ಜಿನ್ನಾ ಹಾದಿ ಅನುಸರಿಸುತ್ತಿರುವ ರಾಹುಲ್ ಗಾಂಧಿ; ಶಿವರಾಜ್ ಸಿಂಗ್ ಚೌಹಾಣ್ ಟೀಕೆ
ಅಸ್ಸಾಂ, ಮಾರ್ಚ್ 15: ಕಾಂಗ್ರೆಸ್ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಜಿನ್ನಾ ಹೆಜ್ಜೆಯನ್ನು ಅನುಸರಿಸುತ್ತಿದ್ದಾರೆ. ಇದು ದೇಶವನ್ನು ನಾಶಪಡಿಸುವ ಹಾದಿಯಾಗಲಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಆರೋಪಿಸಿದ್ದಾರೆ.
ಅಸ್ಸಾಂನ ನಹರ್ ಕಟಿಯಾದಲ್ಲಿ ಸೋಮವಾರ ನಡೆದ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, "ಕಾಂಗ್ರೆಸ್ ಮಹಾತ್ಮಾ ಗಾಂಧಿ ಅವರ ಹೆಜ್ಜೆಯಲ್ಲಿ ನಡೆಯುತ್ತಿಲ್ಲ. ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ಮೊಹಮದ್ ಅಲಿ ಜಿನ್ನಾ ಹೆಜ್ಜೆಯನ್ನು ಅನುಸರಿಸುತ್ತಿದ್ದಾರೆ. ಇದು ಅಸ್ಸಾಂ ಹಾಗೂ ಇಡೀ ಭಾರತವನ್ನೇ ನಾಶ ಮಾಡುತ್ತದೆ" ಎಂದು ಹೇಳಿದ್ದಾರೆ.
ಅಸ್ಸಾಂನಲ್ಲಿ ಕಾಂಗ್ರೆಸ್ ಎಐಯುಡಿಎಫ್ ಜೊತೆ, ಪಶ್ಚಿಮ ಬಂಗಾಳದಲ್ಲಿ ಐಎಸ್ಎಫ್ ಜೊತೆ ಹಾಗೂ ಕೇರಳದಲ್ಲಿ ಐಯುಎಂಎಲ್ ಜೊತೆ ಮೈತ್ರಿ ಮಾಡಿಕೊಂಡಿರುವುದರ ಕುರಿತು ದೂರಿದ್ದು, ಸ್ವಾತಂತ್ರ್ಯ ನಂತರದಲ್ಲಿ ಈಶಾನ್ಯ ರಾಜ್ಯಗಳಲ್ಲಿ ಕಾಂಗ್ರೆಸ್ನಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಆರೋಪಿಸಿದ್ದಾರೆ.

ಅಸ್ಸಾಂನಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 27 ರಂದು ಮೊದಲ ಹಂತ, ಏಪ್ರಿಲ್ 1ರಂದು ಎರಡನೇ ಹಂತ ಹಾಗೂ ಏಪ್ರಿಲ್ 6ರಂದು ಮೂರನೇ ಹಂತದ ಚುನಾವಣೆ ನಡೆಯಲಿರುವುದಾಗಿ ಆಯೋಗ ತಿಳಿಸಿದೆ. ಮೇ 2ರಂದು ಫಲಿತಾಂಶ ಹೊರಬೀಳಲಿದೆ. 126 ಸೀಟುಗಳಿಗೆ ಚುನಾವಣೆ ನಡೆಯಲಿದ್ದು, ಪರಿಶಿಷ್ಟ ಜಾತಿಗೆ ಎಂಟು ಹಾಗೂ ಪರಿಶಿಷ್ಟ ಪಂಗಡಕ್ಕೆ 16 ಸೀಟುಗಳನ್ನು ಮೀಸಲಿರಿಸಲಾಗಿದೆ.












Click it and Unblock the Notifications