ಹಾಸನ ವಿಮಾನ ನಿಲ್ದಾಣ ಜಾಗದ; ವಿದ್ಯುತ್ ಮಾರ್ಗ ಸ್ಥಳಾಂತರಕ್ಕೆ ಸೂಚನೆ
ಹಾಸನ, ಮಾರ್ಚ್ 01: ಹಾಸನದ ಉದ್ದೇಶಿತ ವಿಮಾನ ನಿಲ್ದಾಣ ಪ್ರದೇಶದಲ್ಲಿರುವ ವಿದ್ಯುತ್ ಮಾರ್ಗಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಇಂಧನ ಇಲಾಖೆ ಹಾಗೂ ಮೂಲ ಸೌಕರ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್ ಹಾಸನದ ಉದ್ದೇಶಿತ ವಿಮಾನ ನಿಲ್ದಾಣ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದರು.
ಉದ್ದೇಶಿತ ಪ್ರದೇಶದಲ್ಲಿರುವ ವಿದ್ಯುತ್ ಮಾರ್ಗಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ವಿಮಾನ ನಿಲ್ದಾಣಕ್ಕೆ ಈಗಾಗಲೇ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ.

ವಿಮಾನ ನಿಲ್ದಾಣದ ಅಕ್ಕ ಪಕ್ಕದ ಎರಡು ಬದಿಯಲ್ಲಿ 3 ರಿಂದ 4 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ವಿದ್ಯುತ್ ಮಾರ್ಗಗಳು ಇರುವಂತಿಲ್ಲ. ಆದ್ದರಿಂದ, ಪ್ರದೇಶದಲ್ಲಿರುವ ವಿದ್ಯುತ್ ಮಾರ್ಗ ಸ್ಥಳಾಂತರಕ್ಕೆ ಸೂಚನೆ ಕೊಡಲಾಗಿದೆ.
ಕೆಪಿಟಿಸಿಎಲ್ ಮುಖ್ಯ ಇಂಜಿನಿಯರ್ ನಾಗಾರ್ಜುನ ಅವರು ಮಾತನಾಡಿದ್ದು, "ವಿಮಾನ ನಿಲ್ದಾಣಕ್ಕೆ ಗುರುತಿಸಿರುವ ವ್ಯಾಪ್ತಿಯಲ್ಲಿ ಒಟ್ಟು 68 ಟವರ್ಗಳಿವೆ. 6 ರಿಂದ 7 ತಿಂಗಳೊಳಗೆ ವಿದ್ಯುತ್ ಮಾರ್ಗ ತೆರವುಗೊಳಿಸಲಾಗುತ್ತದೆ" ಎಂದು ಹೇಳಿದ್ದಾರೆ.
ಸರ್ಕಾರದ ಹಂತದಲ್ಲಿ ಹಾಸನ ವಿಮಾನ ನಿಲ್ದಾಣ ಪ್ರಾರಂಭಕ್ಕಾಗಿ ಯೋಜನೆ ರೂಪಿಸಲಾಗುತ್ತಿದೆ. ವಿಮಾನ ನಿಲ್ದಾಣ ಕಾಮಗಾರಿ ಆರಂಭಿಸಲು ಒಪ್ಪಿಗೆ ನೀಡಬೇಕು ಎಂದು ಹಾಸನ ಶಾಸಕ ಪ್ರೀತಂ ಗೌಡ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ಮಾಡಿ ಮನವಿ ಮಾಡಿದ್ದಾರೆ.

ದಶಕಗಳ ಕನಸು; ಹಾಸನದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಬೇಕು ಎಂಬುದು ದಶಕಗಳ ಕನಸು. ಬೂವನಹಳ್ಳಿ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಿಸಬೇಕು ಎಂಬ ಪ್ರಸ್ತಾವನೆಯ ಕಡತ ಸಿದ್ದಗೊಂಡು ದಶಕಗಳು ಕಳೆದರೂ ರಾಜಕೀಯ ಕಾರಣಗಳಿಗಾಗಿ ಅದು ಮುಂದಕ್ಕೆ ಸಾಗಿಲ್ಲ.
1965ರಲ್ಲಿಯೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ 150 ಎಕರೆ ಭೂಮಿ ಸ್ವಾಧೀನ ಮಾಡಿಕೊಳ್ಳಲಾಗಿತ್ತು. ಎಚ್. ಡಿ. ದೇವೇಗೌಡರು ಯೋಜನೆ ಬಗ್ಗೆ ಆಸಕ್ತಿ ತೋರಿದಾಗ 536 ಎಕರೆ ಭೂಮಿ ಸ್ವಾಧೀನ ಮಾಡಿಕೊಳ್ಳಲಾಯಿತು. ಆದರೆ, ಕಡತಗಳು ಮಾತ್ರ ಮುಂದಕ್ಕೆ ಹೋಗದೆ ಯೋಜನೆ ಕುಂಟುತ್ತಾ ಸಾಗಿದೆ.












Click it and Unblock the Notifications