ಧಾರವಾಡ ಕಟ್ಟಡ ಕುಸಿತಕ್ಕೆ ಕಳಪೆ ಕಾಮಗಾರಿಯೇ ಕಾರಣವೆಂದ ಶಾಸಕ ಪ್ರಸಾದ್ ಅಬ್ಬಯ್ಯ
ಧಾರವಾಡ, ಮಾರ್ಚ್ 20: ನಿರ್ಮಾಣ ಹಂತದ ಕಟ್ಟಡ ಕುಸಿದ ಸ್ಥಳಕ್ಕೆ ಸಚಿವ ಸಿ.ಎಸ್.ಶಿವಳ್ಳಿ, ಶಾಸಕ ಪ್ರಸಾದ್ ಅಬ್ಬಯ್ಯ, ಮಾಜಿ ಶಾಸಕರಾದ ಎನ್.ಹೆಚ್.ಕೋನರೆಡ್ಡಿ ಹಾಗೂ ವಿನಯ್ ಕುಲಕರ್ಣಿ ಭೇಟಿ ನೀಡಿ ರಕ್ಷಣಾ ಕಾರ್ಯ ಪರಿಶೀಲಿಸಿದರು.
ಬಳಿಕ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರವ ಗಾಯಾಳುಗಳನ್ನು ಸಚಿವ ಸಿ.ಎಸ್.ಶಿವಳ್ಳಿ ಹಾಗೂ ಮಾಜಿ ಶಾಸಕ ಕೋನರೆಡ್ಡಿ ಭೇಟಿ ಮಾಡಿ, ಅವರ ಆರೋಗ್ಯ ವಿಚಾರಿಸಿದರು.
ಇದು ಧಾರವಾಡದಲ್ಲಿ ನಡೆದ ಘೋರ ದುರಂತ. ಹಲವರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಕಳಪೆ ಕಟ್ಟಡ ಕಾಮಗಾರಿಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಶಿವಳ್ಳಿ ಹೇಳಿದರು.

ಹುಬ್ಬಳ್ಳಿ ಧಾರವಾಡದಲ್ಲಿ ಭೀಕರ ಅವಘಡ ಸಂಭವಿಸಿದೆ. ಈ ಕಟ್ಟಡದಲ್ಲಿ ನಮ್ಮ ಸಂಬಂಧಿಯೊಬ್ಬರು ಪಾಲುದಾರರಿದ್ದಾರೆ. ತಪ್ಪಿತಸ್ಥರು ಯಾರೇ ಇದ್ದರೂ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಶಾಸಕ ವಿನಯ್ ಕುಲಕರ್ಣಿ ತಿಳಿಸಿದರು. ಇದೇ ವೇಳೆ ಶಾಸಕ ಪ್ರಸಾದ್ ಅಬ್ಬಯ್ಯ ಮಾತನಾಡಿ, ಕಳಪೆ ಕಟ್ಟಡ ಕಾಮಗಾರಿಯೇ ದುರಂತಕ್ಕೆ ಕಾರಣ ಎಂದರು.
ಚಿತ್ರಗಳು: ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ, ಭಾರೀ ಅನಾಹುತ
ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಮಾತನಾಡಿ, ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದು, 28 ಜನರ ರಕ್ಷಣೆ ಮಾಡಲಾಗಿದೆ. ಎನ್ಡಿಆರ್ ಎಫ್ ಟೀಮ್ ರಾತ್ರಿ 11 ಗಂಟೆಗೆ ನಗರಕ್ಕೆ ಆಗಮಿಸಲಿದೆ.ಅವಶೇಷಗಳಡಿ ಸಿಲುಕಿರುವವರ ರಕ್ಷಣೆಗೆ ಎಲ್ಲ ಪ್ರಯತ್ನ ಮಾಡಲಾಗುತ್ತಿದೆ. ಸುಮಾರು 35 ಜನರು ಕಟ್ಟಡದ ಕೆಳಗೆ ಸಿಲುಕಿರಬಹುದು. ಕಳಪೆ ಕಾಮಗಾರಿಯಿಂದ ಕಟ್ಟಡ ಕುಸಿದಿದೆ. ಘಟನೆಯ ಕುರಿತು ತನಿಖೆಗೆ ವಿಶೇಷ ತಂಡ ರಚಿಸಲಾಗುವುದು ಎಂದು ಮಾಹಿತಿ ನೀಡಿದರು.
ಘಟನಾ ಸ್ಥಳದಲ್ಲಿ ಮೂರು ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ. ಕಲಂ 144ರ ಅಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕಟ್ಟಡದ ಕೆಳಗೆ ಎಲ್ಲೆಲ್ಲಿ ಧ್ವನಿ ಕೇಳಿಸುತ್ತಿದೆ, ಅಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ. ಎನ್ಡಿಆರ್ ಎಫ್ ಬಂದ ತಕ್ಷಣ ಕಾರ್ಯಾಚರಣೆ ಮತ್ತಷ್ಟು ತೀವ್ರಗೊಳ್ಳಲಿದೆ. ಅವಶೇಷಗಳನ್ನು ಸಂಪೂರ್ಣ ತೆರವು ಮಾಡುವವರೆಗೆ ಕಾರ್ಯಾಚರಣೆ ನಿರಂತರವಾಗಿ ನಡೆಯಲಿದೆ. ನಂತರ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತ ಎಮ್.ಎನ್. ನಾಗರಾಜ್ ಹೇಳಿದ್ದಾರೆ.












Click it and Unblock the Notifications