಲಾ ಉಸ್ತುವಾರಿ ನೋಡಿಕೊಂಡಿದ್ದಾರೆ.[ಪಿಯು ಮೌಲ್ಯ ಮಾಪನ ವಿವಾದ : ಮುರಿದು ಬಿತ್ತು 4ನೇ ಸಂಧಾನ ಸಭೆ]
ಇದೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರು ಹೊರತು ಪಡಿಸಿ ಧಾರವಾಡದಿಂದ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ರವಾನಿಸಲಾಗುತ್ತಿದೆ.
ಪ್ರಶ್ನೆ ಪತ್ರಿಕೆ ಮುದ್ರಿಸಿದ ಸ್ಥಳವನ್ನು ಅತ್ಯಂತ ಗೌಪ್ಯವಾಗಿಡಲಾಗಿದ್ದು, ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿದ ಸಿಬ್ಬಂದಿಯನ್ನು ಸಹ ಗೃಹ ಬಂಧನದಲ್ಲಿರಿಸಲಾಗಿದೆ. ನಾಳೆ ಪರೀಕ್ಷೆ ಮುಗಿಯುವವರೆಗೂ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಂತಿಲ್ಲ ಎಂದು ಕಟ್ಟಪ್ಪಣೆ ಮಾಡಲಾಗಿದೆ.
ಪ್ರಶ್ನೆಪತ್ರಿಕೆ ಸಾಗಾಟ ಮತ್ತು ಪರೀಕ್ಷೆ ಉಸ್ತುವಾರಿ ಹೊಣೆಗಾರಿಕೆಯನ್ನು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳಿಗೆ ನೀಡಲಾಗಿದೆ. ಆಯಾ ಜಿಲ್ಲೆಗಳ ಗಡಿ ದಾಟುವವರೆಗೂ ಪ್ರಶ್ನೆ ಪತ್ರಿಕೆ ಸಾಗಾಟ ಮೇಲೆ ನಿಗಾ ವಹಿಸಬೇಕೆಂದು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳಿಗೆ ತಾಕೀತು ಮಾಡಲಾಗಿದೆ.[ಪತ್ರಿಕೆ ಸೋರಿಕೆ: ಶಿಕ್ಷಣ ಸಚಿವರಿಗೆ ವಿದ್ಯಾರ್ಥಿಯ ಬಹಿರಂಗ ಪತ್ರ]
ಧಾರವಾಡ ಜಿಲ್ಲಾ ಖಜಾನೆಯಲ್ಲಿ ಪ್ರಶ್ನೆ ಪತ್ರಿಕೆ ಇಡಲಾಗಿದ್ದು, 200 ಮೀಟರ್ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಾಳೆ ಬೆಳಗ್ಗೆ 9ಗಂಟೆಯಿಂದ ಪರೀಕ್ಷೆ ಆರಂಭಗೊಳ್ಳಲಿದ್ದು, ಪ್ರತಿಯೊಂದು ಪ್ರಕ್ರಿಯೆನ್ನು ವಿಡೀಯೋ ಚಿತ್ರೀಕರಣ ಮಾಡಲಾಗುತ್ತಿದೆ.