ಧಾರವಾಡ : ಪ್ರವಾಹದ ನೀರು ಇಳಿಮುಖ, ರೋಗದ ಭೀತಿ
ಧಾರವಾಡ, ಆಗಸ್ಟ್ 12 : ಸತತ ಎಂಟು ದಿನಗಳಿಂದ ಸುರಿಯುತ್ತಿದ್ದ ಮಳೆ ಧಾರವಾಡದಲ್ಲಿ ಈಗ ಕಡಿಮೆಯಾಗಿದೆ. ಪ್ರವಾಹದ ನೀರು ಇಳಿಮುಖವಾದ ಬಳಿಕ ಸಾಂಕ್ರಮಿಕ ರೋಗದ ಆತಂಕ ಎದುರಾಗಿದ್ದು, ಸ್ವಚ್ಛತಾ ಕಾರ್ಯವೂ ನಡೆಯುತ್ತಿದೆ.
ಧಾರವಾಡದಲ್ಲಿ ಸುರಿದ ಮಳೆಯಿಂದ ಹುಬ್ಬಳ್ಳಿ-ಧಾರವಾಡ ಅವಳಿ ನಗರದ ನಾಲೆ, ರಸ್ತೆಗಳು , ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಪ್ರವಾಹ ಸಂತ್ರಸ್ತ ಜನರಿಗೆ ಸ್ಪಂದಿಸಲು ಅವಳಿನಗರದ 16 ಕಡೆಗಳಲ್ಲಿ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿತ್ತು.
ಮಹಾನಗರ ಪಾಲಿಕೆಯ 60 ಆರೋಗ್ಯ ಮತ್ತು ನೈರ್ಮಲ್ಯ ನಿರೀಕ್ಷಕರು, 2336 ಪೌರ ಕಾರ್ಮಿಕರು ಕಳೆದ ಎಂಟು ದಿನಗಳಿಂದ ತಮ್ಮ ಸಾಮರ್ಥ್ಯ ಮೀರಿ ಕೆಲಸ ಮಾಡುತ್ತಿದ್ದಾರೆ. ತಗ್ಗು ಪ್ರದೇಶಗಳನ್ನು ಸ್ವಚ್ಛಗೊಳೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಈಗ ಮಳೆ ನೀರು ಇಳಿದ ಬಳಿಕ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಇದೆ. ಆದ್ದರಿಂದ, ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅರಿವು ಮೂಡಿಸಲಾಗುತ್ತಿದೆ. ನಿಂತ ನೀರನ್ನು ಹರಿದು ಹೋಗುವಂತೆ ಮಾಡಬೇಕು, ನಿದ್ರೆಯ ಸಮಯದಲ್ಲಿ ಸೊಳ್ಳೆ ಪರದೆಗಳನ್ನು ಬಳಸಬೇಕು ಎಂದು ಮನವಿ ಮಾಡಲಾಗುತ್ತಿದೆ.

ಅತಿವೃಷ್ಠಿಯಿಂದ ಜಿಲ್ಲೆಯಲ್ಲಿ ಸಾವಿಗೀಡಾದವರ ಸಂಖ್ಯೆ 4. 187 ಜಾನುವಾರುಗಳು ಸಹ ಮೃತಪಟ್ಟಿವೆ. 7931 ಮನೆಗಳಿಗೆ ಹಾನಿಯಾಗಿದೆ. ಸುಮಾರು 94 ಪರಿಹಾರ ಕೇಂದ್ರಗಳಲ್ಲಿ 23 ಸಾವಿರಕ್ಕೂ ಅಧಿಕ ಜನರಿಗೆ ಆಶ್ರಯ ಒದಗಿಸಲಾಗಿದೆ.
"ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತಲೆದೋರಿರುವ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ" ಎಂದು ಧಾರವಾಡ ಸಂಸದ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
"ಹುಬ್ಬಳ್ಳಿಯಲ್ಲಿ ರಾಜಕಾಲುವೆ ಮೇಲೆ ಅಕ್ರಮವಾಗಿ ನಿರ್ಮಿಸಿರುವ ಮನೆ ಹಾಗೂ ಅಪಾರ್ಟ್ಮೆಂಟ್ ತೆರವುಗೊಳಿಸಬೇಕು. ನಿಯಮ ಉಲಂಘಿಸಿ ಕಟ್ಟಡ ನಿರ್ಮಾಣಕ್ಕೆ ಪರವಾನಿಗೆ ನೀಡಿರುವ ಪಾಲಿಕೆ ಅಧಿಕಾರಿಗಳ ವಿರುದ್ದ ಕ್ರಿಮನಲ್ ಮೊಕದ್ದಮೆ ದಾಖಲಿಸಬೇಕು ಎಂದು" ಮಹಾನಗರ ಪಾಲಿಕೆ ಆಯುಕ್ತರಿಗೆ ಪ್ರಹ್ಲಾದ್ ಜೋಶಿ ಸೂಚನೆ ನೀಡಿದ್ದಾರೆ.












Click it and Unblock the Notifications