ಮಹಾದಾಯಿ ವಿವಾದ : ನ್ಯಾಯಮಂಡಳಿ ಕದ ತಟ್ಟಲಿದೆ ಕರ್ನಾಟಕ
ಹುಬ್ಬಳ್ಳಿ, ಸೆಪ್ಟೆಂಬರ್ 30 : 'ಕಳಸಾ-ಬಂಡೂರಿ ಕುಡಿಯುವ ನೀರಿನ ಯೋಜನೆ ವಿಚಾರದಲ್ಲಿ ಮಧ್ಯಂತರ ತೀರ್ಪು ನೀಡುವಂತೆ ಕೋರಿ ಮಹಾದಾಯಿ ನ್ಯಾಯಮಂಡಳಿಗೆ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಇಚ್ಛಾಶಕ್ತಿ ತೋರಿದಲ್ಲಿ ಈಗಲೂ ನ್ಯಾಯಾಧೀಕರಣದಿಂದ ಹೊರಗೆ ಈ ವಿವಾದ ಬಗೆಹರಿಸಬಹುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, 'ಮಹಾದಾಯಿ ನ್ಯಾಯಮಂಡಳಿ ಮುಂದೆ ಅರ್ಜಿ ಸಲ್ಲಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಮಧ್ಯಂತರ ತೀರ್ಪು ನೀಡುವಂತೆ ಅರ್ಜಿ ಸಲ್ಲಿಸಲಾಗುತ್ತದೆ' ಎಂದು ಹೇಳಿದರು. [ಏನಿದು ಕಸಳಾ-ಬಂಡೂರಿ ಯೋಜನೆ]

'ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಸುಪ್ರೀಂಕೋರ್ಟ್ ಹಿರಿಯ ವಕೀಲ ಫಾಲಿ ನಾರಿಮನ್ ಅವರ ಜೊತೆ ಮಧ್ಯಂತರ ಅರ್ಜಿ ಸಲ್ಲಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ. ನಾರಿಮನ್ ಅವರು ಕೇಳಿರುವ ಎಲ್ಲಾ ದಾಖಲೆಗಳನ್ನು ನೀಡಲಾಗಿದೆ. 2-3 ದಿನಗಳಲ್ಲಿ ಅರ್ಜಿ ಸಲ್ಲಿಸಲಾಗುತ್ತದೆ' ಎಂದು ಸಿದ್ದರಾಮಯ್ಯ ತಿಳಿಸಿದರು. [ಮಹಾದಾಯಿ ಯೋಜನೆ : ಸಿಎಂ ಹೇಳುವುದೇನು?]
'ಕಳಸಾ-ಬಂಡೂರಿ ಯೋಜನೆಗೆ ಸಂಬಂಧಿಸಿದಂತೆ ಮುಂದಿನ ನಡೆ ಕುರಿತು ಚರ್ಚಿಸಲು ಶೀಘ್ರವೇ ರೈತ ಮುಖಂಡರು ಹಾಗೂ ಸರ್ವಪಕ್ಷಗಳ ಸಭೆ ಕರೆಯಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಚ್ಛಾಶಕ್ತಿ ತೋರಿದಲ್ಲಿ ಈಗಲೂ ನ್ಯಾಯಾಧೀಕರಣದಿಂದ ಹೊರಗೆ ವಿವಾದ ಬಗೆಹರಿಸಬಹುದು' ಎಂದರು. [ಸೆ.26ರ ಕರ್ನಾಟಕ ಬಂದ್ ಚಿತ್ರಗಳು]
ಕಳಸಾ-ಬಂಡೂರಿ ನಾಲಾ ಯೋಜನೆ ಜಾರಿಗೆ ಒತ್ತಾಯಿಸಿ ಕನ್ನಡ ಒಕ್ಕೂಟ ಸೆ.26ರ ಶನಿವಾರ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಕನ್ನಡ ಒಕ್ಕೂಟದ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಯೋಜನೆ ಜಾರಿಗೆ ಒತ್ತಾಯಿಸಿ ಮನವಿ ಸಲ್ಲಿಸಿದ್ದರು.












Click it and Unblock the Notifications