ಬೇಲೂರು : ಪ್ರವಾಸೋದ್ಯಮ ಅಭಿವೃದ್ಧಿಗೆ 19 ಕೋಟಿ ಯೋಜನೆ
ಹಾಸನ, ಜೂನ್ 19 : 'ಬೇಲೂರು, ಹಳೇಬೀಡು, ಶ್ರವಣಬೆಳಗೊಳ ಸೇರಿದಂತೆ ಹಾಸನ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ವಿಶೇಷ ಗಮನ ಹರಿಸಲಾಗುತ್ತದೆ' ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೇಳಿದರು.
ಮಂಗಳವಾರ ಬೇಲೂರಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತಂತೆ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಸಚಿವರು, 'ವಿಶ್ವ ವಿಖ್ಯಾತ ಪ್ರವಾಸಿ ತಾಣಗಳನ್ನು ಹೊಂದಿರುವ ಹಾಸನ ಜಿಲ್ಲೆಯ ಪ್ರವಾಸೋದ್ಯಮದ ಸಮಗ್ರ ಅಭಿವೃದ್ದಿಗೆ ಗಮನ ಹರಿಸಲಾಗುವುದು' ಎಂದರು.
'ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಜಿಲ್ಲೆಯ ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡುವಂತೆ ತಿಳಿಸಿದ್ದಾರೆ. ಬೇಲೂರು ದೇವಾಲಯದ ಸುತ್ತ ಹಾಗೂ ಪಟ್ಟಣ ವ್ಯಾಪ್ತಿಯಲ್ಲಿ ಪ್ರವಾಸೋದ್ಯಮ ಅಭಿವೃದ್ದಿಗೆ ಅಂದಾಜು 19 ಕೋಟಿ ರೂಗಳ ಯೋಜನೆ ಸಿದ್ಧ ಪಡಿಸಲಾಗಿದೆ' ಎಂದು ತಿಳಿಸಿದರು.

'ಬೇಲೂರು-ಹಳೆಬೀಡುಗಳಲ್ಲಿ ಒಟ್ಟಾರೆ 30 ಕೋಟಿ ರೂ. ಅಭಿವೃದ್ದಿ ಕಾಮಗಾರಿಗಳನ್ನು ಮೊದಲ ಹಂತದಲ್ಲಿ ಕೈಗೆತ್ತಿಕೊಳ್ಳಲಾಗುತ್ತದೆ. ಇಲಾಖೆ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ 15 ದಿನಗಳಲ್ಲಿ ಈಗಾಗಲೇ 2 ಬಾರಿ ಇಲಾಖಾ ಅಧಿಕಾರಿಗಳ ಸಭೆ ನಡೆಸಿ ಈ ಬಗ್ಗೆ ಚರ್ಚಿಸಲಾಗಿದೆ' ಎಂದು ಹೇಳಿದರು.
'ಬೇಲೂರಿನಲ್ಲಿ ಪಾರ್ಕಿಂಗ್ ವ್ಯವಸ್ಥೆ, ರಸ್ತೆ ವಿಸ್ತರಣೆ, ಪ್ರವಾಸಿ ಮಾಹಿತಿ ಕೇಂದ್ರದ ಬಲವರ್ಧನೆ, ಕ್ಯಾಂಟೀನ್ ಸೌಲಭ್ಯ ಮತ್ತಿತರ ಅಭಿವೃದ್ದಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಬೇಲೂರು ದೇವಾಲಯಕ್ಕೆ 900 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಶೇಷ ಸಂಭ್ರಮಾಚರಣೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಚಿಂತನೆ ಇದೆ' ಎಂದರು.
'ರಾಜ್ಯದ ಎಲ್ಲಾ ಪ್ರವಾಸಿ ತಾಣಗಳಲ್ಲಿ ಶೌಚಾಲಯ ಹಾಗೂ ಇತರೆ ಮೂಲಭೂತ ಸೌಕರ್ಯಗಳ ಪೂರೈಕೆಗೆ ಮೊದಲ ಆದ್ಯತೆ ನೀಡಲಾಗುವುದು. ಬೇಲೂರಿನಲ್ಲಿ ಹಾಲಿ ಇರುವ ವಸತಿ ಸೌಲಭ್ಯದ ಕೊರತೆಯನ್ನು ನೀಗಿಸಲಾಗುವುದು' ಎಂದು ಸಚಿವ ಸಾ.ರಾ.ಮಹೇಶ್ ಭರವಸೆ ನೀಡಿದರು.












Click it and Unblock the Notifications