‘ನಮ್ಮ ಹೊಲ ನಮ್ಮ ದಾರಿ’ ಯೋಜನೆ : ರಾಜ್ಯಕ್ಕೆ ಧಾರವಾಡ ಮಾದರಿ
ಧಾರವಾಡ, ಮೇ 17 : 'ಹೊಲಗಳಿಂದ ಹಳ್ಳಿಗೆ, ಹಳ್ಳಿಯಿಂದ ಪಟ್ಟಣದ ಮಾರುಕಟ್ಟೆಗೆ ರೈತರು ತಮ್ಮ ಬೆಳೆಗಳನ್ನು ಸಾಗಿಸಲು ಅನುಕೂಲ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ 'ನಮ್ಮ ಹೊಲ ನಮ್ಮ ದಾರಿ' ಎಂಬ ಯೋಜನೆಯಲ್ಲಿ ಕರ್ನಾಟಕದಲ್ಲಿಯೇ ಧಾರವಾಡ ಜಿಲ್ಲೆ ಮಾದರಿಯಾಗಿದೆ.
'ನಮ್ಮ ಹೊಲ ನಮ್ಮ ದಾರಿ'ಯೋಜನೆ ಅಡಿಯಲ್ಲಿ ಜಿಲ್ಲೆಯಲ್ಲಿ ಸುಮಾರು 570 ರಿಂದ 80 ಕಿ.ಮೀ ಹೊಲಗಳ ರಸ್ತೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ಮೂಲಕ ರಾಜ್ಯಕ್ಕೆ ಧಾರವಾಡ ಮಾದರಿಯಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು.
ನಗರದ ಡಾ. ಮಲ್ಲಿಕಾರ್ಜುನ ಮನಸೂರ ಕಲಾಭವನದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್,ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ 'ಜನಮನ' ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು,
ಉದ್ಯೋಗ ಅರಸಿ ಜನ ಗುಳೆ ಹೋಗುವದು ಅನ್ನಭಾಗ್ಯ ಯೋಜನೆಯಿಂದಾಗಿ ನಿಯಂತ್ರಣಕ್ಕೆ ಬಂದಿದೆ. ರಾಜ್ಯ ಸರ್ಕಾರ ಉಚಿತ ಅಕ್ಕಿ ವಿತರಿಸುವ ಮೂಲಕ ಜನರ ಮನಮುಟ್ಟಿದೆ ಎಂದ ಅವರು, ಕ್ಷೀರಧಾರೆ ಯೋಜನೆಯ ಮೂಲಕ ಪ್ರತಿ ಲಿ.ಹಾಲಿಗೆ 5 ರೂ. ಪ್ರೋತ್ಸಾಹ ಧನ ನೀಡುತ್ತಿರುವ ಸರ್ಕಾರ ಪ್ರತಿದಿನ 4 ಕೋಟಿ ರೂ. ಹಣ ರೈತರ ಕೈ ಸೇರುವಂತೆ ಮಾಡುತ್ತಿದೆ ಎಂದರು.