ಎಸ್ಡಿಎಂ ಸಂಸ್ಥೆಯ ಉಪಾಧ್ಯಕ್ಷ ಡಾ. ವಜ್ರಕುಮಾರ್ ನಿಧನ
ಧಾರವಾಡ, ಸೆಪ್ಟೆಂಬರ್ 2: ಪ್ರತಿಷ್ಠಿತ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಾ.ನ.ವಜ್ರಕುಮಾರ ಅವರು ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ.
ಕೊಕ್ಕರ್ಣೆ ಅರಮನೆಯ ಭೋಜರಾಜಯ್ಯ ಹಾಗೂ ಕುತ್ಯಾರು ಅರಮನೆಗೆ ಸೇರಿದ ಚಂದ್ರಮತಿ ಅಮ್ಮನವರ ದ್ವಿತೀಯ ಪುತ್ರರಾಗಿ ಮೇ 29,2939ರಂದು ಉಡುಪಿ ಜಿಲ್ಲೆಯ ನಂದಿಕೂರನಲ್ಲಿ ಅವರು ಜನಿಸಿದರು.
ಉನ್ನತ ಶಿಕ್ಷಣ ಅರ್ಥಶಾಸ್ತ್ರದಲ್ಲಿ ಎಂಎ ಮುಗಿಸಿದ ಇವರು ಎಂಜಿಎಂ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ವೃತ್ತಿಜೀವನವನ್ನು ಆರಂಭಿಸಿದರು. 1974 ರಲ್ಲಿ ಮೂಡಬಿದ್ರಿಯ ಸುಮನರೊಂದಿಗೆ ವಿವಾಹವಾದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಡಾ. ವೀರೇಂದ್ರ ಹೆಗ್ಗಡೆಯವರು 1973 ರಲ್ಲಿ ಧಾರವಾಡದ ಜನತಾ ಶಿಕ್ಷಣ ಸಮಿತಿ ಸಂಸ್ಥೆಯನ್ನು ವಹಿಸಿಕೊಂಡ ಬಳಿಕ ಡಾ.ನ.ವಜ್ರಕುಮಾರ ಅವರು ತಮ್ಮ ಕ್ರಿಯಾಶೀಲತೆ ಹಾಗೂ ಕಾರ್ಯದಕ್ಷತೆ ಗಳಿಂದ ಜೆಎಸ್ಎಸ್ ಸಂಸ್ಥೆಯ ಕಾರ್ಯದರ್ಶಿಗಳಾಗಿ ಎಂಜಿನಿಯರಿಂಗ್, ದಂತ ಮಹಾವಿದ್ಯಾಲಯ, ವೈದ್ಯಕೀಯ ಸಂಸ್ಥೆಗಳನ್ನು ಸ್ಥಾಪಿಸಲು ಕಾರಣೀಭೂತರಾಗಿದ್ದಾರೆ.
ಅವಿರತ ಶ್ರಮದಿಂದ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನುಂಟು ಮಾಡಿ ಧಾರವಾಡದಲ್ಲಿ ಶಿಕ್ಷಣ ಕ್ಷೇತ್ರವನ್ನು ವಿಸ್ತರಿಸಿದ ಕೀರ್ತಿಯ ಜೊತೆಗೆ ಸಾವಿರಾರು ಕುಟುಂಬಗಳಿಗೆ ಉದ್ಯೋಗ ಹಾಗೂ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣದಾತರಾಗಿ ಅಜಾತಶತ್ರು ಗಳೆನಿಸಿಕೊಂಡಿದ್ದರು.

ಅವರು ಜೈನ ಸಮಾಜದ ಹಿರಿಯರು ಮಾರ್ಗದರ್ಶಕರೂ ಆಗಿ ಧಾರವಾಡ ಜೈನ್ ಮಿಲನ್, ಧಾರವಾಡ ಇದರ ಮಹಾಪೋಷಕರು, ಸ್ಥಾಪಕರೂ ಆಗಿ ಹಲವಾರು ಧಾರ್ಮಿಕ ಕಾರ್ಯಗಳನ್ನು ಕೈಗೊಂಡು ಸಮಾಜಕ್ಕೆ ಆದರ್ಶಪ್ರಾಯರಾಗಿದ್ದಾರೆ.
ಸುಧೀರ್ಘ ಅವಧಿಗೆ ಜೆಎಸ್ಎಸ್ ಕಾಲೇಜಿನ ಪ್ರಾಚಾರ್ಯರಾಗಿದ್ದ ಅವರು ನಂತರ ಸಂಸ್ಥೆಯ ಆಡಳಿತ ಮಂಡಳಿಯಲ್ಲಿ ಒಬ್ಬರಾಗಿ ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸಿದರು. ಮೃತರ ಅಂತ್ಯಕ್ರಿಯೆ ಅವರ ಹುಟ್ಟೂರಾದ ದಕ್ಷಿಣ ಕನ್ನಡ ಜಿಲ್ಲೆಯ ಯರ್ಮಾಳದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.

ಅಂತಿಮ ದರ್ಶನ
ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕಾಗಿ ಇಂದು ಮುಂಜಾನೆ 8 ರಿಂದ 9.30 ತನಕ ಜೆಎಸ್ಎಸ್ ಸಂಸ್ಥೆಯ ಬನಶಂಕರಿ ಕಾಲೇಜು ಆವರಣದಲ್ಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಅನೇಕ ಗಣ್ಯರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಗಣ್ಯರ ಸಂತಾಪ
ಡಾ.ವಜ್ರಕುಮಾರ ನಿಧನಕ್ಕೆ ನಿಧನಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ. ಜೊತೆಗೆ ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ತವನಪ್ಪ ಅಷ್ಟಗಿ ಮಾಜಿ ಶಾಸಕರಾದ ಸೀಮಾ ಮಸೂತಿ, ಜಿ.ಎಸ್.ಪಾಟೀಲ, ಕಾಂಗ್ರೆಸ್ ಮುಖಂಡ ಆರ್.ಕೆ.ಪಾಟೀಲ, ಮೇಯರ್ ಈರೇಶ ಅಂಚಟಗೇರಿ, ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.












Click it and Unblock the Notifications