ಶೀಘ್ರದಲ್ಲೇ 8 ಸಾವಿರ ಪೊಲೀಸರ ನೇಮಕಾತಿ : ಪರಂ
ಧಾರವಾಡ, ಜನವರಿ 06 : 'ಪೊಲೀಸ್ ಇಲಾಖೆಗೆ 8000 ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿದ್ದು, ಮುಂದಿನವಾರ ಅಧಿಸೂಚನೆ ಹೊರಡಿಸಲಾಗುತ್ತದೆ. ಒಂಭತ್ತು ತಿಂಗಳಿನಲ್ಲಿ ಈ ಸಿಬ್ಬಂದಿಗಳು ತರಬೇತಿ ಪೂರ್ಣಗೊಳಿಸಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ' ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.
ಧಾರವಾಡದಲ್ಲಿ ಮಂಗಳವಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾತನಾಡಿದ ಗೃಹ ಸಚಿವರು, 'ಫೆಬ್ರವರಿಯಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಎದುರಾಗುವ ಸಾಧ್ಯತೆ ಇದೆ. ಆದ್ದರಿಂದ, ಮುಂದಿನ ವಾರ ನೇಮಕಾತಿ ಅಧಿಸೂಚನೆ ಹೊರಡಿಸಲಾಗುತ್ತದೆ' ಎಂದರು. [ಗೃಹ ಸಚಿವ ಪರಮೇಶ್ವರಗೆ ಕಡ್ಲೆಪುರಿ ಪಾರ್ಸಲ್!]
'ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ನೀಗಿಸಲು ಮೊದಲ ಹಂತದಲ್ಲಿ 8000 ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಇವರಲ್ಲಿ 450 ಸಬ್ ಇನ್ಸ್ಪೆಕ್ಟರ್ಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಹೈದರಾಬಾದ್ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೂ ಆದ್ಯತೆ ನೀಡಲಾಗುತ್ತದೆ' ಎಂದು ಪರಮೇಶ್ವರ ಅವರು ಹೇಳಿದರು.
ಪ್ರಕರಣ ಕೈ ಬಿಟ್ಟಿರುವುದು ವದಂತಿ : 'ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಮೇಲಿನ ಯಾವುದೇ ಪ್ರಕರಣವನ್ನು ಸರ್ಕಾರ ಕೈ ಬಿಟ್ಟಿಲ್ಲ. ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಪ್ರಕರಣ ಕೈ ಬಿಟ್ಟಿದ್ದೇವೆ ಎಂಬುದು ವದಂತಿ' ಎಂದು ಪರಮೇಶ್ವರ ಅವರು ಸ್ಪಷ್ಟಪಡಿಸಿದರು.
ಪ್ರಗತಿ ಪರಿಶೀಲನೆ ನಡೆಸಿದ ಸಿಎಂ
ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಮಂಗಳವಾರ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತಕ ಕಚೇರಿಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್, ಗೃಹ ಸಚಿವರ ಸಲಹೆಗಾರರಾದ ಕೆಂಪಯ್ಯ, ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಮೋಹನ್ ಮುಂತಾದವರು ಉಪಸ್ಥಿತರಿದ್ದರು.
'8000 ಸಿಬ್ಬಂದಿ ನೇಮಕ'
ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ ಪರಮೇಶ್ವರ ಅವರು, 'ಪೊಲೀಸ್ ಇಲಾಖೆಗೆ 8000 ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. 450 ಸಬ್ ಇನ್ಸ್ಪೆಕ್ಟರ್ ಸೇರಿ 8000 ಸಿಬ್ಬಂದಿ ನೇಮಕಕ್ಕೆ ಮುಂದಿನ ವಾರ ಅಧಿಸೂಚನೆ ಹೊರಡಿಸಲಾಗುತ್ತದೆ. ಒಂಭತ್ತು ತಿಂಗಳಿನಲ್ಲಿ ಈ ಸಿಬ್ಬಂದಿಗಳು ತರಬೇತಿ ಪೂರ್ಣಗೊಳಿಸಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ' ಎಂದು ಹೇಳಿದರು.
'ಶೀಘ್ರವೇ ಆರೋಪಿಗಳನ್ನು ಬಂಧಿಸುತ್ತೇವೆ'
'ಹಿರಿಯ ಸಂಶೋಧಕ ಎಂ.ಎಂ.ಕಲಬುರ್ಗಿ ಅವರ ಹತ್ಯೆಯ ಕುರಿತು ಸಾಕಷ್ಟು ಸುಳಿವುಗಳು ದೊರೆತಿವೆ. ಶೀಘ್ರದಲ್ಲೇ ಹಂತಕರನ್ನು ಬಂಧಿಸಲಾಗುತ್ತದೆ' ಎಂದು ಪರಮೇಶ್ವರ ಅವರು ತಿಳಿಸಿದರು. 'ಈ ಹತ್ಯೆ ಇಲಾಖೆಗೆ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಹಂತಕರನ್ನು ಪತ್ತೆ ಹಚ್ಚುವಲ್ಲಿ ಇಲಾಖೆ ಹಿಂದೆ ಬಿದ್ದಿಲ್ಲ' ಎಂದು ಸಚಿವರು ಸ್ಪಷ್ಟಪಡಿಸಿದರು.
'ಯಾವುದೇ ಪ್ರಕರಣವನ್ನು ಸರ್ಕಾರ ಕೈ ಬಿಟ್ಟಿಲ್ಲ'
'ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರ ಮೇಲಿನ ಯಾವುದೇ ಪ್ರಕರಣವನ್ನು ಸರ್ಕಾರ ಕೈ ಬಿಟ್ಟಿಲ್ಲ. ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಪ್ರಕರಣ ಕೈ ಬಿಟ್ಟಿದ್ದೇವೆ ಎಂಬುದು ವದಂತಿ' ಎಂದು ಪರಮೇಶ್ವರ ಅವರು ಸ್ಪಷ್ಟಪಡಿಸಿದರು.
ಜೋಶಿಗೆ ತಿರುಗೇಟು ನೀಡಿದ ಪರಮೇಶ್ವರ
ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿಗೆ ಸರ್ಕಾರ ಹಣಕಾಸಿನ ನೆರವು ನೀಡುತ್ತಿಲ್ಲ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರ ಆರೋಪವನ್ನು ಪರಮೇಶ್ವರ ಅವರು ತಳ್ಳಿಹಾಕಿದರು. 'ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ದಾಬೋಲ್ಕರ್, ಪನ್ಸಾರೆ ಅವರ ಹತ್ಯೆ ಪ್ರಕರಣದ ತನಿಖೆಗಿಂತ ಹೆಚ್ಚಿನ ಮಾಹಿತಿಯನ್ನು ಸಂಗ್ರಹಣೆ ಮಾಡಲಾಗಿದೆ' ಎಂದು ಪರಮೇಶ್ವರ ಅವರು ಹೇಳಿದರು.