ಧಾರವಾಡದಲ್ಲಿ ರಸ್ತೆ ಅಪಘಾತ; ವರದಿ ಕೇಳಿದ ಸುಪ್ರೀಂಕೋರ್ಟ್
ಧಾರವಾಡ, ಜನವರಿ 25: ಧಾರವಾಡ ತಾಲೂಕಿನ ಇಟಿಗಟ್ಟಿ ಬಳಿ ಜನವರಿ 15ರ ಶುಕ್ರವಾರ ಮುಂಜಾನೆ ಟ್ರಕ್ ಮತ್ತು ಟೆಂಪೋ ಟ್ರಾವೆಲರ್ ಮುಖಾಮುಖಿ ಡಿಕ್ಕಿಯಾಗಿ 13 ಜನರು ಮೃತಪಟ್ಟಿದ್ದಾರೆ. ಈ ಅಪಘಾತದ ಬಳಿಕ ರಸ್ತೆ ಸುರಕ್ಷತೆ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಸುಪ್ರೀಂಕೋರ್ಟ್ನ ರಸ್ತೆ ಸುರಕ್ಷತಾ ಸಮಿತಿ ಈ ಅಪಘಾತದ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಿದೆ. ಫೆಬ್ರವರಿ 15ರೊಳಗೆ ವರದಿ ಸಲ್ಲಿಸುವಂತೆ ರಾಜ್ಯದ ಸಾರಿಗೆ ಇಲಾಖೆ ಪ್ರಿನ್ಸಿಪಲ್ ಸೆಕ್ರೆಟರಿ, ಅವರಿಗೆ ನಿರ್ದೇಶನ ನೀಡಿದೆ.
ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯ 32 ಕಿ. ಮೀ. ವ್ಯಾಪ್ತಿಯಲ್ಲಿ ಕಳೆದ ಎರಡು ವರ್ಷಗಳಿಂದ ನಡೆದ ಅಪಘಾತದ ಸಂಖ್ಯೆಗಳನ್ನು ಗಮನಿಸಿದ ಸುಪ್ರೀಂಕೋರ್ಟ್ ಈ ಬಗ್ಗೆ ವರದಿ ನೀಡುವಂತೆ ಸೂಚನೆ ಕೊಟ್ಟಿದೆ.

ಜನವರಿ 15ರಂದು ನಡೆದ ಅಪಘಾತದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಜನರು ಹಲವು ಪೋಸ್ಟ್ಗಳನ್ನು ಹಾಕಿದ್ದರು. ಧಾರವಾಡ ಜಿಲ್ಲಾಡಳಿತ ರಸ್ತೆ ಸುರಕ್ಷತೆಗಾಗಿ ಯಾವ ಕ್ರಮ ಕೈಗೊಂಡಿದೆ? ಎಂದು ಪ್ರಶ್ನಿಸಿದ್ದರು.
ಧಾರವಾಡ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷರೂ ಆಗಿರುವ ನಿತೇಶ ಪಾಟೀಲ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. "ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಇರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿನ 30 ಕಿ.ಮೀ. ರಸ್ತೆಯಲ್ಲಿನ ಅಪಘಾತಗಳನ್ನು ತಪ್ಪಿಸಲು ಸಂಚಾರಿ ನಿಯಮಗಳ ಪಾಲನೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು" ಎಂದು ಸೂಚನೆ ಕೊಟ್ಟಿದ್ದರು.
ಪ್ರತಿ ಕಿ. ಮೀ. ಗೆ 60 ವೇಗದ ಮಿತಿ ಇದ್ದರೂ ಬಸ್, ಟ್ರಕ್, ಮಿನಿಬಸ್, ಕಾರು ಮುಂತಾದ ವಾಹನಗಳ ಚಾಲಕರು ನಿಯಮ ಪಾಲಿಸದೇ ವೇಗವಾಗಿ ವಾಹನ ಚಾಲನೆ, ವಾಹನಗಳ ಓವರ್ ಟೇಕ್ ಮಾಡುತ್ತಿರುವುದರಿಂದ ಹೆಚ್ಚಿನ ಪ್ರಮಾಣದ ಅಪಘಾತ ನಡೆಯುತ್ತಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿತ್ತು.
ಹುಬ್ಬಳ್ಳಿ-ಧಾರವಾಡ ಬೈಪಾಸ್ನ 30 ಕಿ. ಮೀ. ರಸ್ತೆ ಪರಿಶೀಲಿಸಿ ಅಪಾಯಕಾರಿ ಸ್ಥಳ, ಸೇತುವೆ ತಿರುವು ಗುರುತಿಸಿ ಅಲ್ಲಿ ಕನಿಷ್ಠ 20 ಎಚ್ಚರಿಕೆ ಫಲಕ, ವೇಗದ ಮೀತಿ ಸೂಚಿಸುವ ಮತ್ತು ಸುರಕ್ಷತಾ ನಿಯಮಗಳ ಫಲಕಗಳನ್ನು ಅಳವಡಿಸಲು ಸೂಚನೆ ನೀಡಲಾಗಿತ್ತು.












Click it and Unblock the Notifications