ಪೊಲೀಸ್ ಗೌರವದೊಂದಿಗೆ ಕವಿ ಚೆನ್ನವೀರ ಕಣವಿ ಅಂತ್ಯಕ್ರಿಯೆ
ಧಾರವಾಡ, ಫೆಬ್ರವರಿ 17; ಹಿರಿಯ ಕವಿ, ನಾಡೋಜ ಡಾ. ಚೆನ್ನವೀರ ಕಣವಿ ಅಂತ್ಯಕ್ರಿಯೆ ಕೆಲಗೇರಿ ಹತ್ತಿರದಲ್ಲಿರುವ ಅವರ ತೋಟದಲ್ಲಿ ಬಸವತತ್ವ ಹಾಗೂ ವೀರಶೈವ ಲಿಂಗಾಯತ ಪರಂಪರೆಯ ಆಚರಣೆಗಳ ಮೂಲಕ ನಡೆಯಿತು. ಈ ಸಂದರ್ಭದಲ್ಲಿ ಪೊಲೀಸ್ ಗೌರವ ಸಲ್ಲಿಸಲಾಯಿತು.
ಬುಧವಾರ ಬೆಳಗ್ಗೆ ನಾಡೋಜ ಡಾ. ಚೆನ್ನವೀರ ಕಣವಿ ವಿಧಿವಶರಾದರು. ಕಲ್ಯಾಣ ನಗರದ ನಿವಾಸ, ಕರ್ನಾಟಕ ಕಾಲೇಜು ಆವರಣದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಧಾರವಾಡ ಜಿಲ್ಲಾಡಳಿತ ವ್ಯವಸ್ಥೆ ಮಾಡಿತ್ತು. ಸಂಜೆ ಕೆಲಗೇರಿ ಸಮೀಪದ 'ಸೃಷ್ಠಿ' ತೋಟದಲ್ಲಿ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಿತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯದ ಸಚಿವರು, ಶಾಸಕರು, ಗಣ್ಯರು, ಅಂತಿಮದರ್ಶನ ಪಡೆದರು.
ಡಾ. ಚೆನ್ನವೀರ ಕಣವಿ ಪಾರ್ಥಿವ ಶರೀರವನ್ನು ಬುಧವಾರ ಬೆಳಗ್ಗೆ 11 ಗಂಟೆಗೆ ಆಸ್ಪತ್ರೆಯಿಂದ ಕಲ್ಯಾಣ ನಗರದ ಚೆಂಬೆಳಕು ನಿವಾಸಕ್ಕೆ ತೆಗೆದುಕೊಂಡು ಹೋಗಲಾಯಿತು. ಗದುಗಿನ ತೋಂಟದ ಡಾ. ಸಿದ್ಧರಾಮ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಡಾ. ಕಣವಿ ಪುತ್ರರಾದ ಶಿವಾನಂದ, ಚಂದ್ರಮೌಳಿ, ಪ್ರಿಯದರ್ಶಿ, ಕರುಣಪ್ರಸಾದ ಹಾಗೂ ಪುತ್ರಿ ರಂಜನಾ ಗೋದಿ ಮತ್ತು ಇತರ ಕುಟುಂಬದ ಸದಸ್ಯರು, ಬಂಧುಗಳು ಪೂಜೆ ಸಲ್ಲಿಸಿದರು.
ಕರ್ನಾಟಕ ಕಾಲೇಜು ಮುಖ್ಯ ಕಟ್ಟಡದ ಆವರಣದಲ್ಲಿ ಪಾರ್ಥಿವ ಶರೀರದ ಸಾರ್ಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ವಿವಿಧ ಮಠಾಧೀಶರು, ಕರ್ನಾಟಕ ವಿದ್ಯಾವರ್ಧಕ ಸಂಘ, ಕನ್ನಡ ಸಾಹಿತ್ಯ ಪರಿಷತ್ತು, ಉತ್ತರ ಕರ್ನಾಟಕ ಲೇಖಕಿಯರ ಸಂಘ, ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲಾ ಘಟಕ, ವಿವಿಧ ಶಿಕ್ಷಣ ಸಂಸ್ಥೆಗಳು, ಕನ್ನಡ ಪರ ಸಂಘಟನೆಗಳ ಸದಸ್ಯರು ಅಂತಿಮ ನಮನ ಸಲ್ಲಿಸಿದರು.

ಹಲವು ಗಣ್ಯರಿಂದ ಅಂತಿಮ ನಮನ
ಧಾರವಾಡ ಸಂಸದ, ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ, ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆಚಾರ ಹಾಲಪ್ಪ ಬಸಪ್ಪ, ಶಾಸಕ ಅರವಿಂದ ಬೆಲ್ಲದ, ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ, ಕವಿವಿ ಕುಲಪತಿ ಡಾ. ಕೆ. ಬಿ. ಗುಡಸಿ, ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.

ನುಡಿನಮನ ಸಲ್ಲಿಕೆ ಮಾಡಲಾಯಿತು
ಕರ್ನಾಟಕ ಕಾಲೇಜಿನಿಂದ ಬುಧವಾರ ಸಂಜೆ ಹೊತ್ತಿಗೆ ಪಾರ್ಥಿವ ಶರೀರವನ್ನು ಕೆಲಗೇರಿ ಹತ್ತಿರದಲ್ಲಿರುವ ಅವರ ತೋಟ 'ಸೃಷ್ಟಿ'ಗೆ ತರಲಾಯಿತು. ಬಸವತತ್ವ ಹಾಗೂ ವೀರಶೈವ ಲಿಂಗಾಯತ ಪರಂಪರೆಯ ಆಚರಣೆಗಳ ಮೂಲಕ ಅಂತ್ಯಸಂಸ್ಕಾರ ನಡೆಯಿತು. ಹಲವಾರು ಗಣ್ಯರು ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.
ಅಂತ್ಯಕ್ರಿಯೆ ಸ್ಥಳದಲ್ಲಿ ಸಚಿವ ಪ್ರಹ್ಲಾದ್ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಆಚಾರ ಹಾಲಪ್ಪ ಬಸಪ್ಪ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ ಜೋಶಿ, ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಸಾಹಿತಿ ಅಲ್ಲಮಪ್ರಭು ಬೆಟ್ಟದೂರ ನುಡಿನಮನ ಸಲ್ಲಿಸಿದರು.

ಕನ್ನಡದಲ್ಲಿ ಪೊಲೀಸ್ ಕವಾಯತು ಗೌರವ
ಡಾ. ಚೆನ್ನವೀರ ಕಣವಿ ಅಂತ್ಯಕ್ರಿಯೆಗೂ ಮುನ್ನ ಪೊಲೀಸ್ ಗೌರವ ಸಲ್ಲಿಕೆ ಮಾಡಲಾಯಿತು. ಪಾರ್ಥಿವ ಶರೀರಕ್ಕೆ ಗೌರವ ರಕ್ಷೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ ನೇತೃತ್ವದಲ್ಲಿ ಸಲ್ಲಿಸಲಾಯಿತು. ಕನ್ನಡದಲ್ಲಿ ಕವಾಯತು ಆಜ್ಞೆಗಳನ್ನು ನೀಡಿ ಪೊಲೀಸ್ ಗೌರವ ಸಲ್ಲಿಸಿ, ಗಾಳಿಯಲ್ಲಿ 3 ಸುತ್ತು ಕುಶಾಲತೋಪು ಸಿಡಿಸಿ ಪೊಲೀಸರು ಗೌರವ ಅರ್ಪಿಸಿದರು.

ಜಿಲ್ಲಾಧಿಕಾರಿಗಳ ಸಂತಾಪ
"ಕನ್ನಡ ನಾಡು ಕಂಡ ಸಮನ್ವಯ ಕವಿ, ವಿದ್ವಾಂಸರಾದ ಚೆನ್ನವೀರ ಕಣವಿ ಅವರು ಇಡೀ ಕರ್ನಾಟಕದಾದ್ಯಂತ ಓದುಗರು, ಅಭಿಮಾನಿಗಳನ್ನು ಹೊಂದಿದ್ದರು. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ" ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಂತಾಪ ಸೂಚಿಸಿದ್ದಾರೆ.












Click it and Unblock the Notifications