"ಅಸ್ಸಾಂನಲ್ಲಿ ಕಾಂಗ್ರೆಸ್-ಎಐಯುಡಿಎಫ್ ಗೆದ್ದರೆ ಒಳನುಸುಳುವಿಕೆ ಹೆಚ್ಚು"
ಗುವಾಹಟಿ, ಮಾರ್ಚ್ 22: ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಆಲ್ ಇಂಡಿಯಾ ಡೆಮಾಕ್ರೆಟಿಕ್ ಪಕ್ಷ(AIUDF)ದ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಒಳನುಸುಳುವಿಕೆ ಪ್ರಮಾಣ ಹೆಚ್ಚಾಗುತ್ತದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.
ಧೇಮಜಿ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್-ಎಐಯುಡಿಎಫ್ ವಿರುದ್ಧ ವಾಗ್ದಾಳಿ ನಡೆಸಿದರು. ನಾವು ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದೇವೆ. ಆದರೆ ಕಾಂಗ್ರೆಸ್ ಬದ್ರುದ್ದೀನ್ ಅಜ್ಮಲ್ ಅವರೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದೆ.
ಅಸ್ಸಾಂ ಮತದಾರರಿಗೆ ರಾಹುಲ್ ಗಾಂಧಿಯ 5 ಭರವಸೆಗಳು
ಅಸ್ಸಾಂನಲ್ಲಿ ಕಾಂಗ್ರೆಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದರೆ ನುಸುಳುಕೋರರ ಹಾವಳಿ ಹೆಚ್ಚಾಗುತ್ತದೆ. ನುಸುಳುವಿಕೆ ತಪ್ಪಿಸುಬೇಕು ಅಂತಿದ್ದರೆ ಕಾಂಗ್ರೆಸ್ ಮೈತ್ರಿಕೂಟಕ್ಕೆ ಮತ ನೀಡಬೇಡಿ ಎಂದು ಅಮಿತ್ ಶಾ ಕಿಡಿ ಕಾರಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ಕಿಡಿ:
ವಿಧಾನಸಭಾ ಚುನಾವಣೆ ಹಿನ್ನೆಲೆ ಇತ್ತೀಚಿಗೆ ಕಾಂಗ್ರೆಸ್ ನಾಯಕರು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಅಮಿತ್ ಶಾ ತಿರುಗೇಟು ನೀಡಿದರು. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರು ಅಸ್ಸಾಂ ಜನತೆ ಸುರಕ್ಷತೆ ಬಗ್ಗೆ ಮಾತನಾಡುತ್ತಾರೆ. ನಾವು ಇಂದು ಅವರಿಗೊಂದು ಬಹಿರಂಗ ಪ್ರಶ್ನೆಯನ್ನು ಕೇಳುತ್ತೇನೆ. ನೀವು ಬದ್ರುದ್ದೀನ್ ಅಜ್ಮಲ್ ಅಂಥವರೊಂದಿಗೆ ಸೇರಿಕೊಂಡು ಈ ಕೆಲಸವನ್ನು ಮಾಡುವುದಕ್ಕೆ ಸಾಧ್ಯವೇ ಎಂದು ಅಮಿತ್ ಶಾ ಕಿಡಿ ಕಾರಿದ್ದಾರೆ.
ಅಸ್ಸಾಂನಲ್ಲಿ ಮೂರು ಹಂತದ ಚುನಾವಣೆ:
ಅಸ್ಸಾಂ ವಿಧಾನಸಭೆಯ 126 ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 27ರಂದು ಮೊದಲ ಹಂತದಲ್ಲಿ 47 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಏಪ್ರಿಲ್.1ರಂದು 39 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಅಂತಿಮವಾಗಿ ಏಪ್ರಿಲ್ 6ರಂದು 40 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಮೇ.2ರಂದು ಅಂತಿಮ ಫಲಿತಾಂಶ ಹೊರ ಬೀಳಲಿದೆ.