Breaking; ಮಾಜಿ ಶಾಸಕ ಎಸ್. ಎನ್. ಪಾಟೀಲ್ ವಿಧಿವಶ
ಗದಗ, ಡಿಸೆಂಬರ್ 15; ಕಾಂಗ್ರೆಸ್ ಪಕ್ಷದ ನಾಯಕ, ಶಿರಹಟ್ಟಿ ಕ್ಷೇತ್ರದ ಮಾಜಿ ಶಾಸಕ ಎಸ್. ಎನ್. ಪಾಟೀಲ್ ವಿಧಿವಶರಾದರು. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಗುರುವಾರ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಮಾಜಿ ಶಾಸಕ ಎಸ್. ಎನ್. ಪಾಟೀಲ್ (81) ವಿಧಿವಶರಾದರು. ಸಂಜೆ ಸ್ವಗ್ರಾಮ ಪುಟಗಾಂವ್ ಬಡ್ನಿಯಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನಡೆಯಿತು.
ಅನಾರೋಗ್ಯದ ಕಾರಣದಿಂದಾಗಿ ಶಂಕರಗೌಡ ಎನ್. ಪಾಟೀಲ್ (ಎಸ್. ಎನ್. ಪಾಟೀಲ್)ರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಸರಳ, ಸಜ್ಜನಿಕೆಯ ಎಸ್. ಎನ್. ಪಾಟೀಲ್ ಪತ್ನಿ, ಇಬ್ಬರು ಪುತ್ರರು ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಪಾಟೀಲ್ ಅವರು 1989-1994ರ ಅವಧಿಯಲ್ಲಿ ಕಾಂಗ್ರೆಸ್ನಿಂದ ಶಿರಹಟ್ಟಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.
ಎಲ್ಲಾ ಪಕ್ಷದ ನಾಯಕರ ಜೊತೆ ಅನೋನ್ಯವಾಗಿದ್ದರು. ನೆಚ್ಚಿನ ನಾಯಕನ ನಿಧನಕ್ಕೆ ಅಪಾರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಅಂತ್ಯ ಸಂಸ್ಕಾರದಲ್ಲಿ ಸಹ ಹಲವಾರು ಜನರು ಪಾಲ್ಗೊಂಡು ಅಂತಿಮ ನಮನ ಸಲ್ಲಿಕೆ ಮಾಡಿದರು.
ಡಿಕೆಶಿ ಸಂತಾಪ; ಮಾಜಿ ಶಾಸಕ ಎಸ್. ಎನ್. ಪಾಟೀಲ್ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. 'ಕಾಂಗ್ರೆಸ್ ಪಕ್ಷದ ನಾಯಕರು, ಶಿರಹಟ್ಟಿ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಎಸ್. ಎನ್. ಪಾಟೀಲರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ನೋವುಂಟಾಗಿದೆ. ಶ್ರೀಯುತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲೆಂದು ಪ್ರಾರ್ಥಿಸುತ್ತೇನೆ' ಎಂದು ಅವರು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಟ್ವೀಟ್ ಮಾಡಿ, 'ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮಾಜಿ ಶಾಸಕರಾದ ಶ್ರೀ ಶಂಕರಗೌಡ ಎನ್ ಪಾಟೀಲ (ಎಸ್ ಎನ್ ಪಾಟೀಲ್) ರವರು ಇಂದು ನಿಧನರಾದ ಸುದ್ದಿ ಕೇಳಿ ನೋವಾಯಿತು.ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬದವರಿಗೆ ಅಭಿಮಾನಿಗಳಿಗೆ ಅವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಸಂತಾಪ ಸೂಚಿಸಿದ್ದಾರೆ.












Click it and Unblock the Notifications