Vinay Kulkarni: ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಶಾಕ್: ಧಾರವಾಡ ಪ್ರವೇಶಕ್ಕೆ ಅನುಮತಿ ನಿರಾಕರಿಸಿದ ನ್ಯಾಯಾಲಯ
ಧಾರವಾಡ, ಜುಲೈ, 06: ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಯೋಗೀಶ್ ಗೌಡರ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಜಿಲ್ಲೆಯಿಂದ ಹೊರಗಿರುವ ಶಾಸಕ ವಿನಯ್ ಕುಲಕರ್ಣಿಗೆ ನ್ಯಾಯಾಲಯ ಮತ್ತೆ ಶಾಕ್ ನೀಡಿದೆ.
ತಾವು ಶಾಸಕರಾಗಿದ್ದು, ಕ್ಷೇತ್ರಕ್ಕೆ ಭೇಟಿ ಕೊಡಬೇಕಾಗಿರುವುದರಿಂದ ತಮಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡಬೇಕು. ಹಾಗೂ ಷರತ್ತುಗಳನ್ನು ಸಡಿಲಿಸಬೇಕು ಎಂದು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು.

ಯೋಗೀಶಗೌಡ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಗಳ ವಿಚಾರಣೆಯೇ ಇನ್ನೂ ನಡೆದಿಲ್ಲ. ಹೀಗಾಗಿ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡಲಾಗುವುದಿಲ್ಲ ಎಂದು ನ್ಯಾಯಾಲಯ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನೇ ವಜಾಗೊಳಿಸಿದೆ. ಸಿಬಿಐ ಪರವಾಗಿ ಎಸ್ಪಿಪಿ ಗಂಗಾಧರ ಶೆಟ್ಟಿ ಅವರು ಷರತ್ತು ಸಡಿಲಿಕೆ ಮಾಡದಂತೆ ವಾದ ಮಂಡಿಸಿದ್ದರು.
ಕಾಂಗ್ರೆಸ್ ವಿರುದ್ಧ ಜೋಶಿ ವಾಗ್ದಾಳಿ
ಹಾಗೆಯೇ ವಿಧಾನ ಮಂಡಲ ಅಧಿವೇಶನ ಹಿನ್ನೆಲೆ ಸದನದ ಒಳಗೆ ಮತ್ತು ಹೊರಗೆ ಸರ್ಕಾರದ ಬೋಗಸ್ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಪ್ರತಿಭಟನೆ ಮಾಡಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಇತ್ತೀಚೆಗಷ್ಟೇ ಹೇಳಿದ್ದರು.
ಧಾರವಾಡ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಜನವಿರೋಧಿ ಯೋಜನೆಗಳ ವಿರುದ್ಧ ಹೋರಾಟ ನಡೆಸಲಾಗುವುದು ಎಂದರು. ಹಾಗೆಯೇ ರಾಜ್ಯ ಸರ್ಕಾರ 10 ಕೆ.ಜಿ. ಅಕ್ಕಿಯ ಹಣ ಕೊಡಬೇಕು, ಇಲ್ಲವೇ ಕ್ಷಮೆ ಕೇಳಬೇಕು. ಕೇಂದ್ರದಿಂದ 5 ಕೆ.ಜಿ. ಅಕ್ಕಿಯ ಹಣ ಕೊಡುತ್ತಿರುವ ಬಗ್ಗೆ ಸತ್ಯವನ್ನು ಹೇಳಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು.
ಮಾಜಿ ಶಾಸಕ ರೇಣುಕಾಚಾರ್ಯರಿಗೆ ನೋಟಿಸ್ ಕೊಟ್ಟಿರುವ ಕುರಿತು ಮಾತನಾಡಿ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಬಿಎಸ್ವೈ ಅವರೂ ರೇಣುಕಾಚಾರ್ಯ ಕರೆದು ಮಾತನಾಡಿದ್ದಾರೆ.
ನಾನು ಸಹ ಇವತ್ತು ಮಾತನಾಡುವೆ. ನಮ್ಮದು ಒಂದು ಪರಿವಾರ ಇದ್ದಂತೆ ಎಂಬುದನ್ನು ಮನವರಿಕೆ ಮಾಡಿಕೊಡುವೆ. ಸ್ವಲ್ಪ ಆಕ್ರೋಶದಲ್ಲಿ ಕೆಲವರು ಮಾತನಾಡಿದ್ದರು. ಪಕ್ಷದ ಮೇಲೆ ಯಾರಿಗೂ ಬೇಸರವಿಲ್ಲ. ಅಂತಹವರಿಗೆ ಸಾರ್ವಜನಿಕವಾಗಿ ಹೇಳಿಕೆ ನೀಡದಂತೆ ಸೂಚಿಸಲಾಗಿದೆ ಎಂದಿದ್ದರು.












Click it and Unblock the Notifications