ವಿನಯ್ ಕುಲಕರ್ಣಿ ಬಂಧನ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಧಾರವಾಡ, ನವೆಂಬರ್ 13: ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪ ಚುನಾವಣೆಯ ನಂತರ ಸಚಿವ ಸಂಪುಟಕ್ಕೆ ಸೇರಲು ಹಲವು ಹಿರಿಯ ಶಾಸಕರು ವಿವಿಧ ಪ್ರಯತ್ನಗಳನ್ನು ನಡೆಸುತ್ತಲೇ ಇದ್ದಾರೆ. ಈಗಾಗಲೇ ಕೆಲವು ಶಾಸಕರು ಗುಂಪುಗಾರಿಕೆ ಮಾಡುತ್ತಿದ್ದರೆ, ಇನ್ನು ಕೆಲವರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ.
ಈ ಕುರಿತು ಶುಕ್ರವಾರ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಶಾಸಕರ ಸಭೆಗಳು ನಡೆಯುತ್ತಲೇ ಇರುತ್ತವೆ. ಅದಕ್ಕೂ ಸಚಿವ ಸಂಪುಟಕ್ಕೆ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.
ಧಾರವಾಡದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಮತ್ತು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದರು.

ಈ ಹಿಂದೆಯೂ ಹುಬ್ಬಳ್ಳಿಯಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ಸಂಬಂಧ ಸಭೆ ಆಗಿತ್ತು. ಅದನ್ನೂ ಸಹ ರಹಸ್ಯ ಸಹ ಎಂದಿದ್ದರು. ಅದೆಲ್ಲ ಏನೂ ಇರುವುದೇ ಇಲ್ಲ, ಸದ್ಯ ಆಗುತ್ತಿರುವ ಸಭೆಗಳಿಗೂ ಸಂಪುಟ ವಿಸ್ತರಣೆಗೂ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಇನ್ನು ಇದೇ ಸಂದರ್ಭದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನ ರಾಜಕೀಯ ಷಡ್ಯಂತ್ರ ಎಂಬ ಆರೋಪದ ವಿಚಾರವಾಗಿ ಮಾತನಾಡಿದ ಪ್ರಹ್ಲಾದ್ ಜೋಶಿ, ""ಕಾನೂನು ತನ್ನ ಕೆಲಸ ತಾನು ಮಾಡುತ್ತಿದೆ. ನಮ್ಮ ಕೈವಾಡ ಇದೆ ಎಂದು ಕೆಲವರು ಆರೋಪ ಮಾಡುತ್ತಿದ್ದಾರೆ. ಆ ರೀತಿ ಆರೋಪ ಮಾಡುವವರಿಗೆ ದೇವರು ಒಳ್ಳೆಯ ಬುದ್ಧಿ ನೀಡಲಿ'' ಎಂದು ತಿಳಿಸಿದರು.
ಇದೇ ವೇಳೆ ಹಿರಿಯ ಪತ್ರಕರ್ತ, ರವಿ ಬೆಳಗೆರೆ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಹ್ಲಾದ್ ಜೋಶಿ, ರವಿ ಬೆಳಗೆರೆ ಅವರ ನಿಧನ ನಮ್ಮೆಲ್ಲರಿಗೆ ದುಃಖ ತಂದಿದೆ. ಭಗವಂತ ಅವರ ಕುಟುಂಬಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದರು.












Click it and Unblock the Notifications