ಜೋಶಿ ವಿರುದ್ಧ ಸ್ಪರ್ಧಿಸದಂತೆ ಮುತಾಲಿಕ್ ಗೆ ಬೆದರಿಕೆ
ಹುಬ್ಬಳ್ಳಿ, ಜ.10 : ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ವಿರುದ್ಧ ಸ್ಪರ್ಧಿಸದಂತೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಬೆದರಿಕೆ ಪತ್ರವೊಂದು ಬಂದಿದೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಮೋದ್ ಮುತಾಲಿಕ್ ದೂರು ನೀಡಿದ್ದಾರೆ.
ನರೇಂದ್ರ ಮೋದಿ ಅವರಿಗೆ ಬೆಂಬಲ ನೀಡುವ ಉದ್ದೇಶದಿಂದ ಶ್ರೀರಾಮ ಸೇನೆ ರಾಜ್ಯದ 6 ಕ್ಷೇತ್ರಗಳಲ್ಲಿ ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಈಗಾಗಲೇ ಘೋಷಿಸಿದ್ದಾರೆ. ತಾವು ಸಹ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಧಾರವಾಡ ಕ್ಷೇತ್ರದಿಂದ ಕಣಕ್ಕೆ ಇಳಿಯುವ ಸಾಧ್ಯತೆ ಇದೆ ಎಂದು ಮುತಾಲಿಕ್ ಹೇಳಿದ್ದರು.

ಧಾರವಾಡದಲ್ಲಿ ಹಾಲಿ ಸಂಸದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಪ್ರಮೋದ್ ಮುತಾಲಿಕ್ ಸಹ ಈ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಇದನ್ನು ತಿಳಿದ ಕಿಡಿಗೇಡಿಗಳು ಮುತಾಲಿಕ್ ಅವರಿಗೆ ಬೆದರಿಕೆ ಪತ್ರ ಬರೆದಿದ್ದು, ಚುನಾವಣೆಗೆ ಸ್ಪರ್ಧಿಸಿದರೆ ನಿಮ್ಮನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. [ಪ್ರಹ್ಲಾದ್ ಜೋಶಿ, ಮುತಾಲಿಕ್ ಹಣಾಹಣಿ]
ನೀವು ಸಂಘಟನೆ, ಹೋರಾಟ ಮುಂತಾದವ ಕಾರ್ಯಗಳನ್ನು ಮಾತ್ರ ಮಾಡಬೇಕು. ಲೋಕಸಭೆ ಚುನಾವಣೆಯಲ್ಲಿ ಪ್ರಹ್ಲಾದ್ ಜೋಶಿ ವಿರುದ್ಧ ಸ್ಪರ್ಧಿಸಬಾರದು ಎಂದು ಪತ್ರದಲ್ಲಿ ಎಚ್ಚರಿಕೆ ನೀಡಲಾಗಿದೆ. ಸದ್ಯ ಮುತಾಲಿಕ್ ಈ ಪತ್ರದೊಂದಿಗೆ ಹುಬ್ಬಳ್ಳಿಯ ವಿದ್ಯಾನಗರ ಠಾಣೆಗೆ ದೂರು ನೀಡಿದ್ದಾರೆ.
ಬೆದರಿಕೆಗೆ ಬಗ್ಗಲ್ಲ : ಬೆದರಿಕೆ ಪತ್ರ ಬಂದಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಪ್ರಮೋದ್ ಮುತಾಲಿಕ್ ತಾವು ಯಾವುದೇ ಬೆದರಿಕೆಗೆ ಬಗ್ಗುವುದಿಲ್ಲ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಮತ್ತು ಸೇನೆಯ ಕಾರ್ಯಕರ್ತರು ಕೆಲವು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದೆ. ಆದರೆ, ಕ್ಷೇತ್ರದ ಕುರಿತು ಅಂತಿಮ ತೀರ್ಮಾನ ಕೈಗೊಂಡಿಲ್ಲ. ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆಯೂ ಚಿಂತನೆ ನಡೆಸಿದ್ದೇನೆ ಎಂದು ಮುತಾಲಿಕ್ ಹೇಳಿದರು. ಸಂಘಟನೆ ಕಟ್ಟುವ ಸಮಯದಲ್ಲಿ ಹಲವಾರು ಬೆದರಿಕೆ ಎದುರಿಸಿದ್ದೇವೆ. ಇಂತಹ ಪತ್ರಗಳಿಗೆ ಆತಂಕಗೊಳ್ಳದೆ ಹೋರಾಟ ಮುಂದುವರೆಸುತ್ತೇನೆ ಎಂದು ಹೇಳಿದ್ದಾರೆ.












Click it and Unblock the Notifications