ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಚುನಾವಣಾ ಸಿಬ್ಬಂದಿಗೆ ನೀಡಿದ ಸೂಚನೆಗಳೇನು?, ಇಲ್ಲಿದೆ ವಿವರ
ಧಾರವಾಡ, ಏಪ್ರಿಲ್, 04: ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಆಗಿದ್ದು, ಆಯಾ ಕ್ಷೇತ್ರಗಳಲ್ಲಿ ಚುನಾವಣಾ ಅಧಿಕಾರಿಯನ್ನು ಕೂಡ ನೇಮಕ ಮಾಡಲಾಗುತ್ತದೆ. ಹಾಗೆಯೇ ನಿಯಮಾನುಸಾರ ಚುನಾವಣೆಯನ್ನು ನಡೆಸಲು ಚುನಾವಣಾ ಕರ್ತವ್ಯಕ್ಕೆ ನೇಮಕವಾದ ಅಧಿಕಾರಿ ಪಕ್ಷಾತೀತವಾಗಿ, ಧರ್ಮಾತೀತವಾಗಿ ಮತ್ತು ಕಾನೂನಾತ್ಮಕವಾಗಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದ್ದಾರೆ.
ಆಲೂರು ವೆಂಕಟರಾವ್ ಸಾಂಸ್ಕೃತಿಕ ಸಭಾಭವನದಲ್ಲಿ ಜಿಲ್ಲಾಡಳಿತ ಕರ್ನಾಟಕ ಸಾರ್ವತ್ರಿಕ ಚುನಾವಣೆಗೆ ನೇಮಕವಾದ ಚುನಾವಣಾಧಿಗಳು, ಸಹಾಯಕ ಚುನಾವಣಾಧಿಕಾರಿಗಳು ಮತ್ತು ಸೆಕ್ಟರ್ ಆಫೀಸರ್, ಎಫ್.ಎಸ್.ಟಿ., ಎಸ್.ಎಸ್.ಟಿ., ವಿ.ಎಸ್.ಟಿ, ವಿ.ವಿ.ಟಿ ಹಾಗೂ ಸಹಾಯಕ ವೆಚ್ಚ ವೀಕ್ಷಕರು, ಅಕೌಂಟ್ಸ್ ತಂಡಗಳ ಸದಸ್ಯರಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಈ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮಾತನಾಡಿದರು.

ಸೇವೆಗೆ ಸಮರ್ಪಿತ ಸಿಬ್ಬಂದಿಯ ಅಗತ್ಯವಿದೆ
ಮುಕ್ತ ಮತ್ತು ಪಾರದರ್ಶಕವಾಗಿ ಚುನಾವಣೆ ನಡೆಸಲು ಸೇವೆಗೆ ಸಮರ್ಪಿತ ಸಿಬ್ಬಂದಿಯ ಅಗತ್ಯವಿದೆ. ಚುನಾವಣಾ ಕರ್ತವ್ಯ ಪವಿತ್ರವಾದ ಕಾರ್ಯವಾಗಿದೆ. ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಪ್ರತಿಯೊಬ್ಬರು ತಮ್ಮ ವೈಯಕ್ತಿಕ ಗುರುತುಗಳನ್ನು ಬಿಟ್ಟು ನಿಷ್ಪಕ್ಷಪಾತವಾಗಿರಬೇಕು. ಎಲ್ಲ ಇಲಾಖೆ ಅಧಿಕಾರಿಗಳು ಒಂದು ತಂಡವಾಗಿ ಕಾರ್ಯ ನಿರ್ವಹಿಸಬೇಕು. ಚುನಾವಣಾ ಅಧಿಕಾರಿಗಳ ನೇತೃತ್ವದಲ್ಲಿ ಕರ್ತವ್ಯನಿರತ ಎಲ್ಲ ತಂಡಗಳು ಪರಸ್ಪರ ಸಂಪರ್ಕದಲ್ಲಿದ್ದು, ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕೆಂದು ತಿಳಿಸಿದರು.
ಯಾವುದೇ ರೀತಿಯ ಚುನಾವಣಾ ಅಕ್ರಮಗಳು ನಡೆಯದಂತೆ ತೀವ್ರ ನಿಗಾವಹಿಸಿ, ತರಬೇತಿಯಲ್ಲಿ ನೀಡುವ ಮಾಹಿತಿ ಹಾಗೂ ಚುನಾವಣಾ ಆಯೋಗದ ಹ್ಯಾಂಡ್ ಬುಕ್ಗಳನ್ನು ಓದಿ, ಅನುಸರಿಸಬೇಕು ಎಂದು ಸೂಚನೆ ನೀಡಿದರು.
ಪ್ರಾಮಾಣಿಕತೆಯಿಂದ ಕತ್ಯವ್ಯ ನಿರ್ವಹಿಸಬೇಕು
ನಂತರ ಜಿಲ್ಲಾ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಮಾತನಾಡಿ, ಚುನಾವಣಾ ಕರ್ತವ್ಯ ನಿರ್ವಹಣೆಯಲ್ಲಿ ಪ್ರತಿ ಸಿಬ್ಬಂದಿಯೂ ತಮಗೆ ವಹಿಸಿದ ಕರ್ತವ್ಯವನ್ನು ಪ್ರಾಮಾಣಿಕತೆ ಮತ್ತು ಚುನಾವಣಾ ನಿಯಮಗಳಿಗೆ ಅನುಸಾರವಾಗಿ ನಿರ್ವಹಿಸಬೇಕು. ಪೊಲೀಸ್ ಸಿಬ್ಬಂದಿ ಚುನಾವಣಾ ತಂಡಗಳಲ್ಲಿದ್ದು, ಅವರು ಅಗತ್ಯ ಕಾರ್ಯ ಮಾಡುತ್ತಿದ್ದಾರೆ. ನಿಯೋಜಿತ ಸಿಬ್ಬಂದಿ ಒಟ್ಟಾಗಿ ನಿಯಮಾನುಸಾರ ಕೆಲಸ ಮಾಡುವುದರಿಂದ ಮುಕ್ತ, ನ್ಯಾಯಸಮ್ಮತ ಚುನಾವಣೆ ಸಾಧ್ಯವಾಗುತ್ತವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಾಣಿಜ್ಯ ಮತ್ತು ತೆರಿಗೆ ಇಲಾಖೆ ಜಂಟಿ ಆಯುಕ್ತ ನಾಗರಾಜರಾವ್ ಬಿ., ರಾಜ್ಯ ತರಬೇತುದಾರ ಪ್ರೊ.ಎನ್.ವಿ. ಶಿರಗಾಂವಕರ್ ಚುನಾವಣೆ ಕಾರ್ಯದ ಕುರಿತು ವಿಶೇಷ ಉಪನ್ಯಾಸ ಮತ್ತು ತರಬೇತಿ ನೀಡಿದರು.
ತೀವ್ರ ಕಟ್ಟೆಚ್ಚರ ವಹಿಸುವಂತೆ ಸೂಚನೆ
ರಾಜ್ಯ ವಿಧಾನಸಭಾ ಚನಾವಣೆಗೆ ಸಂಬಂಧಿಸಿದಂತೆ ಮಾರ್ಚ್ 29ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಧಾರವಾಡ ಜಿಲ್ಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಇತ್ತೀಚೆಗಷ್ಟೇ ತಿಳಿಸಿದ್ದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅವರು, ಧಾರವಾಡ ಜಿಲ್ಲೆಯಲ್ಲಿ ಒಟ್ಟು 15,07,414 ಮತದಾರರು ಇದ್ದಾರೆ. 7,57,522 ಪುರುಷ, 7,49,807 ಮಹಿಳಾ ಹಾಗೂ 85 ಜನ ಇತರೆ ಮತದಾರರು ಇದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಈ ಬಾರಿ 26,426 ಯುವ ಮತದಾರರಿದ್ದಾರೆ ಎಂದು ಮಾಹಿತಿ ನೀಡಿದ್ದರು.
21,036 ಜನ ವಿಕಲಚೇತನ ಮತದಾರರು, 32,301 ಜನ 80 ವರ್ಷ ಮೇಲ್ಪಟ್ಟ ಮತದಾರರಿದ್ದಾರೆ. ಜೊತೆಗೆ 400 ಜನ 100 ವರ್ಷ ಮೇಲ್ಪಟ್ಟ ಮತದಾರರಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 24 ಚೆಕ್ಪೋಸ್ಟ್ಗಳನ್ನು ನಿರ್ಮಿಸಲಾಗಿದ್ದು, ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಒಟ್ಟು 1636 ಮತಗಟ್ಟೆಗಳ ಸ್ಥಾಪನೆಯಾಗಲಿದ್ದು, ಇದರಲ್ಲಿ 944 ಮತಗಟ್ಟೆಗಳು ಗ್ರಾಮಾಂತರ ಪ್ರದೇಶದಲ್ಲಿ, 692 ಮತಗಟ್ಟೆಗಳು ನಗರ ಪ್ರದೇಶದಲ್ಲಿ ಇರಲಿವೆ. ಆ ಪೈಕಿ 216 ಸೂಕ್ಷ್ಮ ಹಾಗೂ 162 ಅತೀ ಸೂಕ್ಷ್ಮ ಮತಗಟ್ಟೆಗಳು ಇರಲಿವೆ ಎಂದಿದ್ದರು.












Click it and Unblock the Notifications