National Youth Festival 2023: ಪ್ರಧಾನಿ ಮೋದಿಆಗಮನ, ರಾಜ್ಯದ ಯುವ ಜನರಿಗೆ ಪ್ರೇರಣೆ: ಸಚಿವ ನಾರಾಯಣಗೌಡ
ಧಾರವಾಡ, ಜ.11: 26ನೇ ರಾಷ್ಟ್ರೀಯ ಯುವ ಜನೋತ್ಸವದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ.
ಧಾರವಾಡದ ಸಕ್ರ್ಯೂಟ್ ಹೌಸ್ನಲ್ಲಿ ಸುದ್ದಿಗೋಷ್ಟಿ ನಡೆಸಿದ ಸಚಿವ ಡಾ.ನಾರಾಯಣಗೌಡ, ಪ್ರಧಾನ ಮಂತ್ರಿ ಆಗಮನ ರಾಜ್ಯದ ಯುವ ಜನತೆಗೆ ದೊಡ್ಡ ಪ್ರೇರಣೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಗುರುವಾರ ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನ ಮೋದಿಯವರ ಜೊತೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಅನುರಾಗ್ ಸಿಂಗ್ ಠಾಕೂರ್, ನಿಶಿತ್ ಪ್ರಮಾಣಿಕ್, ಸಭಾಪತಿ ಬಸವರಾಜ ಹೊರಟ್ಟಿ, ಜಗದೀಶ್ ಶೆಟ್ಟರ್ ಸೇರಿದಂತೆ ವೇದಿಕೆ ಮೇಲೆ 22 ಗಣ್ಯರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಮಾಹಿತಿ ನೀಡಿದ್ದಾರೆ.

ಐದು ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಆಹಾರ ಮೇಳ ಸೇರಿದಂತೆ ಹತ್ತಾರು ಕಾರ್ಯಕ್ರಮ ಆಯೋಜಿಸಲಾಗಿದೆ. ಗುರುವಾರ ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರಿಂದ ಸಂಗೀತ ಸಂಜೆ ಇರಲಿದೆ. ಈಗಾಗಲೇ ದೇಶದ ನಾನಾ ಭಾಗಗಳಿಂದ 6 ಸಾವಿರಕ್ಕೂ ಹೆಚ್ಚು ಜನರು ಆಗಮಿಸಿದ್ದಾರೆ. ನಾಳೆಯ ಕಾರ್ಯಕ್ರಮಕ್ಕೆ 50 ಸಾವಿರ ಜನರು ರಿಜಿಸ್ಟರ್ ಮಾಡಿಸಿದ್ದಾರೆ ಎಂದು ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ.
ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಯಶಸ್ವಿಗೊಳಿಸಿದ್ದಕ್ಕೆ ಮತ್ತೆ ನಮಗೆ ಈ ಅವಕಾಶ ಕೊಟ್ಟಿದ್ದಾರೆ. ರಾಷ್ಟ್ರೀಯ ಯುವ ಜನೋತ್ಸವವನ್ನು ಧಾರವಾಡದಲ್ಲಿ ಆಯೋಜಿಸಿರುವುದು ಖುಷಿ ತಂದಿದೆ. ಮೈದಾನ, ವಸತಿ ವ್ಯವಸ್ಥೆಗೆ ಎಲ್ಲಾ ರೀತಿಯ ವ್ಯವಸ್ಥೆ ಇಲ್ಲಿದೆ. ಇದರಿಂದ ಕಾರ್ಯಕ್ರಮ ಯಶಸ್ವಿಗೊಳಿಸಲು ಅನುಕೂಲ ಆಗಲಿದೆ ಎಂದು ಸಚಿವ ಡಾ.ನಾರಾಯಣಗೌಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಜನವರಿ 15 ರಂದು ರಾಜ್ಯಾದ್ಯಂತ ಯೋಗಥಾನ್ ನಡೆಯಲಿದೆ. ಅಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಯೋಗಥಾನ್ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಠಿ ಬಳಿಕ ಸಚಿವ ಡಾ.ನಾರಾಯಣಗೌಡ, ಕೆಸಿಡಿ ಮೈದಾನಕ್ಕೆ ತೆರಳಿ ಸಾಂಸ್ಕೃತಿಕ ಕಾರ್ಯಕ್ರಮಗಳ ವೇದಿಕೆ, ಫುಡ್ ಕೋರ್ಟ್ ಸೇರಿದಂತೆ ಹಲವು ಸ್ಥಳಗಳಿಗೆ ಭೇಟಿ ನೀಡಿ ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.












Click it and Unblock the Notifications