ಪೌರತ್ವ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ; ಅಸ್ಸಾಂನಲ್ಲಿ ಮಗು ಸಾವು
ಗುವಾಹಟಿ, ಡಿಸೆಂಬರ್ 11: ರಾಷ್ಟ್ರೀಯ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಹಾಗೂ ಎಡಪಕ್ಷಗಳು ಪ್ರತಿಭಟನೆಗೆ ಕರೆ ನೀಡಿವೆ. ಈಶಾನ್ಯ ರಾಜ್ಯಗಳಲ್ಲಿ ಕಾಂಗ್ರೆಸ್ ಹಾಗೂ ಎಡಪಕ್ಷಗಳ ಹೊರತಾಗಿಯೂ ಅನೇಕ ಸಂಘಟನೆಗಳು ವ್ಯಾಪಕ ಪ್ರತಿಭಟನೆ ನಡೆಸುತ್ತಿವೆ.
ಅಸ್ಸಾಂ ರಾಜಧಾನಿ ಗುವಾಹಟಿಯಲ್ಲೂ ಪ್ರತಿಭಟನೆ ಕಿಚ್ಚು ಹೆಚ್ಚಾಗಿದ್ದು, ಅನಾರೋಗ್ಯದಿಂದ ಅಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ಹೊರಟಿದ್ದ ಮಗುವೊಂದು ಪ್ರತಿಭಟನಾಕಾರರ ಮಧ್ಯೆ ಸಿಲುಕಿ ಮೃತಪಟ್ಟಿರುವುದು ವರದಿಯಾಗಿದೆ. ಗುವಾಹಟಿಯ ಮಾಲಿಗಾಂವ್ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ. ಅಲ್ಲದೇ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದ್ದು, ಆರು ಜನ ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ಚಕಮಕಿ ಸಂಭವಿಸಿದೆ.
ಪೌರತ್ವ ತಿದ್ದುಪಡಿ ಮಸೂದೆ, ರಾಜ್ಯಸಭೆಯಲ್ಲಿ ಎನ್ಡಿಎ ಸಂಖ್ಯಾಬಲ?
ವಿವಾದಿತ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಮಸೂದೆ ಇಂದು ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ. ನಿನ್ನೆ ಲೋಕಸಭೆಯಲ್ಲಿ ಮಹುಮತದೊಂದಿಗೆ ಪಾಸಾಗಿದೆ. ಈ ಹಿನ್ನೆಲೆಯಲ್ಲಿ ಇದರ ವಿರೋಧ ವ್ಯಕ್ತಪಡಿಸಿ ಅಸ್ಸಾಂನಲ್ಲಿ ಇಂದು ಗುವಾಹಟಿ ಬಂದ್ ಗೆ ಅನೇಕ ವಿದ್ಯಾರ್ಥಿ ಸಂಘಟನೆಗಳು ಕರೆ ನೀಡಿವೆ. ಪ್ರತಿಭಟನೆ ಇನ್ನಷ್ಟು ಉಗ್ರ ಸ್ವರೂಪ ಪಡೆದುಕೊಳ್ಳುವ ಸಂಭವವಿದೆ ಎಂದು ತಿಳಿದು ಬಂದಿದೆ.