ಕಾಂಗ್ರೆಸ್ನೊಳಗೇ ಸಿಎಂ ಬದಲಾವಣೆಗೆ ಅವಸರ, ಸಿದ್ದರಾಮಯ್ಯ ಮಾನಸಿಕವಾಗಿ ಸಜ್ಜು: ಮಾಜಿ ಸಿಎಂ
ಗದಗ, ಅಕ್ಟೋಬರ್ 07: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸುತ್ತಿದ್ದಂತೆ ಸಿಎಂ ರಾಜೀನಾಮೆ ಬಗ್ಗೆ ಕುತೂಹಲ ಹೆಚ್ಚಾಗಿದೆ. ಅದರಲ್ಲೂ ಕಾಂಗ್ರೆಸ್ ಶಾಸಕರು, ಸಚಿವರೇ ಕದ್ದು ಮುಚ್ಚಿ ಗುಪ್ತವಾಗಿ ಸಭೆ ನಡೆಸುತ್ತಿರುವುದು ಕಾಂಗ್ರೆಸ್ ಒಳಗೇ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು ಮಾನಸಿಕವಾಗಿ ಸಜ್ಜಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಬದಲಾವಣೆಗಾಗಿ ಕಾಂಗ್ರೆಸ್ ಪಕ್ಷದ ಒಳಗೇ ಅನೇಕ ಚಟುವಟಿಕೆಗಳು ನಡೆಯುತ್ತಿದೆ. ವಿಶೇಷವಾಗಿ ಹಿರಿಯ ಪದೇ ಪದೆ ಸಚಿವರು ದೆಹಲಿಗೆ ಭೇಟಿ ನೀಡಿ ವರಿಷ್ಠರೊಂದಿಗೆ ಚರ್ಚಿಸಿಕೊಂಡು ಬರುತ್ತಿದ್ದಾರೆ. ಇದೆಲ್ಲ ನೋಡಿದರೆ ವಿರೋಧ ಪಕ್ಷಕ್ಕಿಂತಲು ಮೇಲಾಗಿ ಆಡಳಿತ ಪಕ್ಷದವರೆ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜಿನಾಮೆ ನೀಡಲು ಮಾನಸಿಕವಾಗಿ ಸಿದ್ದರಾಗುತ್ತಿದ್ದಾರೆ ಎಂದು ಬಿಜೆಪಿ ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸೋಮವಾರ ಗದಗಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿ ರಾಜೀನಾಮೆ ನೀಡಿದರೆ ಮುಂದೆ ಕಾಂಗ್ರೆಸ್ ಸರ್ಕಾರ ಮರಳಿ ಅಧಿಕಾರಕ್ಕೆ ಬರಲ್ಲ. ನಮಗೆ ಅವಕಾಶ ಇದೆ. ಹೀಗಾಗಿ ಸರ್ಕಾರ ಉಳಿಸಿಕೊಳ್ಳಲು ಸತತ ಪ್ರಯತ್ನ ನಡೆಯುತ್ತಲೇ ಇದೆ ಎಂದು ಸಚಿವರ ನಡೆ ನೋಡಿ ಅವರು ಲೇವಡಿ ಮಾಡಿದರು.
ಸ್ಥಗಿತಗೊಂಡ ರಾಜ್ಯದ ಆಡಳಿತ ಯಂತ್ರ
ರಾಜ್ಯದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳು ನಿಂತಿವೆ. ಯಾವುದೇ ಯೋಜನೆಗೂ ಹಣ ಬಿಡುಗಡೆ ಆಗುತ್ತಿಲ್ಲ. ರಾಜ್ಯಕ್ಕೆ ಸಾಕಷ್ಟು ಹಿನ್ನಡೆಯಾಗುತ್ತಿದೆ. ಇಂತಹ ಸರ್ಕಾರದ ಪಡೆದಿರುವುದು ಕರ್ನಾಟಕದ ದೌರ್ಭಾಗ್ಯ, ಆದರೆ, ಈ ಸರ್ಕಾರವನ್ನು ಅಭದ್ರಗೊಳಿಸುವ ಕೆಲಸವನ್ನು ನಾವು ಮಾಡುವುದಿಲ್ಲ ಎಂದು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ ಅವರು, ನಮ್ಮ ಹೈಕಮಾಂಡ್ ಬಹಳ ಸ್ಪಷ್ಟವಾಗಿದೆ, ಈ ಸರ್ಕಾರ ಅಭದ್ರಗೊಳಿಸುವ ಪ್ರಶ್ನೆ ಇಲ್ಲ. ತಾತ್ವಿಕವಾಗಿ ಮತ್ತು ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟವಿದೆ ಎಂದು ಅವರು ಸ್ಪಷ್ಟಪಡಿಸಿದರು.

ವಿಜಯೇಂದ್ರ ಅವರು ದಸರಾ ಹಬ್ಬದ ನಂತರ ಮುಖ್ಯಮಂತ್ರಿ ಬದಲಾವಣೆ ಆಗುತ್ತಾರೆ ಎಂದಿದ್ದರು. ಅದನ್ನು ಅವರ ಲೆಕ್ಕಾಚಾರದಲ್ಲಿ ಹೇಳಿದ್ದಾರೆ. ನಾನು ಹೇಳುವುದಾದರೆ, ಸಿಎಂ ರಾಜೀನಾಮೆ ನೀಡಲು ಮಾನಸಿಕವಾಗಿ ತಯಾರಿ ಆಗುತ್ತಿದ್ದಾರೆ ಎಂದು ಅವರು ಪುನರುಚ್ಚರಿಸಿದರು.
ಜಾತಿ ಗಣತಿ ವರದಿ ಜಾರಿ: ಸೂಕ್ತ ಚರ್ಚೆ ಆಗಲಿ
ಸದ್ಯ ರಾಜ್ಯದಲ್ಲಿ ಜಾತಿ ಗಣತಿ ವರದಿ ಜಾರಿ ಬಗ್ಗೆ ಚರ್ಚೆ ಆಗುತ್ತಿದೆ. ಸರ್ಕಾರ ವರದಿ ಸ್ವೀಕರಿಸಿ, ಮಂಡನೇ ಮಾಡಿ ಸೂಕ್ತ ನಿರ್ಧಾರದ ಬಗ್ಗೆ ಹೇಳಿದೆ. ಈ ಸಂಬಂಧ ವಿಧಾನ ಪರಿಷತ್ ಸದಸ್ಯ ಬಿ. ಕೆ. ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಜಾತಿಗಣತಿ ಮುಖ್ಯನೋ ಸರ್ಕಾರ ಬೀಳುವುದು ಮುಖ್ಯವೋ ಎನ್ನುವುದನ್ನು ಬಿ.ಕೆ ಹರಿಪ್ರಸಾದ್ ಸ್ಪಷ್ಟ ಪಡಿಸಲಿ. ಜಾತಿಗಣತಿ ಪ್ರಕ್ರಿಯೆ ಅಲ್ಲ, ಅದು ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ಅರಿಯಲು ಮಾಡಿದ್ದು. ನಿಖರವಾಗಿ ಜಾತಿಗಣತಿಯ ಆದೇಶವಿಲ್ಲ ಎಂದು ತಿಳಿಸಿದರು.
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ ಕಮಿಟಿ ಕೊಟ್ಟ ವರದಿಯನ್ನು ಯಾಕೆ ಸ್ವೀಕರಸಿಲ್ಲ. ಜಯಪ್ರಕಾಶ್ ಹೆಗಡೆ ಅವರು ಆಯೋಗದ ಅಧ್ಯಕ್ಷರಾಗಿ 2-3 ತಿಂಗಳಲ್ಲಿ ಹೇಗೆ ವರದಿ ಕೊಡುತ್ತಾರೆ? ಕಾಂತರಾಜ್ ಅವರು 2-3 ವರ್ಷ ಡಾಟಾ ತೆಗೆದುಕೊಂಡಿದ್ದರು. ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ ಎಂದು ಅವರು ಹರಿಹಾಯ್ದರು.
ಕಪ್ಪತ್ ಗುಡ್ಡದ ಜೀವ ವೈವಿದ್ಯತೆ ರಕ್ಷಿಸಬೇಕು
ಗದಗ ಜಿಲ್ಲೆಯ ಕಪ್ಪತ್ ಗುಡ್ಡವನ್ನು ಸಂರಕ್ಷಿಬೇಕು. ಇಲ್ಲಿನ ಜೀವ ವೈವಿಧ್ಯತೆಯಲ್ಲಿ ಅಸಮತೋಲನ ಉಂಟಾಗಿದೆ. ಅದನ್ನು ಸರಿಪಡಿಸುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಬೇಕೆಂದು. ಬಿಜೆಪಿ ಅಧಿಕಾರದಲ್ಲಿ ನಾನು ಸಿಎಂ ಆಗಿದ್ದಾಗ ವನ್ಯ ಜೀವಿ ಮಂಡಳಿ ಸಭೆ ಮಾಡಿದ್ದೆವು. ನಿಸರ್ಗ ಕಾಪಾಡಲು ಸೂಚಿಸಿದ್ದೆ. ಈಗಲೂ ಸಹ ಮುಖ್ಯಮಂತ್ರಿ ಕಪ್ಪತ್ ಗುಡ್ಡದ ಜೀವ ವೈವಿಧ್ಯತೆ ಕಾಪಾಡಲು ಗಣಿಗಾರಿಕೆಯಂತ ಚಟುವಟಿಕೆ ನಡೆಯಲು ಅವಕಾಶ ಕೊಡಬಾರದು ಎಂದು ಎಚ್ಚರಿಕೆ ನೀಡಿದರು.












Click it and Unblock the Notifications