ಹಾಸನದಲ್ಲಿ 100 ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢ
ಹಾಸನ, ಆಗಸ್ಟ್ 07: ಹಾಸನ ಜಿಲ್ಲೆಯ ಎರಡು ಕಾಲೇಜಿನ ನೂರು ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಶುಕ್ರವಾರ ಕೊರೊನಾ ಸೋಂಕು ದೃಢಪಟ್ಟಿದೆ.
ಕೇರಳದಿಂದ ನರ್ಸಿಂಗ್ ಪರೀಕ್ಷೆ ಬರೆಯಲು ಹಾಸನಕ್ಕೆ ಬಂದಿದ್ದ 21 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿದ್ದಂತೆ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಆಗ ನೂರು ವಿದ್ಯಾರ್ಥಿಗಳಲ್ಲಿ ಸೋಂಕು ಇರುವುದು ಪತ್ತೆಯಾಗಿದೆ.
ರಾಜ್ಯದಲ್ಲಿ ಕೊರೊನಾ 3ನೇ ಅಲೆ ಎದುರಿಸಲು ಆಮ್ಲಜನಕ ಶೇಖರಣೆ
ಹಾಸನದಲ್ಲಿ ನರ್ಸಿಂಗ್ ಪರೀಕ್ಷೆ ಆಯೋಜಿಸಲಾಗಿದ್ದು, ಪರೀಕ್ಷೆ ಬರೆಯಲು ಕೇರಳದಿಂದ ಒಟ್ಟು 48 ವಿದ್ಯಾರ್ಥಿಗಳು ಬಂದಿದ್ದರು. ಅವರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ನಂತರ ಅವರಲ್ಲಿ 21 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿತ್ತು.
ಈ ಇಪ್ಪತ್ತೊಂದು ವಿದ್ಯಾರ್ಥಿಗಳ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ 24 ಮಂದಿಯನ್ನು ಕ್ವಾರಂಟೈನ್ನಲ್ಲಿರಿಸಲಾಗಿದೆ ಹಾಗೂ ಅವರಿಗೆ ಕೊರೊನಾ ಲಸಿಕೆಯನ್ನು ನೀಡಲಾಗಿದೆ. "ಜುಲೈ 17ರಿಂದ 21ರ ನಡುವೆ ಕೇರಳದಿಂದ ವಿದ್ಯಾರ್ಥಿಗಳು ಜಿಲ್ಲೆಗೆ ಬಂದಿದ್ದಾರೆ. ಜುಲೈ 26ರಂದು ಪರೀಕ್ಷೆ ನಿಗದಿಯಾಗಿತ್ತು" ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ವಿಜಯ್ ಮಾಹಿತಿ ನೀಡಿದ್ದಾರೆ.
ಎರಡು ಕಾಲೇಜುಗಳಿಂದ ಒಟ್ಟು ನೂರು ವಿದ್ಯಾರ್ಥಿಗಳಿಗೆ ಸೋಂಕು ತಗುಲಿದ್ದು, ಅವರಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದಿರಲಿಲ್ಲ. ಎಲ್ಲರನ್ನೂ ಖಾಸಗಿ ಕೋವಿಡ್ ಕೇಂದ್ರಗಳಲ್ಲಿ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಭಕ್ತರ ದರ್ಶನಕ್ಕೆ ತೆರೆದ ಬೇಲೂರು ಚೆನ್ನಕೇಶವ ದೇವಾಲಯ
ಕೇರಳದ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗುತ್ತಿದ್ದಂತೆ ಜಿಲ್ಲೆಯ ಒಂಬತ್ತು ನರ್ಸಿಂಗ್ ಕಾಲೇಜುಗಳ ಸುಮಾರು 900 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಅದರಲ್ಲಿ ನೂರು ವಿದ್ಯಾರ್ಥಿಗಳಲ್ಲಿ ಸೋಂಕು ಕಂಡುಬಂದಿದೆ.
ಕರ್ನಾಟಕದ ಕೊರೊನಾ ಪ್ರಕರಣ: ಕರ್ನಾಟಕದಲ್ಲಿ ಶುಕ್ರವಾರ 1805 ಕೊರೊನಾ ಸೋಂಕು ಪತ್ತೆಯಾಗಿದೆ. ಒಂದು ದಿನದಲ್ಲಿ 1854 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸೋಂಕಿನಿಂದ 36 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 29,15,317 ಆಗಿದೆ. ಒಟ್ಟು ಸಾವಿನ ಪ್ರಕರಣಗಳ ಸಂಖ್ಯೆ 36,741 ಆಗಿದ್ದು, ಇಲ್ಲಿಯವರೆಗೆ ಒಟ್ಟು 28,54,222 ಸೋಂಕಿತರು ಗುಣಮುಖರಾಗಿದ್ದಾರೆ.
ಕೇರಳದಲ್ಲಿ ಸೋಂಕು ಹೆಚ್ಚಾಗಿರುವ ಕಾರಣ ಗಡಿ ಜಿಲ್ಲೆಗಳಲ್ಲಿ ಬಿಗಿ ಕ್ರಮ ತೆಗೆದುಕೊಳ್ಳಲಾಗಿದೆ. ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಗೆ ಸಿದ್ಧತೆ ನಡೆಸಲಾಗಿದ್ದು, ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಹಾಗೂ ಮಹಾರಾಷ್ಟ್ರ, ಕೇರಳದ ಗಡಿಯಲ್ಲಿರುವ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ.
ಕೊರೊನಾ ನಿಯಂತ್ರಣ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ತಜ್ಞರ ಜೊತೆ ಸಭೆ ನಡೆಸಿದ ಬಳಿಕ ಈ ನಿರ್ಧಾರ ಪ್ರಕಟವಾಗಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಬೆಳಗಾವಿ, ಬೀದರ್, ಕಲುಬುರಗಿ, ವಿಜಯಪುರದಲ್ಲಿ ಶನಿವಾರ ಮತ್ತು ಭಾನುವಾರ ಲಾಕ್ಡೌನ್ ಘೋಷಣೆಯಾಗಿದೆ. ಮುಂಬರುವ ಹಬ್ಬದ ಕಾಲಾವಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಆಗಸ್ಟ್ 7, 2021 ರಿಂದ ಆಗಸ್ಟ್ 16ರವರೆಗೆ ಈ ನಿಯಮಗಳು ಅನ್ವಯವಾಗುವುದಾಗಿ ತಿಳಿಸಿದ್ದಾರೆ.
ಆಗಸ್ಟ್ ಅಂತ್ಯ ಅಥವಾ ಸೆಪ್ಟೆಂಬರ್ ತಿಂಗಳಿನಲ್ಲಿ ಕೊರೊನಾ ಮೂರನೇ ಅಲೆ ರಾಜ್ಯವನ್ನು ಪ್ರವೇಶಿಸಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿರುವ ಬೆನ್ನಲ್ಲೇ ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಮ್ಲಜನಕ ಶೇಖರಣೆ ಕಾರ್ಯವೂ ಚುರುಕುಗೊಂಡಿದೆ.
ಇದರೊಂದಿಗೆ, ರಾಜ್ಯದಲ್ಲಿ ತುರ್ತಾಗಿ ಸೆರೋ ಸಮೀಕ್ಷೆ ನಡೆಸುವಂತೆ ಕೊರೊನಾ ತಾಂತ್ರಿಕ ಸಲಹಾ ಸಮಿತಿ ಶನಿವಾರ ಸರ್ಕಾರಕ್ಕೆ ಸಲಹೆ ನೀಡಿದೆ.
ಎರಡನೇ ಅಲೆಯ ನಂತರ ವೈರಸ್ನ ಪ್ರಸ್ತುತ ಸ್ಥಿತಿಯನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ಇದು ಮೂರನೆಯ ಅಲೆಯ ಪರಿಣಾಮವನ್ನು ತಗ್ಗಿಸಲು ನಮಗೆ ಸಹಾಯ ಮಾಡುತ್ತದೆ ಎಂದು ಟಿಎಸಿ ಅಧ್ಯಕ್ಷ ಡಾ.ಎಂ.ಕೆ.ಸುದರ್ಶನ್ ಹೇಳಿದ್ದಾರೆ.