ನ.23ರವರೆಗೆ ನ್ಯಾಯಾಂಗ ಬಂಧನದಲ್ಲಿ ವಿನಯ್ ಕುಲಕರ್ಣಿ
ಧಾರವಾಡ, ನವೆಂಬರ್ 09: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನವೆಂಬರ್ 23ವರೆಗೆ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ.
ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಧಾರವಾಡದ 3ನೇ ಸೆಷನ್ಸ್ ನ್ಯಾಯಾಲಯದ ಎದುರು ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ಹಾಜರುಪಡಿಸಿದ್ದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಮುಂದಿನ 14 ದಿನಗಳ ಕಾಲ ವಿನಯ್ ಅವರಿಗೆ ನ್ಯಾಯಾಂಗ ಬಂಧನ ನೀಡಿ ಆದೇಶಿಸಿದೆ.
ಬೆಳಗಾವಿಯ ಹಿಂಡಲಗಾ ಜೈಲಿನಿಂದ ಶನಿವಾರ ಬೆಳಿಗ್ಗೆ ಹುಬ್ಬಳ್ಳಿಗೆ ವಿನಯ್ ಕುಲಕರ್ಣಿ ಅವರನ್ನು ಕರೆತಂದಿದ್ದ ಸಿಬಿಐ ಅಧಿಕಾರಿಗಳು ಗೋಕುಲ ರಸ್ತೆಯಲ್ಲಿರುವ ಸಿಎಆರ್ ಮೈದಾನದಲ್ಲಿನ ಕೊಠಡಿಯಲ್ಲಿ ವಿಚಾರಣೆ ನಡೆಸಿದ್ದರು. ಸೋಮವಾರ ನ್ಯಾಯಾಲಯದ ಎದುರು ವಿನಯ್ ಅವರನ್ನು ಹಾಜರುಪಡಿಸಬೇಕಿತ್ತು. ಆದರೆ ಕೆಲವು ಕಾರಣದಿಂದ ಕೊನೆ ಕ್ಷಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿನಯ್ ಅವರನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಯಿತು.

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 5ರಂದು ಧಾರವಾಡದ ಬಾರಾಕೊಟ್ರಿ ಪ್ರದೇಶದಲ್ಲಿನ ನಿವಾಸದಲ್ಲಿ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.












Click it and Unblock the Notifications