ಸಿಎಂ ಅಂತಿಮವಾಗುವ ಮೊದಲೇ ಸಚಿವ ಸ್ಥಾನಕ್ಕೆ ಪೈಪೋಟಿ: ಶಾಸಕ ಅಬ್ಬಯ್ಯರನ್ನು ಮಂತ್ರಿ ಮಾಡುವಂತೆ ಕಾರ್ಯಕರ್ತರ ಪಟ್ಟು
ಹುಬ್ಬಳ್ಳಿ, ಮೇ 16: ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದು ಮೂರು ದಿನಗಳಾಗಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಇನ್ನೂ ಸಿಎಂ ಸ್ಥಾನದ ಜಟಾಪಟಿಗೆ ಪೂರ್ಣ ವಿರಾಮ ಬಿದ್ದಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಡುವೆ ಹಗ್ಗಾಜಗ್ಗಾಟ ಮುಂದುವರಿದಿದ್ದು, ಇಂದು ಸಿಎಂ ಸ್ಥಾನ ಯಾರಿಗೆ ಎನ್ನುವುದು ಅಂತಿಮವಾಗುವ ಸಾಧ್ಯತೆ ಇದೆ.
ಕಾಂಗ್ರೆಸ್ ಸರ್ಕಾರ ರಚನೆಯ ಸಿದ್ಧತೆಯಲ್ಲಿದ್ದು, ಸಚಿವ ಸಂಪುಟ ಹೇಗಿರಲಿದೆ ಎನ್ನುವ ಕುತೂಹಲ ಎಲ್ಲರಲ್ಲಿದೆ. ಈಗಾಗಲೇ ಸಚಿವ ಸ್ಥಾನಕ್ಕೆ ಹಲವರು ಆಕಾಂಕ್ಷಿಯಾಗಿದ್ದು, ಪಕ್ಷದ ಮುಖಂಡರಿಗೆ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ. ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿದ ಶಾಸಕ ಅಬ್ಬಯ್ಯ ಪ್ರಸಾದಗೆ ಸಚಿವ ಸ್ಥಾನ ನೀಡುವಂತೆ ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ ನೆರವೇರಿಸಿದರು.

ಈಗಾಗಲೇ ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದಲ್ಲಿ ಸತತ ಮೂರು ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಪ್ರಸಾದ ಅಬ್ಬಯ್ಯಗೆ ಸಚಿವ ಸ್ಥಾನ ನೀಡುವಂತೆ ಬೆಂಬಲಿಗರು ಕಾಂಗ್ರೆಸ್ ಹೈ ಕಮಾಂಡ್ಗೆ ಒತ್ತಾಯಿಸಿದರು. ಈಗಾಗಲೇ ಧಾರವಾಡ ಜಿಲ್ಲೆಯಲ್ಲಿ ಬಹುತೇಕ ಕಡೆಯಲ್ಲಿ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾರ್ಯಕರ್ತರು ಪಟ್ಟುಹಿಡಿದಿದ್ದಾರೆ.
ಧಾರವಾಡ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಈಗ ಜಿಲ್ಲೆಯಲ್ಲಿ ಸಚಿವ ಸ್ಥಾನದ ಜಟಾಪಟಿ ಜೋರಾಗಿದೆ.
2008, 2013 ಹಾಗೂ 2023ರ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿರುವ ಸಂತೋಷ ಲಾಡ್, 2004, 2013 ಹಾಗೂ 2023ರ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ವಿನಯ ಕುಲಕರ್ಣಿ, ಮೂರನೇ ಬಾರಿ ಉತ್ತಮ ಅಂತರದಿಂದ ಹ್ಯಾಟ್ರಿಕ್ ಗೆಲವು ಸಾಧಿಸಿರುವ ಹು-ಧಾ ಪೂರ್ವ ಮೀಸಲು ಕ್ಷೇತ್ರದಿಂದ ಅಬ್ಬಯ್ಯ ಪ್ರಸಾದ ಅವರು ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ.

ಸಂತೋಷ ಲಾಡ್ ಮತ್ತು ವಿನಯ ಕುಲಕರ್ಣಿ 2013-2018ರ ಸಿದ್ದರಾಮಯ್ಯ ಸರ್ಕಾರದಲ್ಲಿ ಮಂತ್ರಿಗಳಾಗಿ ಕೆಲಸ ಮಾಡಿದರು. ಆ ವೇಳೆ ಪ್ರಸಾದ ಅಬ್ಬಯ್ಯ ಎರಡನೇ ಅವಧಿಯಲ್ಲಿ ಗೆದ್ದಿದ್ದರೂ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಇದರಿಂದ ತೀವ್ರ ಅಸಮಾಧಾನಗೊಂಡಿದ್ದ ಅಬ್ಬಯ್ಯ ಪ್ರಸಾದ ಅವರಿಗೆ ಸರ್ಕಾರದ ಅವಧಿಯ ಕೊನೆ ವರ್ಷದಲ್ಲಿ ಜಗಜೀವನರಾಮ್ ನಿಗಮದ ಅಧ್ಯಕ್ಷ ಸ್ಥಾನ ಕೊಟ್ಟು ಸಮಾಧಾನ ಮಾಡಲಾಗಿತ್ತು. ಆದರೆ ಈ ಬಾರಿಯೂ ಉತ್ತಮ ಅಂತರದಿಂದ ಗೆಲುವು ಸಾಧಿಸಿರುವ ಪ್ರಸಾದ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಬೆಂಬಲಿಗರು ಪಟ್ಟು ಹಿಡಿದಿದ್ದಾರೆ.












Click it and Unblock the Notifications