ಕುಂದಗೋಳ ಉಪ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಯಾರು?
ಧಾರವಾಡ, ಏಪ್ರಿಲ್ 25 : ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಟಿಕೆಟ್ಗಾಗಿ ಕಾಂಗ್ರೆಸ್ನಲ್ಲಿ ಬಾರಿ ಪೈಪೋಟಿ ನಡೆಯುತ್ತಿದೆ. ಸಿ.ಎಸ್.ಶಿವಳ್ಳಿ ಅವರ ಕುಟುಂಬದವರಿಗೆ ಟಿಕೆಟ್ ನೀಡಿ, ಅನುಕಂಪದ ಅಲೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.
ಕುಂದಗೋಳ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ಸಿ.ಎಸ್.ಶಿವಳ್ಳಿ ಅವರು ಮಾರ್ಚ್ 22ರಂದು ಹೃದಯಾಘಾತದಿಂದಾಗಿ ನಿಧನ ಹೊಂದಿದರು. ಮೇ 19ರಂದು ಕುಂದಗೋಳ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ.
ಚಿಂಚೋಳಿ, ಕುಂದಗೋಳ ಉಪ ಚುನಾವಣೆಯತ್ತ ಎಲ್ಲರ ಚಿತ್ತ
ಕುಂದಗೋಳ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂದು ಹಿರಿಯ ಮುಖಂಡ ವಿ.ಆರ್.ಸುದರ್ಶನ್ ಅವರು ಧಾರವಾಡ ಜಿಲ್ಲಾ ಘಟಕದ ಜೊತೆ ಒಂದು ಸುತ್ತಿನ ಚರ್ಚೆ ನಡೆಸಿದ್ದಾರೆ. ಧಾರವಾಡ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಅನಿಲ ಕುಮಾರ ಪಾಟೀಲ ಅವರ ಜೊತೆಯೂ ಚರ್ಚಿಸಿದ್ದಾರೆ.
ಪೌರಾಡಳಿತ ಸಚಿವರಾಗಿದ್ದ ಸಿ.ಎಸ್.ಶಿವಳ್ಳಿ ಪರಿಚಯ
ಲೋಕಸಭಾ ಚುನಾವಣೆ ಕಾರ್ಯಗಳಲ್ಲಿ ನಾಯಕರು ಬ್ಯುಸಿ ಇದ್ದರು. ಈಗ ಚುನಾವಣೆ ಮುಗಿದಿದ್ದು, ಉಪ ಚುನಾವಣೆಯತ್ತ ಗಮನ ಹರಿಸಿದ್ದಾರೆ. ಏಪ್ರಿಲ್ 25ರಂದು ಸಂಜೆ ಅಭ್ಯರ್ಥಿ ಘೋಷಣೆಯಾಗುವ ನಿರೀಕ್ಷೆ ಇದೆ. ನಾಮಪತ್ರ ಸಲ್ಲಿಸಲು ಏಪ್ರಿಲ್ 29 ಕೊನೆಯ ದಿನವಾಗಿದೆ.
ಕುಂದಗೋಳ ಕ್ಷೇತ್ರಕ್ಕೆ ಉಪ ಚುನಾವಣೆ ದಿನಾಂಕ ಘೋಷಣೆ
ಅಭ್ಯರ್ಥಿಯಾಗಲು ಪೈಪೋಟಿ
ಕುಂದಗೋಳ ಕ್ಷೇತ್ರದ ಉಪ ಚುನಾವಣೆಯಲ್ಲಿ ಅಭ್ಯರ್ಥಿಯಾಗಲು ದಿ.ಸಿ.ಎಸ್.ಶಿವಳ್ಳಿ ಅವರ ಪತ್ನಿ ಕುಸುಮಾ, ಸುರೇಶ ಸವಣೂರ, ಶಿವಾನಂದ ಬೆಂತೂರ ಹಾಗೂ ಚಂದ್ರಶೇಖರ ಜುಟ್ಟಲ ಅವರ ಹೆಸರುಗಳು ಕೇಳಿಬರುತ್ತಿವೆ. ಆದರೆ, ಅಭ್ಯರ್ಥಿ ಯಾರು? ಎಂಬುದು ಇನ್ನೂ ಅಂತಿಮಗೊಂಡಿಲ್ಲ.
ವಿ.ಆರ್.ಸುದರ್ಶನ್ ಹೇಳಿದ್ದೇನು?
ಕುಂದಗೋಳ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂದು ವಿ.ಆರ್.ಸುದರ್ಶನ್ ಅವರು ಧಾರವಾಡ ಜಿಲ್ಲಾ ಘಟಕದ ಜೊತೆ ಒಂದು ಸುತ್ತಿನ ಚರ್ಚೆ ನಡೆಸಿದ್ದಾರೆ. 'ಎಲ್ಲಾ ಆಕಾಂಕ್ಷಿಗಳ ಹೆಸರನ್ನು ಕೆಪಿಸಿಸಿಗೆ ಕಳುಹಿಸಲಾಗುತ್ತದೆ' ಎಂದು ಹೇಳಿದರು.
ಸಿದ್ದರಾಮಯ್ಯ ಜೊತೆ ಚರ್ಚೆ
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕಾಂಕ್ಷಿಗಳ ಪಟ್ಟಿಯನ್ನು ಪರಿಶೀಲನೆ ನಡೆಸಿ ಅಭ್ಯರ್ಥಿ ಹೆಸರನ್ನು ಪಕ್ಷದ ಹೈಕಮಾಂಡ್ಗೆ ಶಿಫಾರಸು ಮಾಡಲಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಹೈಕಮಾಂಡ್ ನಾಯಕರ ಜೊತೆ ಚರ್ಚಿಸಿ ಅಭ್ಯರ್ಥಿ ಅಂತಿಮಗೊಳಿಸಲಿದ್ದಾರೆ.
ಬಿಜೆಪಿ ಇನ್ನೂ ಅಭ್ಯರ್ಥಿ ಘೋಷಣೆ ಮಾಡಿಲ್ಲ
ಕಾಂಗ್ರೆಸ್ ಸಿ.ಎಸ್.ಶಿವಳ್ಳಿ ಅವರ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಬಹುದಾಗಿದೆ. ಆದರೆ, ಎದುರಾಳಿ ಯಾರು? ಎಂಬುದು ಇನ್ನೂ ಅಂತಿಮವಾಗಿಲ್ಲ. 2018ರ ಚುನಾವಣೆಯಲ್ಲಿ ಬಿಜೆಪಿಯಿಂದ ಸಿ.ಎಸ್.ಈಶ್ವರ ಗೌಡ ಅವರು ಕಣಕ್ಕಿಳಿದಿದ್ದರು. ಕೇವಲ 634 ಮತಗಳ ಅಂತರದಿಂದ ಸೋಲು ಕಂಡಿದ್ದರು.
ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯುವುದಿಲ್ಲ
ಕುಂದಗೋಳ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕಿಳಿಯುವುದಿಲ್ಲ. ಬೆಂಗಳೂರಿನಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು, 'ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದರು. ಆದ್ದರಿಂದ, ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿ ಕಣಕ್ಕಿಳಿಸುವುದಿಲ್ಲ' ಎಂದು ಹೇಳಿದರು.