ಮಳೆಗಾಲ; ಜೂನ್ 1ಕ್ಕೆ ಧಾರವಾಡಕ್ಕೆ ಎನ್ಡಿಆರ್ಎಫ್ ತಂಡ
ಧಾರವಾಡ, ಮೇ 26; ನೈಋತ್ಯ ಮುಂಗಾರು ಮಳೆ ಜೂನ್ ಮೊದಲ ವಾರದಿಂದ ಆರಂಭವಾಗುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂಗಾರು ಸಿದ್ಧತೆಗಳ ಕುರಿತು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯರಿ ಸಿಇಓಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ.
ಧಾರವಾಡ ಜಿಲ್ಲಾಡಳಿತ ಸಹ ಮುಂಗಾರು ಎದುರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಜೂನ್ 1ಕ್ಕೆ ಜಿಲ್ಲೆಗೆ ಎನ್ಡಿಆರ್ಎಫ್ ತಂಡ ಆಗಮಿಸಲಿದೆ. ಆಂಧ್ರಪ್ರದೇಶದ ವಿಜಯವಾಡದಿಂದ ಎನ್ಡಿಆರ್ಎಫ್ ತಂಡ ಜಿಲ್ಲೆಗೆ ಆಗಮಿಸುತ್ತಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ. ಹೇಳಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. "ಜಿಲ್ಲೆಯ ಪ್ರಮುಖ ಸ್ಥಳ ಹಾಗೂ ಹಿಂದೆ ಪ್ರವಾಹ ಪೀಡಿತವಾಗಿದ್ದ ಪ್ರದೇಶದಲ್ಲಿ ಪ್ರವಾಹ, ಅತಿವೃಷ್ಟಿ ಸಂದರ್ಭದಲ್ಲಿ ಸುರಕ್ಷತೆ ಮತ್ತು ನಿರ್ವಹಣೆ ಕುರಿತು ಅಣಕು ಪ್ರದರ್ಶನ ಮೂಲಕ ಜನಜಾಗೃತಿಯನ್ನು ತಂಡ ಮೂಡಿಸಲಿದೆ" ಎಂದು ತಿಳಿಸಿದ್ದಾರೆ.
ನೋಡಲ್ ಅಧಿಕಾರಿ ನೇಮಕ; "ಮುಂಗಾರು ಮಳೆ ಆರಂಭವಾಗಿರುವುದರಿಂದ ಹೆಚ್ಚು ಮಳೆ ಆಗಿ ಅತಿವೃಷ್ಟಿ, ಪ್ರವಾಹ ಉಂಟಾದರೆ ಸಮರ್ಥವಾಗಿ ನಿರ್ವಹಿಸಿ, ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಮುಂಜಾಗ್ರತೆ ವಹಿಸಿ, ಕ್ರಮ ಕೈಗೊಳ್ಳಲು ಪ್ರತಿ ತಾಲೂಕಿಗೆ ಓರ್ವ ಹಿರಿಯ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿ, ಅತಿವೃಷ್ಟಿ ನಿರ್ವಹಣೆಗೆ ಮತ್ತು ಸಮರ್ಪಕ ಕಾರ್ಯಾಚರಣೆಗೆ ಕ್ರಮಕೈಗೊಳ್ಳಲಾಗುವುದು" ಎಂದು ಜಿಲ್ಲಾಧಿಕಾರಿ ಹೇಳಿದರು.

"ಕಳೆದ ಐದು ವರ್ಷಗಳಲ್ಲಿ ಅತಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿ, ತೊಂದರೆ ಆಗಿರುವ ಪ್ರದೇಶಗಳನ್ನು ಗುರುತಿಸಿ, ತಹಶೀಲ್ದಾರ್ ಮತ್ತು ಇಓಗಳು ಭೇಟಿ ನೀಡಿ, ಪರಿಶೀಲಿಸಬೇಕು. ಹಾನಿ ಮರುಕಳಿಸದಂತೆ ಈಗಾಲೇ ಅಗತ್ಯ ಕ್ರಮ ವಹಿಸಿ ವರದಿ ಸಲ್ಲಿಸಬೇಕು. ನಗರ ಹಾಗೂ ಗ್ರಾಮ ವ್ಯಾಪ್ತಿಯ ಕೆರೆಗಳನ್ನು ಪರಿಶೀಲಿಸಿ, ಅವುಗಳ ಸುರಕ್ಷತೆ ಖಾತರಿ ಮಾಡಿಕೊಳ್ಳಬೇಕು. ಮಳೆ ನೀರು ಸಂಗ್ರಹ, ಹೆಚ್ಚುವರಿ ನೀರು ಹೊರ ಹಾಕಲು ಸೂಕ್ತ ಮಾರ್ಗ, ಕೆರೆ ಒಡೆಯದಂತೆ ಗಟ್ಟಿಮುಟ್ಟಾಗಿ ಇರುವ ಬಗ್ಗೆ ಆಯಾ ಕೆರೆ ನಿರ್ವಹಣೆ ಜವಾಬ್ದಾರಿ ಇರುವ ಗ್ರಾಮ ಪಂಚಾಯತಿ, ಲೋಕೋಪಯೋಗಿ, ಸಣ್ಣ ನೀರಾವರಿ ಇಲಾಖೆ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಜಿಲ್ಲಾಡಳಿತಕ್ಕೆ ಒಂದು ವಾರದಲ್ಲಿ ವರದಿ ಸಲ್ಲಿಸಬೇಕು" ಎಂದು ನಿರ್ದೇಶನ ನೀಡಿದ್ದಾರೆ.
"ಮಳೆಗಾಲದ ಸಂದರ್ಭದಲ್ಲಿ ಸಾರ್ವಜನಿಕರಿಗೆ ತಕ್ಷಣ ಸ್ಪಂದಿಸಲು ಗ್ರಾಮ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಹಾಯವಾಣಿ ಆರಂಭಿಸಬೇಕು. ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಿ, ನಿರಂತರವಾಗಿ ಸಾರ್ವಜನಿಕರಿಗೆ ಸ್ಪಂದಿಸುವ ವ್ಯವಸ್ಥೆ ಮಾಡಬೇಕು. ಲೋಕೋಪಯೋಗಿ, ಪಂಚಾಯತ್ ರಾಜ್ ಮತ್ತು ಗ್ರಾಮ ಪಂಚಾಯತಿ ರಸ್ತೆಗಳನ್ನು ಪರಿಶೀಲನೆ ಮಾಡಿ ಅಗತ್ಯವಿದ್ದರೆ ತುರ್ತುಕಾಮಗಾರಿಗೆ ಕ್ರಮ ಕೈಗೊಳ್ಳಬೇಕು. ಸೇತುವೆಗಳ ಸುಸ್ಥಿತಿ ಪರಿಶೀಲಿಸಿ ವರದಿ ನೀಡಬೇಕು. ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ತಡೆ, ಅವಘಡಗಳ ನಿರ್ವಹಣೆಗೆ ಪ್ರತ್ಯೇಕ ತಂಡ ರಚಿಸಬೇಕು" ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಆರೋಗ್ಯ ಇಲಾಖೆಗೆ ಸೂಚನೆ; "ಮುಂಗಾರು ಪ್ರಾರಂಭವಾಗುವುದರಿಂದ ಅಲ್ಲಲ್ಲಿ ಮಳೆ ನೀರು ನಿಂತು ಸಾಂಕ್ರಾಮಿಕ ರೋಗಗಳ ಉಂಟಾಗುವ ಸಾಧ್ಯತೆ ಇರುತ್ತದೆ. ಈ ಕುರಿತು ಹಾಗೂ ಮಲೇರಿಯಾ, ಚಿಕನಗುನ್ಯಾ ಸೇರಿದಂತೆ ಇತರ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳ ಕುರಿತು ಜಾಗೃತಿ ಮೂಡಿಸಬೇಕು" ಎಂದು ಜಿಲ್ಲಾ ಆರೋಗ್ಯ ಅಧಿಕಾರಿಗೆ ಜಿಲ್ಲಾಧಿಕಾರಿಗಳು ನಿರ್ದೇಶಿಸಿದರು.
"ಮಳೆಯಿಂದ ಅತಿಯಾದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರಿಗೆ ತೊಂದರೆ ಆಗುತ್ತದೆ. ಈ ಕುರಿತು ಪಾಲಿಕೆ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು. ಚರಂಡಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಪ್ರತಿ ವಾರ್ಡ್ ವಾರು ಸಮಸ್ಯಾತ್ಮಕ ಸ್ಥಳ ಗುರುತಿಸಿ ಕ್ರಮ ವಹಿಸಬೇಕೆಂದು" ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಪಾಲ್ಗೊಂಡಿದ್ದ ಅಪರ ಜಿಲ್ಲಾಧಿಕಾರಿ ಶಿವಾನಂದ್ ಭಜಂತ್ರಿ ಮಾತನಾಡಿ, "ಅತಿವೃಷ್ಟಿ ಉಂಟಾಗಿ ಸಾರ್ವಜನಿಕರಿಗೆ ತೊಂದರೆ ಆದಾಗ ತಕ್ಷಣ ಸ್ಪಂದಿಸಿ, ಬಾಧಿತರಿಗೆ ಆಶ್ರಯ ಕಲ್ಪಿಸಲು ಕಾಳಜಿ ಕೇಂದ್ರ ತೆರೆಯಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮ ಮತ್ತು ನಗರ ಮಟ್ಟದಲ್ಲಿ ಅಗತ್ಯವಿದ್ದರೆ ಕಾಳಜಿ ಕೇಂದ್ರ ತೆರೆಯಲು ಸೂಕ್ತ ಕಟ್ಟಡ ಗುರುತಿಸಿ ಮೂಲ ಸೌಕರ್ಯ ಕಲ್ಪಿಸುವಂತೆ" ತಿಳಿಸಿದರು.
ಬೆಣ್ಣಿಹಳ್ಳ ಹಾಗೂ ದೊಡ್ಡ ಕೆರೆಗಳ ಸುತ್ತಲಿನ ಜನರಿಗೆ ಪ್ರವಾಹದ ಬಗ್ಗೆ ಮಾಹಿತಿ ನೀಡಬೇಕು. ಮನೆ ಹಾನಿ ಪ್ರಕರಣಗಳ ದಾಖಲಾತಿಯಲ್ಲಿ ಅಧಿಕಾರಿಗಳು ಎಚ್ಚರಿಕೆವಹಿಸಿ ವಾಸ್ತವಿಕತೆ ದಾಖಲಿಸಬೇಕು ಎಂದು ಸೂಚನೆ ನೀಡಲಾಯಿತು.












Click it and Unblock the Notifications