ಕೋವಿಡ್ ಲಸಿಕೆ ಪಡೆಯಿರಿ: 25 ಸಾವಿರ ಮಕ್ಕಳಿಂದ ಪೋಷಕರಿಗೆ ಪತ್ರ
ಧಾರವಾಡ, ಮಾರ್ಚ್ 17; ಕೋವಿಡ್ ನಿಯಂತ್ರಣಕ್ಕೆ ಕೋವಿಶೀಲ್ಡ್, ಕೊವ್ಯಾಕ್ಸಿನ್ ಲಸಿಕೆಯನ್ನು ಸರ್ಕಾರ ಉಚಿತವಾಗಿ ನೀಡುತ್ತಿದೆ. ಧಾರವಾಡ ಜಿಲ್ಲೆಯ ಸುಮಾರು 400ಕ್ಕೂ ಹೆಚ್ಚು ಪ್ರೌಢಶಾಲೆಗಳ 25 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಲಸಿಕೆ ಪಡೆಯಿರಿ ಎಂದು ಪಾಲಕರಿಗೆ ಪತ್ರ ಬರೆದಿದ್ದಾರೆ.
ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ಪರಿಕಲ್ಪನೆಯಂತೆ ಈ ಅಭಿಯಾನವನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನಕುಮಾರ್ ಹಂಚಾಟೆ ಈ ಕುರಿತು ಮಾಹಿತಿ ನೀಡಿದ್ದಾರೆ.
ಜಿಲ್ಲೆಯ ಸರ್ಕಾರಿ,ಅನುದಾನಿತ ಹಾಗೂ ಅನುದಾನರಹಿತ ಸೇರಿ ಸುಮಾರು 400 ಪ್ರೌಢಶಾಲೆಗಳ 25 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಮಂಗಳವಾರ ಪತ್ರವನ್ನು ಬರೆದಿದ್ದಾರೆ. ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು ಇದಕ್ಕೆ ಮಾರ್ಗದರ್ಶನ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ?; ಲಸಿಕೆಯು ಕೋವಿಡ್ ವೈರಾಣುವಿನಿಂದ ರಕ್ಷಿಸಿಕೊಳ್ಳಲು ಸಹಕಾರಿ. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಆಧಾರ್ ಕಾರ್ಡ್ನೊಂದಿಗೆ, ಅಧಿಕ ರಕ್ತದೊತ್ತಡ, ಸಕ್ಕರೆ ಖಾಯಿಲೆ, ಪಾರ್ಶ್ವವಾಯು ಮತ್ತಿತರ ಕೊ-ಮಾರ್ಬಿಡಿಟಿಗಳಿಂದ ಬಳಲುತ್ತಿರುವ 45 ರಿಂದ 59 ವರ್ಷ ವಯೋಮಾನದ ವ್ಯಕ್ತಿಗಳು ವೈದ್ಯರ ಔಷಧ ಶಿಫಾರಸ್ಸು ಚೀಟಿ ಮತ್ತು ಆಧಾರ್ ಕಾರ್ಡ್ ಜೊತೆಗೆ ಹತ್ತಿರದ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿದರೆ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ಸಹಕಾರ ನೀಡುತ್ತಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಮನೆಯಿಂದ ಅನಗತ್ಯವಾಗಿ ಹೊರ ಬರಬೇಡಿ, ಅನಿವಾರ್ಯವಾಗಿ ಹೊರಗೆ ಬರುವ ಸಂದರ್ಭಗಳಲ್ಲಿ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ , ಸುರಕ್ಷಿತ ದೈಹಿಕ ಅಂತರವನ್ನು ಕಾಪಾಡಿಕೊಳ್ಳಿ ಎಂದು ಮಕ್ಕಳು ಪತ್ರದಲ್ಲಿ ತಿಳಿಸಿದ್ದಾರೆ.

ಮಂಗಳವಾರದ ವರದಿಯಂತೆ ಧಾರವಾಡ ಜಿಲ್ಲೆಯಲ್ಲಿ 7 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 22,515. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 99.












Click it and Unblock the Notifications