ಧಾರವಾಡದಲ್ಲಿ ಪ್ರಹ್ಲಾದ್ ಜೋಶಿ, ಮುತಾಲಿಕ್ ಹಣಾಹಣಿ

ಧಾರವಾಡದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಮೋದ್ ಮುತಾಲಿಕ್, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರ ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಯಾವುದೇ ಒತ್ತಡಕ್ಕೆ ಮಣಿದು ಕ್ಷೇತ್ರವನ್ನು ಬದಲಾವಣೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
ಶ್ರೀರಾಮ ಸೇನೆ ಕೆಲವು ಕ್ಷೇತ್ರಗಳಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಬಯಸಿತ್ತು. ಆದರೆ, ಸೇನೆಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವುದಾಗಿ ಮೊದಲು ಹೇಳಿದ್ದ ಬಿಜೆಪಿ ನಂತರ ತನ್ನ ಮಾತು ಮರೆತಿತ್ತು. ಆದ್ದರಿಂದ ಬಿಜೆಪಿ ನಾಯಕರಿಗೆ ಪಾಠ ಕಲಿಸಲು. ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಟಿ ಅವರ ವಿರುದ್ಧ ಸ್ಪರ್ಧಿಸಲು ಮುತಾಲಿಕ್ ನಿರ್ಧರಿಸಿದ್ದಾರೆ.
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ಶ್ರೀರಾಮ ಸೇನೆ ಸಂಪೂರ್ಣ ಬೆಂಬಲ ನೀಡುತ್ತದೆ. ಆದ್ದರಿಂದ ಚುನಾವಣೆಗೆ ಸ್ಪರ್ಧಿಸಲು ಸೇನೆ ತೀರ್ಮಾನಿಸಿದೆ. ಬಿಜೆಪಿ ಟಿಕೆಟ್ ನೀಡದಿದ್ದರೂ, ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆ ಎಂದು ಕೆಲವು ದಿನಗಳ ಹಿಂದೆ ಮುತಾಲಿಕ್ ಹೇಳಿದ್ದರು. ಸದ್ಯದ ಮಾಹಿತಿಯಂತೆ ಚಿಕ್ಕಮಗಳೂರು, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಹಾವೇರಿ, ಧಾರವಾಡ ಕ್ಷೇತ್ರಗಳಲ್ಲಿ ಸೇನೆಯ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.
ಸೇನೆಯ ಹೋರಾಟದ ಕುರಿತಾಗಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ಇ-ಮೇಲ್ ಕಳಿಸಿ ಮಾಹಿತಿ ನೀಡಿದ್ದೇನೆ. ಸುಮಾರು 10 ಲಕ್ಷದಷ್ಟು ಜನಸಂಖ್ಯೆ ಇರುವ ಹುಬ್ಬಳ್ಳಿ-ಧಾರವಾಡದಲ್ಲಿ ತಮಗೆ ಹೆಚ್ಚಿನ ನಂಟಿದೆ. ಆದ್ದರಿಂದ ಈ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಿರುವುದಾಗಿ ಮುತಾಲಿಕ್ ಹೇಳಿದ್ದಾರೆ. ಯಾವುದೇ ಒತ್ತಡ ಬಂದರೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. (ಆರು ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧೆ : ಮುತಾಲಿಕ್)












Click it and Unblock the Notifications