ಜುಲೈ 21ಕ್ಕೆ ನವಲಗುಂದದಲ್ಲಿ ಮದ್ಯ ಮಾರಾಟ ಬಂದ್, ಯಾಕೆ?, ಇಲ್ಲಿದೆ ವಿವರ
ಧಾರವಾಡ, ಜುಲೈ, 18: ಜುಲೈ 21ರಂದು ರೈತ ಹುತಾತ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ದಿನದಂದು ನವಲಗುಂದ ಶಹರ ಮತ್ತು ಅಳಗವಾಡಿ ಗ್ರಾಮದಲ್ಲಿ ಮದ್ಯಪಾನ, ಮದ್ಯ ಮಾರಾಟ ಹಾಗೂ ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.
ಜುಲೈ 21ರಂದು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಜುಲೈ 20ರ ಮಧ್ಯರಾತ್ರಿ 12 ಗಂಟೆಯಿಂದ ಜುಲೈ 22ರ ಬೆಳಗಿನ 6 ಗಂಟೆಯವರೆಗೆ ನವಲಗುಂದ ಶಹರ ಮತ್ತು ಅಳಗವಾಡಿ ಗ್ರಾಮದಲ್ಲಿ ಮದ್ಯಪಾನ, ಮದ್ಯ ಮಾರಾಟ ಹಾಗೂ ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.

ಈ ಕುರಿತು ಆದೇಶ ಹೊರಡಿಸಿರುವ ಅವರು, ನಿಷೇಧಿತ ದಿನಾಂಕಗಳಂದು ಭಾರತೀಯ ಮದ್ಯದ ತಯಾರಿಕಾ ಅಂಗಡಿಗಳು, ಬಿಯರ್, ಬಾರ್ಗಳು, ಕ್ಲಬ್ಗಳು ಮತ್ತು ಮದ್ಯದ ಡಿಪೋಗಳನ್ನು ಮುಚ್ಚಬೇಕು. ಇದಲ್ಲದೇ ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ಬರುವ ಹಿತದೃಷ್ಟಿಯಿಂದ ವಲಯ ಅಬಕಾರಿ ಇನ್ಸ್ಪೆಕ್ಟರ್ ಹಾಗೂ ಉಪ ವಭಾಗ ಅಬಕಾರಿ ಅಧೀಕ್ಷಕರು ಸೂಕ್ತ ಕ್ರಮ ಕೈಗೊಳ್ಳಬೇಕು. ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21 (2)ರ ಅನ್ವಯ ಅವಶ್ಯಕತೆ ಕಂಡುಬಂದಲ್ಲಿ ಶಾಂತಿ ಪಾಲನೆಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ.
ಅಬಕಾರಿ ಉಪ ಆಯುಕ್ತರು ಧಾರವಾಡ ಮತ್ತು ಆರಕ್ಷಕ ಅಧೀಕ್ಷಕರು ಧಾರವಾಡ ಹಾಗೂ ಹೆಚ್ಚುವರಿ ಅಬಕಾರಿ ಅಧಿಕ್ಷಕರು, ಧಾರವಾಡ ಜಿಲ್ಲೆ ಇವರು ತಮ್ಮ ವ್ಯಾಪ್ತಿಯಲ್ಲಿ ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.












Click it and Unblock the Notifications