ಕಾಂಗ್ರೆಸ್ ಮುಕ್ತ ಕರ್ನಾಟಕ ಕಟ್ಟೋಣ : ಯಡಿಯೂರಪ್ಪ
ಹುಬ್ಬಳ್ಳಿ, ಜೂ. 16 : ಕರ್ನಾಟಕವನ್ನು ಕಾಂಗ್ರೆಸ್ ಮುಕ್ತವಾಗಿಸುವುದು ಬಿಜೆಪಿ ಗುರಿಯಾಗಿದೆ. ಆದ್ದರಿಂದ ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಜನರು ಬಿಜೆಪಿಗೆ ಬೆಂಬಲ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಮತ್ತು ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ.
ಭಾನುವಾರ ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರೊ.ಎಸ್.ವಿ.ಸಂಕನೂರು ಪರವಾಗಿ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಪ್ರಚಾರಸಭೆಯಲ್ಲಿ ಪಾಲ್ಗೊಂಡು ಮಾತನಾಡಿ ಬಿ.ಎಸ್.ಯಡಿಯೂರಪ್ಪ, ರಾಷ್ಟಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಜನರು ತಿರಸ್ಕರಿಸಿದ್ದಾರೆ. ಕರ್ನಾಟಕವೂ ಕಾಂಗ್ರೆಸ್ ಮುಕ್ತವಾಗಬೇಕು ಎಂದು ಹೇಳಿದರು.
ಲೋಕಸಭಾ ಚುನಾವಣೆ ಫಲಿತಾಂಶ ಬಂದ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ವಿಪಕ್ಷ ಸ್ಥಾನವೂ ದೊರಕದಂತೆ ಜನರು ಪಾಠ ಕಲಿಸಿದ್ದಾರೆ. ಮುಂದಿನ ಸರದಿ ಕರ್ನಾಟಕದ್ದಾಗಬೇಕು. ಆ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಸನ್ನದ್ಧರಾಗಬೇಕು ಎಂದು ಕರೆ ನೀಡಿದರು.
ಸಭೆಯಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್, ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ರಾಜ್ಯಸಭೆ ಸದಸ್ಯ ಪ್ರಭಾಕರ ಕೋರೆ, ಪರಿಷತ್ ಚುನಾವಣೆ ಅಭ್ಯರ್ಥಿ ಪ್ರೊ.ಎಸ್.ವಿ.ಸಂಕನೂರು ಮುಂತಾದವರು ಪಾಲ್ಗೊಂಡಿದ್ದರು. ಯಾರು ಏನು ಹೇಳಿದರು ಚಿತ್ರಗಳಲ್ಲಿ ನೋಡಿ

ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
ಕರ್ನಾಟಕವನ್ನು ಕಾಂಗ್ರೆಸ್ ಮುಕ್ತವಾಗಿಸುವುದು ಬಿಜೆಪಿ ಗುರಿ. ಆದ್ದರಿಂದ, ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳು ಸೇರಿದಂತೆ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿನ ರೈಲ್ವೆ ಯೋಜನೆಗಳಿಗೆ ಶೇ.50ರಷ್ಟು ಪಾಲು ನೀಡಿದ್ದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುದಾನ ನೀಡಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ. ರಾಜ್ಯದ ಅಭಿವೃದ್ಧಿ ಅವರಿಗೆ ಬೇಕಾಗಿಲ್ಲ ಎಂದು ಬಿ.ಎಸ್.ಯಡಿಯೂರಪ್ಪ ದೂರಿದರು.

ರಾಜ್ಯ ಕಾಂಗ್ರೆಸ್ ಇನ್ನೂ ಎಚ್ಚರಗೊಂಡಿಲ್ಲ
ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ರಾಸಾಯನಿ ಮತ್ತು ರಸಗೊಬ್ಬರ ಸಚಿವ ಅನಂತ ಕುಮಾರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ಹೊಸ ರಾಜಕೀಯ ಸಂಸ್ಕೃತಿಯನ್ನು ಆರಂಭಿಸಿದ್ದಾರೆ. ಕೇವಲ 15-20 ದಿನಗಳಲ್ಲಿ ಕೇಂದ್ರ ಸರ್ಕಾರ ಅಭಿವೃದ್ಧಿ ವೇಗದಲ್ಲಿ ಸಾಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ ಅದು ಇನ್ನೂ ಎಚ್ಚರಗೊಂಡಿಲ್ಲ. ಆದ್ದರಿಂದ ಪ್ರೊ.ಸಂಕನೂರು ಅವರನ್ನು ಗೆಲ್ಲಿಸಿ ಮೋದಿಗೆ ಇನ್ನಷು ಬೆಂಬಲ ನೀಡಿ ಎಂದು ಮನವಿ ಮಾಡಿದರು.

ಜೆಡಿಎಸ್ ನಾಯಕರ ಚಿತ್ರ ನೋಡಿದರೆ ಮತ ಸಿಗೋಲ್ಲ
ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಜೆಡಿಎಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಆದರೆ, ಬ್ಯಾನರ್, ಪ್ರಚಾರ ಕರಪತ್ರಗಳಲ್ಲಿ ಜೆಡಿಎಸ್ ವರಿಷ್ಠರ ಭಾವಚಿತ್ರಗಳೇ ಇಲ್ಲವಾಗಿದೆ. ಜೆಡಿಎಸ್ ನಾಯಕರ ಹೆಸರು ಬಳಸಿದರೆ ಮತ ಬರಲಾರವು ಎಂಬ ಭೀತಿ ಆ ಪಕ್ಷದ ಅಭ್ಯರ್ಥಿಯನ್ನು ಕಾಡುತ್ತಿರಬೇಕು ಎಂದು ಕುಟುಕಿದರು.

ಕಾಂಗ್ರೆಸ್ ಸರ್ಕಾರ ನಿದ್ದೆಯಲ್ಲಿದೆ
ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ನಿದ್ದೆಯಲ್ಲಿದೆ. ಕಾನೂನು ಸುವ್ಯಸ್ಥೆ ಹದಗೆಟ್ಟಿದೆ. ಕಾಂಗ್ರೆಸ್-ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳು. ಜೆಡಿಎಸ್ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ. ಆದ್ದರಿಂದ ಬಿಜೆಪಿ ಅಭ್ಯರ್ಥಿಗಳಿಗೆ ಜನರು ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಎಚ್.ಕೆ.ಪಾಟೀಲ್ ತಿರುಗೇಟು
ಬಿಜೆಪಿ ಆರೋಪಗಳಿಗೆ ಸಚಿವ ಎಚ್.ಕೆ.ಪಾಟೀಲ್ ತಿರುಗೇಟು ನೀಡಿದ್ದಾರೆ. ಮೋದಿ ಅಲೆಯಿಂದ ಬಿಜೆಪಿಯವರಿಗೆ ತಲೆ ತಿರುಗಿದೆ. ಆದ್ದರಿಂದ ಕರ್ನಾಟಕವನ್ನು ಕಾಂಗ್ರೆಸ್ ಮುಕ್ತವಾಗಿರು ಉದ್ಧಟತನದ ಮಾತುಗಳನ್ನು ಆಡುತ್ತಿದ್ದಾರೆ. ಬಿಜೆಪಿ ಸರ್ಕಾರ ಐದು ವರ್ಷಗಳ ಕಾಲ ರಾಜ್ಯದಲ್ಲಿ ಎಂತಹ ಆಡಳಿತ ನೀಡಿದ್ದಾರೆ ಎಂದು ಎಲ್ಲರಿಗೂ ತಿಳಿದಿದೆ ಎಂದು ಕುಟುಕಿದರು.












Click it and Unblock the Notifications