ಜಯಮೃತ್ಯುಂಜಯ ಶ್ರೀಗಳ ನಡೆಗೆ ವಿರೋಧ: ಪಂಚಮಸಾಲಿಯಲ್ಲಿ ಭಿನ್ನಮತ
ಹುಬ್ಬಳ್ಳಿ, ಏಪ್ರಿಲ್ 05: ಬಿಜೆಪಿಯಿಂದ ಉಚ್ಛಾಟನೆಗೊಂಡ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆನ್ನಿಗೆ ನಿಂತಿದ್ದ ಬಹುದೊಡ್ಡ ಶಕ್ತಿಯೇ ಪಂಚಮಸಾಲಿ ಸ್ವಾಮೀಜಿ ಜಯ ಮೃತ್ಯುಂಜಯ ಶ್ರೀಗಳು. ಆದರೆ ಈಗ ಬಸನಗೌಡ ಪಾಟೀಲ್ ಯತ್ನಾಳ್ ಪರ ಧ್ವನಿ ಎತ್ತಿರುವ ಜಯ ಮೃತ್ಯುಂಜಯ ಸ್ವಾಮೀಜಿಗಳ ನಡೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.
ಪಂಚಮಸಾಲಿ ಸಮುದಾಯದಿಂದಲೇ ಸ್ವಾಮೀಜಿಯ ಈ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿದ್ದು, ಧರ್ಮ, ಧಾರ್ಮಿಕತೆಯ ಬಗ್ಗೆ ಚಿಂತನೆ ನಡೆಸುವುದು ಸ್ವಾಮೀಜಿಗಳ ಜವಾಬ್ದಾರಿ. ಹೀಗಿರುವಾಗ ವ್ಯಕ್ತಿಗತ ಹೋರಾಟಕ್ಕೆ ಸಮುದಾಯ ಹೊಣೆ ಮಾಡುವುದು ಸರಿಯಲ್ಲ ಎಂದು ಪಂಚಮಸಾಲಿ ಮುಖಂಡರು ಸ್ವಾಮೀಜಿಗಳ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ಚಿಂತನ-ಮಂಥನ ಸಭೆಯಲ್ಲಿ ಇಂತಹದೊಂದು ಬೆಳವಣಿಗೆ ನಡೆದಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಜಯ ಮೃತ್ಯುಂಜಯ ಸ್ವಾಮೀಜಿಗೆ ಸಾಕಷ್ಟು ಮುಜುಗರವನ್ನುಂಟು ಮಾಡಿದೆ. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ನಿಂದ ಈ ವಿರೋಧ ವ್ಯಕ್ತವಾಗಿದ್ದು, ಪದೇ ಪದೇ ಯತ್ನಾಳ್ ಪರ ಮಾತಾಡುತ್ತಿರುವ ಶ್ರೀಗಳ ನಡೆಗೆ ಟ್ರಸ್ಟ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ನಡೆದ ಸಭೆಯಲ್ಲಿ ಹುಬ್ಬಳ್ಳಿ, ಧಾರವಾಡ, ಗದಗ ಹಾಗೂ ಕೊಪ್ಪಳದ ಪಂಚಮಸಾಲಿ ಮುಖಂಡರು ಭಾಗಿಯಾಗಿದ್ದು, ಬಿಜೆಪಿಯ ಮಾಜಿ ಶಾಸಕರು, ಕಾಂಗ್ರೆಸ್ನ ಮಾಜಿ ಶಾಸಕರು ಭಾಗವಹಿಸಿ ಸಮುದಾಯವನ್ನು ರಾಜಕೀಯಕ್ಕಾಗಿ ಬಳಸದಂತೆ ಸ್ವಾಮೀಜಿಗಳ ವಿರುದ್ಧ ಅಸಮಾಧಾನ ಹೊರಹಾಕಿದರು.
ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಯ ಮೃತ್ಯುಂಜಯ ಸ್ವಾಮೀಜಿ, ಯತ್ನಾಳ್ ಪರವಾಗಿ ಯಾವುದೇ ರೀತಿಯ ಹೋರಾಟ ಮಾಡಬಾರದು. ವೈಯಕ್ತಿಕ ಹಿತಾಸಕ್ತಿಯಿಂದ ಯತ್ನಾಳ್ ಪರವಾಗಿ ಹೇಳಿಕೆ ಕೊಡುವುದು ಸರಿಯಲ್ಲ. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಇದನ್ನು ಖಂಡಿಸುತ್ತದೆ. ಸ್ವಾಮೀಜಿಗಳು ರಾಜಕೀಯ ಪಕ್ಷಗಳೊಂದಿಗೆ ಗುರುತಿಸಿಕೊಳ್ಳಬಾರದು. ರಾಜಕೀಯದಲ್ಲಿ ಹಸ್ತಕ್ಷೇಪ ಮಾಡುವುದರಿಂದ ರಾಜಕೀಯ ಸ್ವಾಮಿ ಆಗುತ್ತಾರೆ. ಹಾಗಾಗಬಾರದು ಎನ್ನುವ ಉದ್ದೇಶ ನಮ್ಮದು ಎಂದಿದ್ದಾರೆ.
ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದೇನೆ?
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಂದಿಗೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಕಾಣದ ಕೈಗಳು ಅವರನ್ನು ಉಚ್ಛಾಟನೆ ಮಾಡುವಂತೆ ಮಾಡಿವೆ. ಬಿಜೆಪಿ ಪಕ್ಷದ ವರಿಷ್ಠರು ಯತ್ನಾಳ್ ಅವರ ಉಚ್ಛಾಟನೆ ಆದೇಶವನ್ನು ವಾಪಸ್ ಪಡೆಯದೇ ಹೋದರೆ ಲಿಂಗಾಯತ ಸಮುದಾಯದ ಎಲ್ಲಾ ಶಾಸಕರು ಬಿಜೆಪಿ ಬಿಟ್ಟು ಹೊರಬರಬೇಕು ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದರು.












Click it and Unblock the Notifications