ಹುಬ್ಬಳ್ಳಿ-ಧಾರವಾಡಕ್ಕೆ ನೂತನ ಪೊಲೀಸ್ ಕಮಿಷನರ್ ನೇಮಕ
ಹುಬ್ಬಳ್ಳಿ, ಜೂನ್, 29: ಕಳೆದ 8 ದಿನಗಳಿಂದ ತೆರವಾಗಿದ್ದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಹುದ್ದೆಗೆ ಪೊಲೀಸ್ ಇಲಾಖೆಯಿಂದ 2011 ಬ್ಯಾಚ್ನ IPS ಅಧಿಕಾರಿಯಾದ ಸಂತೋಷ್ ಬಾಬು ಅವರನ್ನು ತಾತ್ಕಾಲಿಕ ಪ್ರಭಾರಿಯಾಗಿ ನೇಮಕ ಮಾಡಲಾಗಿದೆ.
ರಮನ್ ಗುಪ್ತ ಅವರ ವರ್ಗಾವಣೆ ನಂತರ ಹುಬ್ಬಳ್ಳಿ-ಧಾರವಾಡದ ಪೊಲೀಸ್ ಕಮೀಷನರ್ ಸ್ಥಾನ ತೆರುವಾಗಿ ದಿನಗಳು ಕಳೆದರೂ ರಾಜ್ಯ ಸರ್ಕಾರ ಯಾವೊಬ್ಬ ಅಧಿಕಾರಿಯನ್ನು ಇಲ್ಲಿಗೆ ನಿಯೋಜನೆ ಮಾಡಿರಲಿಲ್ಲ. ಹೀಗಾಗಿ ಕಾನೂನು ಸುವ್ಯವಸ್ಥೆ ಹದಗೆಡುವ ಮುನ್ನವೇ ಇದೀಗ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಆಗಿ ಸಂತೋಷ್ ಬಾಬು ಅವರನ್ನು ತಾತ್ಕಾಲಿಕ ಪ್ರಭಾರಿಯನ್ನಾಗಿ ಮಾಡಿ ಆದೇಶ ಹೊರಡಿಸಿದೆ.

ನೂತನ ಜಿಲ್ಲಾಧಿಕಾರಿ ನೇಮಕ
ಹಾಗೆಯೇ ನಿನ್ನೆ ಚಿಕ್ಕಮಗಳೂರು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಮೀನಾ ನಾಗರಾಜ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದೆ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಕೆ.ಎನ್.ರಮೇಶ್ ಅವರನ್ನು ವರ್ಗಾವಣೆ ಮಾಡಿ ಆದೇಶ ಮಾಡಿದೆ. ಇನ್ನು ನಿನ್ನೆ ನೇಮಕ ಆಗಿರುವ ಮೀನಾ ನಾಗರಾಜ್ ಈ ಹಿಂದೆ ಮಾಹಿತಿ ತಂತ್ರಜ್ಞಾನ ಮತ್ತು ಬಯೋ ಟೆಕ್ನಾಲಜಿ ಸಂಸ್ಥೆ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ. ಮತ್ತೊಂದೆಡೆ ಜಿಲ್ಲಾ ಪಂಚಾಯತ್ ಸಿಇಓ ಜಿ.ಪ್ರಭು ಅವರನ್ನು ತುಮಕೂರು ಜಿಲ್ಲೆಯ ಜಿಲ್ಲಾ ಪಂಚಾಯತ್ ಸಿಇಓ ಆಗಿ ವರ್ಗಾವಣೆ ಮಾಡಲಾಗಿದೆ. ಇನ್ನು ಚಿಕ್ಕಮಗಳೂರು ಜಿ.ಪಂ.ಸಿಇಓ ಹುದ್ದೆಯನ್ನು ಕಾಯ್ದಿರಿಸಲಾಗಿದೆ.

ಚಾಮರಾಜನಗರ ಜಿಲ್ಲಾಧಿಕಾರಿ, ಎಡಿಸಿ ವರ್ಗಾವಣೆ
ಅಲ್ಲದೆ ಚಾಮರಾಜನಗರ ಜಿಲ್ಲಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಯನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಚಾಮರಾಜನಗರ ಜಿಲ್ಲಾಧಿಕಾರಿಯಾಗಿದ್ದ ಡಿ.ಎಸ್.ರಮೇಶ್ ಅವರನ್ನು ತೋಟಗಾರಿಕೆ ಇಲಾಖೆ ನಿರ್ದೇಶಕರನ್ನಾಗಿ ನೇಮಕ ಮಾಡಿದೆ. ಆದರೆ ಜಿಲ್ಲೆಗೆ ಇನ್ನೂ ಜಿಲ್ಲಾಧಿಕಾರಿಯಾಗಿ ಸರ್ಕಾರ ನೇಮಕ ಮಾಡಿಲ್ಲದಿರುವುದು ಅಚ್ಚರಿ ಮೂಡಿಸಿದೆ.
ಚಾಮರಾಜನಗರ ಹೆಚ್ಚುವರಿ ಡಿಸಿ ಹಾಗೂ ಮಲೆಮಹದೇಶ್ಚರ ಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿಯಾಗಿದ್ದ ಕಾತ್ಯಾಯಿನಿದೇವಿ ಅವರನ್ನು ಸ್ಥಳ ತೋರಿಸದೇ ವರ್ಗಾವಣೆ ಮಾಡಲಾಗಿದೆ. ಇನ್ನು ಕೊಳ್ಳೇಗಾಲ ಎಸಿಯಾಗಿ ಬಡ್ತಿ ಹೊಂದಿದ್ದ ಗೀತಾ ಹುಡೇದಾ ಅವರನ್ನು ಎಡಿಸಿ ಹಾಗೂ ಜಿಲ್ಲೆಯ ಪ್ರಾಧಿಕಾರದ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.












Click it and Unblock the Notifications