ಎಚ್ಕೆ ಪಾಟೀಲ್ ಚಾಣಾಕ್ಷತನ, ಯಡಿಯೂರಪ್ಪ ಆಪ್ತ ಈಗ ಕಾಂಗ್ರೆಸ್ ಪಾಲು
Recommended Video
ಗದಗ, ಏಪ್ರಿಲ್ 11: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಕಾಂಗ್ರೆಸ್ಸಿನ ಪ್ರಭಾವಿ ಮುಖಂಡರಾದ ಎಚ್ ಕೆ ಪಾಟೀಲ್ ಅವರ ಚಾಣಾಕ್ಷ ತಂತ್ರದಿಂದಾಗಿ ಗದಗ ಜಿಲ್ಲೆಯಲ್ಲಿ ಬಿಜೆಪಿಗೆ ಮರ್ಮಾಘಾತವಾಗಿದೆ.
ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಅವರ ಆಪ್ತ ಶ್ರೀ ಶೈಲಪ್ಪ ಬಿದರೂರ ಅವರನ್ನು ಕಾಂಗ್ರೆಸ್ ತೆಕ್ಕೆಗೆ ಎಳೆದುಕೊಳ್ಳುವ ಮೂಲಕ ಹಾವೇರಿ ಲೋಕಸಭಾ ಅಭ್ಯರ್ಥಿ ಡಿ ಆರ್ ಪಾಟೀಲ್ ಅವರ ಗೆಲುವಿಗೆ ತಂತ್ರಗಳನ್ನು ಹೆಣೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್ ಕೆ ಪಾಟೀಲ್ ಅವರು ಶ್ರೀಶೈಲಪ್ಪ ಬಿದರೂರ ಅವರು ಜೊತೆ ಮಾತುಕತೆ ನಡೆಸಿ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗುವ ಮೂಲಕ ಕಾಂಗ್ರೆಸ್ ಸೇರಲು ತಮ್ಮ ಒಲವನ್ನು ವ್ಯಕ್ತಪಡಿಸಿದ್ದರು. ಇಂದು ಗದಗದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್ ಕೆ ಪಾಟೀಲ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಇವರ ಜೊತೆಯಲ್ಲಿ ಅವರ 30 ಕ್ಕೂ ಹೆಚ್ಚು ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಏಪ್ರಿಲ್ 11 ರಿಂದ ಮೇ 19ರ ತನಕ ದೇಶದ ವಿವಿಧೆಡೆ ಮತದಾನ ಪ್ರಕ್ರಿಯೆ ನಡೆಯಲಿದ್ದು, 543 ಲೋಕಸಭಾ ಕ್ಷೇತ್ರಗಳ ಫಲಿತಾಂಶವು ಮೇ 23ರಂದು ಪ್ರಕಟವಾಗಲಿದೆ. ಹಾವೇರಿ ಕ್ಷೇತ್ರದಲ್ಲಿ ಏಪ್ರಿಲ್ 23ರಂದು ಮತದಾನ ನಿಗದಿಯಾಗಿದೆ.
ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ
ಗದಗ ಮತ್ತು ರೋಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶ್ರೀಶೈಲಪ್ಪ ಬಿದರೂರು ಅವರು ಸಾಕಷ್ಟು ಪ್ರಭಾವ ಹೊಂದಿದ್ದಾರೆ. ಲೋಕಸಭಾ ಚುನಾವಣೆಗೆ ಕೆಲವೇ ದಿನಗಳ ಇರುವಾಗಿ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗಿರುವುದು ಬಿಜೆಪಿಗೆ ಸಾಕಷ್ಟು ಹಿನ್ನಡೆ ಉಂಟುಮಾಡಲಿದೆ.
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಶ್ರೀಶೈಲಪ್ಪ ಬಿದರೂರ
ಬಿದರೂರು ಅವರ ಸೇರ್ಪಡೆಯಿಂದ ನಮಗೆ ಆನೆ ಬಲ
ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್ ಕೆ ಪಾಟೀಲ್ ಬಿದರೂರು ಅವರ ಸೇರ್ಪಡೆಯಿಂದ ನಮಗೆ ಆನೆ ಬಲ ಬಂದಂತಾಗಿದೆ. ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಈ ಸೇರ್ಪಡೆ ನಮಗೆ ಲಾಭ ತಂದು ಕೊಡಲಿದೆ ಎಂದರು.
ಮಾಜಿ ಶಾಸಕ ಶ್ರೀ ಶೈಲಪ್ಪ ಬಿದರೂರು ಮಾತನಾಡಿ
ಇದೇ ವೇಳೆ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಶಾಸಕ ಶ್ರೀ ಶೈಲಪ್ಪ ಬಿದರೂರು ಮಾತನಾಡಿ, ಬಿಜೆಪಿಯ ಉಸಿರುಗಟ್ಟಿಸುವ ವಾತಾವರಣದಿಂದ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭಿವೃದ್ದಿಗಾಗಿ ಶ್ರಮಿಸಲಿದ್ದೇನೆ ಎಂದರು.
ಕಾಂಗ್ರೆಸ್ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು
ಗದಗಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಚ್ ಕೆ ಪಾಟೀಲ್ ಅವರು ಕಾಂಗ್ರೆಸ್ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಜಿ.ಎಸ್ ಪಾಟೀಲ್, ಮಾಜಿ ಶಾಸಕರಾದ ಬಿ.ಆರ್ ಯಾವಗಲ್, ರಾಮಕೃಷ್ಣ ದೊಡ್ಡಮನಿ ಉಪಸ್ಥಿತರಿದ್ದರು.
ಮೂರು ಬಾರಿ ಶಾಸಕರಾಗಿದ್ದ ಶ್ರೀಶೈಲಪ್ಪ
ಮೂರು ಬಾರಿ ಶ್ರೀಶೈಲಪ್ಪ ಬಿದರೂರ ಅವರು ಶಾಸಕರಾಗಿದ್ದರು. ಆದರೆ, 2018ರ ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಕೈ ತಪ್ಪಿತ್ತು. ಇದರಿಂದಾಗಿ ಅವರು ಚುನಾವಣೆಯಲ್ಲಿ ತಟಸ್ಥರಾಗಿ ಉಳಿದಿದ್ದರು.ಆದರೆ, ಈಗ ಕಾಂಗ್ರೆಸ್ ಸೇರಿರುವುದರಿಂದ ಬಿಜೆಪಿಗೆ ಭಾರಿ ಉಂಟಾಗಲಿದೆ. ಹಾವೇರಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಶಿವಕುಮಾರ್ ಉದಾಸಿ ಸ್ಪರ್ಧಿಸಿದ್ದು, ಕಾಂಗ್ರೆಸ್ಸಿನಿಂದ ಡಿಆರ್ ಪಾಟೀಲ್ ಕಣದಲ್ಲಿದ್ದಾರೆ.