ಚುನಾವಣಾ ಕರ್ತವ್ಯ ಲೋಪ; ಗ್ರಾಮ ಆಡಳಿತಾಧಿಕಾರಿ ಅಮಾನತು
ಧಾರವಾಡ, ಏಪ್ರಿಲ್ 23; ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳನ್ನು ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ನಿಯೋಜಿತ ಕರ್ತವ್ಯ ನಿರ್ವಹಣೆಯಲ್ಲಿ ವಿಫಲರಾಗಿ ಚುನಾವಣಾ ಕರ್ತವ್ಯಲೋಪ ಮಾಡಿರುವ ಗ್ರಾಮ ಆಡಳಿತಾಧಿಕಾರಿಯನ್ನು ಅಮಾನತು ಮಾಡಲಾಗಿದೆ. ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 10ರಂದು ಫಲಿತಾಂಶ ಪ್ರಕಟವಾಗಲಿದೆ.
ಧಾರವಾಡ ಜಿಲ್ಲೆಯ ಕಲಘಟಗಿ ತಹಶೀಲ್ದಾರ್ ಕಚೇರಿಯಲ್ಲಿ ಇರುವ ಗ್ರಾಮ ಆಡಳಿತಾಧಿಕಾರಿ ಸುನೀಲ ಇ. ಡಿ. ಅವರನ್ನು ತಕ್ಷಣಕ್ಕೆ ಜಾರಿ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿ, ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.

ಚುನಾವಣಾ ಕೆಲಸಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯವಹಿಸಿ ಕರ್ತವ್ಯಲೋಪ ಮಾಡುವುದಲ್ಲದೇ ಚುನಾವಣಾ ಕಾರ್ಯಕ್ಕೆ ತೊಂದರೆ ಉಂಟು ಮಾಡಿ ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 134ರ ಉಲ್ಲಂಘನೆ ಮಾಡಿದ್ದರಿಂದ ಸುನೀಲ ಇ.ಡಿ. ಅವರನ್ನು ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳು 1957ರ ನಿಯಮ ಪ್ರಕಾರ ಇಲಾಖೆ ವಿಚಾರಣಾ ಬಾಕಿ ಇರಿಸಿ ಸರ್ಕಾರಿ ಸೇವೆಯಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ.
ಅಮಾನತು ಆಗಿರುವ ಗ್ರಾಮ ಆಡಳಿತ ಅಧಿಕಾರಿ ಸುನೀಲ ಇ. ಡಿ. ಅವರ ಲೀನ್ ಅನ್ನು ತಹಶೀಲ್ದಾರ್ ಕಲಘಟಗಿ ಕಾರ್ಯಾಲಯದಿಂದ ತಹಶೀಲ್ದಾರ್ ನವಲಗುಂದ ಇವರ ಕಾರ್ಯ ವ್ಯಾಪ್ತಿಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಜಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಅಮಾನತು ಅವಧಿಯಲ್ಲಿ ಆಪಾದಿತ ನೌಕರನು ತಹಶೀಲ್ದಾರ್ ನವಲಗುಂದ ಇವರ ಪೂರ್ವಾನುಮತಿ ಪಡೆಯದೆ ಕೇಂದ್ರ ಸ್ಥಾನ ಬಿಡತಕ್ಕದಲ್ಲ ಮತ್ತು ನೌಕರನು ನಿಯಮಾನುಸಾರ ಜೀವನಾಂಶ ಭತ್ಯೆ ಪಡೆಯಲು ಅರ್ಹನಿರುತ್ತಾನೆ ಎಂದು ತಿಳಿಸಲಾಗಿದೆ.

ನಾಮಪತ್ರ ವಾಪಸ್ ಪಡೆಯಬಹುದು; ಮೇ 10ರಂದು ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಏಪ್ರಿಲ್ 20 ಕೊನೆಯ ದಿನವಾಗಿತ್ತು. ಏಪ್ರಿಲ್ 21ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ಪೂರ್ಣಗೊಂಡಿದೆ. ಧಾರವಾಡ ಜಿಲ್ಲೆಯ 7 ವಿಧಾನಸಭಾ ಮತಕ್ಷೇತ್ರಗಳಿಗೆ ಸಲ್ಲಿಕೆಯಾಗಿದ್ದ 182 ನಾಮಪತ್ರಗಳ ಪೈಕಿ 152 ನಾಮಪತ್ರಗಳು ಕ್ರಮಬದ್ಧವಾಗಿದ್ದು, ಒಟ್ಟು 110 ಅಭ್ಯರ್ಥಿಗಳು ಉಳಿದಿದ್ದಾರೆ.
ನಾಮಪತ್ರ ಕ್ರಮಬದ್ಧವಾಗಿರುವ ಅಭ್ಯರ್ಥಿಗಳು ಇಚ್ಛಿಸಿದಲ್ಲಿ ತಮ್ಮ ನಾಮಪತ್ರಗಳನ್ನು ಹಿಂಪಡೆಯಲು ಚುನಾವಣಾ ಅಧಿಸೂಚನೆಯಂತೆ ಏಪ್ರಿಲ್ 24ರ ಸೋಮವಾರದಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅವಕಾಶವಿದೆ. ಬಳಿಕ ಕಣದಲ್ಲಿ ಉಳಿಯುವ ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.
ಮದ್ಯ ಮಾರಾಟ ನಿಷೇಧ; ವಿಧಾನಸಭೆ ಚುನಾವಣೆ ಮೇ 10ರಂದು ನಡೆಯಲಿದೆ. ಮತಗಳ ಎಣಿಕೆ ಮೇ 13ರಂದು ನಡೆಯುವ ಹಿನ್ನಲೆಯಲ್ಲಿ ಮೇ 13 ರಿಂದ 14ರವರೆಗೆ ಧಾರವಾಡ ಜಿಲ್ಲೆಯಲ್ಲಿ ಮದ್ಯದ ಅಂಗಡಿ, ಮದ್ಯ ಸಾಗಾಣಿಕೆ, ಸಂಗ್ರಹಣೆ ಹಾಗೂ ಮಾರಾಟಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಚುನಾವಣಾ ಪ್ರಕ್ರಿಯೆಗಳ ಮುಕ್ತ ಹಾಗೂ ನಿಷ್ಪಕ್ಷಪಾತ ರೀತಿಯಲ್ಲಿ ಶಾಂತಿಯುತವಾಗಿ ನಡೆಯಬೇಕೆಂಬ ದೃಷ್ಟಿಯಿಂದ ಹಾಗೂ ಈ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಧಾರವಾಡ ಜಿಲ್ಲೆಯಾದ್ಯಂತ ಮೇ 8ರಂದು ಸಂಜೆ 5 ಗಂಟೆಯಿಂದ ಮೇ 11ರ ಬೆಳಗ್ಗೆ 6 ಗಂಟೆಯವರೆಗೆ ಹಾಗೂ ಮತ ಎಣಿಕೆ ದಿನವಾದ ಮೇ 13ರಂದು ಬೆಳಗ್ಗೆ 6 ಗಂಟೆಯಿಂದ ಮೇ 14ರ ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಎಲ್ಲಾ ಮದ್ಯದ ಅಂಗಡಿ ಹಾಗೂ ಬಾರ್ಗಳನ್ನು ಬಂದ್ ಮಾಡಲು ಹಾಗೂ ಎಲ್ಲ ರೀತಿಯ ಮದ್ಯ ತಯಾರಿಕಾ ಘಟಕಗಳು, ಸಾಗಾಣಿಕೆ, ಸಂಗ್ರಹಣೆ ಹಾಗೂ ಮಾರಾಟ ಮಳಿಗೆಗಳನ್ನು ಬಂದ್ ಮಾಡುವಂತೆ ಜಿಲ್ಲಾ ಚುನಾಣಾಧಿಕಾರಿಗಳು ಆಗಿರುವ ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.
ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 135ಸಿ (2) ಮತ್ತು (3) ರನ್ವಯ ಶಿಕ್ಷೆಗೆ ಒಳಪಡಿಸಲಾಗುತ್ತದೆ. ಅಬಕಾರಿ ಉಪ ಆಯುಕ್ತರು, ಅಬಕಾರಿ ಅಧೀಕ್ಷಕರು, ಮತ್ತು ಅಬಕಾರಿ ಉಪ ಅಧೀಕ್ಷಕರು ಮದ್ಯ ಮಾರಾಟ ಆಗದಂತೆ ಕಟ್ಟುನಿಟ್ಟಾಗಿ ನಿಗಾ ವಹಿಸಬೇಕೆಂದು ಸೂಚನೆ ನೀಡಲಾಗಿದೆ.












Click it and Unblock the Notifications