ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯಿಸಿ ಅರಸೀಕೆರೆ ಬಂದ್ ಯಶಸ್ವಿ
ಹಾಸನ, ಡಿಸೆಂಬರ್ 17: ಕೊಬ್ಬರಿಗೆ ಬೆಂಬಲ ಬೆಲೆ ಕೊಡಬೇಕು ಎಂದು ಒತ್ತಾಯಿಸಿ ಶುಕ್ರವಾರ ಅರಸೀಕೆರೆ ಬಂದ್ಗೆ ಕರೆ ನೀಡಲಾಗಿತ್ತು. ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಹಾಗೂ ರೈತರು ಕರೆ ನೀಡಲಾಗಿದ್ದು, ಬಂದ್ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ.
ಹಳ್ಳಿಗಳಿಂದ ರೈತರು ತಮ್ಮ ಎತ್ತಿನಗಾಡಿಗಳ ಮೂಲಕ ಬಂದು, ಸರ್ಕಾರ ವಿರುದ್ಧ ಧಿಕ್ಕಾರ ಕೂಗಿದರು. ಅರಸೀಕೆರೆ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದ ರೈತರು, ಕೊಬ್ಬರಿಗೆ ಶೀಘ್ರವೇ ಸರ್ಕಾರ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ತಡೆಗೆ ಸರ್ಕಾರ ಕ್ರಮ: ಕೆ. ಗೋಪಾಲಯ್ಯ
ಹಾಸನ ಜಿಲ್ಲೆಯಲ್ಲಿ ಲಕ್ಷಾಂತರ ರೈತರು ತೆಂಗಿನ ಬೆಳೆಯನ್ನು ನಂಬಿ ಬದುಕುತ್ತಿದ್ದಾರೆ. ಅರಸೀಕೆರೆ, ಹಾಸನ, ಚನ್ನರಾಯಪಟ್ಟಣ, ಬೇಲೂರು, ಅರಕಲಗೂಡು ತಾಲೂಕು ಸೇರಿದಂತೆ ಜಿಲ್ಲೆಯಲ್ಲಿ ಅತಿ ಹೆಚ್ಚು ರೈತರು ತೆಂಗಿನ ಮರಗಳನ್ನು ಬೆಳೆದಿದ್ದಾರೆ. ಕಳೆದ ಹದಿನೈದು ವರ್ಷಗಳ ಹಿಂದೆ ನುಸಿ ರೋಗ, ಮಳೆ ಕೊರತೆ, ಬೆಂಕಿ ರೋಗಕ್ಕೆ ತುತ್ತಾಗಿ ಕೋಟ್ಯಾಂತರ ತೆಂಗಿನ ಮರಗಳು ನಾಶವಾಗಿ ರೈತರು ತೀವ್ರ ಸಂಕಷ್ಟ ಎದುರಿಸುವಂತಾಯಿತು. ತೆಂಗು ಬೆಳೆಗಾರರಿಗೆ ಪರಿಹಾರ ನೀಡುವಂತೆ ಸಾಕಷ್ಟು ಹೋರಾಟಗಳು ನಡೆದವು. ಎಚ್.ಡಿ.ಕುಮಾರಸ್ವಾಮಿ ಎರಡನೇ ಭಾರಿ ಮುಖ್ಯಮಂತ್ರಿಯಾದಾಗ ತೆಂಗಿನ ಮರಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ರೈತರಿಗೆ ಪರಿಹಾರ ನೀಡಿದರು.
ಇದೀಗ ಎಲ್ಲೆಡೆ ಉತ್ತಮ ಮಳೆಯಾಗಿರುವುದರಿಂದ ಇಳುವರಿ ಹೆಚ್ಚಾಗಿದೆ. ಆದರೆ ಗಾಯದ ಮೇಲೆ ಬರೆ ಎನ್ನುವಂತೆ ಕೊಬ್ಬರಿ ಬೆಲೆ ಸಂಪೂರ್ಣವಾಗಿ ಕುಸಿತವಾಗಿದೆ. ಕ್ವಿಂಟಾಲ್ಗೆ 19,500 ರೂ ಇದ್ದ ಧಾರಣೆ ಈಗ 11000 ಕುಸಿದಿದೆ. ಇದರಿಂದಾಗಿ ರೈತರು ತೀವ್ರ ನಷ್ಟ ಅನುಭವಿಸುವಂತಾಗಿದೆ. ಹಾಗಾಗಿ ಕೊಬ್ಬರಿಗೆ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಒತ್ತಾಯಿಸಿ ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡ ನೇತೃತ್ವದಲ್ಲಿ ಶುಕ್ರವಾರ ಅರಸೀಕೆರೆ ಬಂದ್ಗೆ ಕರೆ ನೀಡಲಾಗಿತ್ತು.
Mandous Cyclone: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಡಿ.13 ರವರೆಗೆ ಮಳೆ
ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಬೆಳಗ್ಗೆಯಿಂದ ಸಂಜೆಯವರೆಗೆ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಮುಚ್ಚಿ ಬಂದ್ಗೆ ಬೆಂಬಲ ವ್ಯಕ್ತಪಡಿಸಿದರು. ವಾಹನ ಸಂಚಾರ ಎಂದಿನಂತಿದ್ದು, ಬಂದ್ ಹಿನ್ನಲೆಯಲ್ಲಿ ಕೆಲವು ಶಾಲಾ, ಕಾಲೇಜುಗಳ ಆಡಳಿತ ಮಂಡಳಿ ರಜೆ ಘೋಷಣೆ ಮಾಡಿದ್ದವು.
ಅರಸೀಕೆರೆ ಪ್ರವಾಸಿಮಂದಿರದಿಂದ ಸಾವಿರಾರು ರೈತರು ನೂರಾರು ಟ್ರ್ಯಾಕ್ಟರ್ಗಳಲ್ಲಿ ಎಪಿಎಂಸಿ ಮಾರುಕಟ್ಟೆವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪ್ರತಿಭಟನೆ ಮೆರವಣಿಗೆ ವೇಳೆ ಸಾರ್ವಜನಿಕರಿಗೆ ತೆಂಗಿನ ಕಾಯಿಗಳನ್ನು ವಿತರಿಸಲಾಯಿತು. ಕೂಡಲೇ ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸುವಂತೆ ರೈತರು ಸರ್ಕಾರವನ್ನು ಒತ್ತಾಯಿಸಿದರು. ಶಾಸಕ ಕೆ.ಎಂ.ಶಿವಲಿಂಗೇಗೌಡ ಕೆಲ ತಿಂಗಳಿನಿಂದ ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದು, ಈ ಹೋರಾಟದ ನಡೆ ಕೂಡ ತೀವ್ರ ಕುತೂಹಲ ಮೂಡಿಸಿದೆ.
ಒಟ್ಟಿನಲ್ಲಿ ಒಂದಲ್ಲ ಒಂದು ರೀತಿಯಲ್ಲಿ ರೈತರಿಗೆ ಸಂಕಷ್ಟಗಳ ಸರಮಾಲೆ ಎದುರಾಗುತ್ತಿದ್ದು ತೀವ್ರ ಸಮಸ್ಯೆಗೆ ಸಿಲುಕಿದ್ದಾರೆ. ಇದೀಗ ಕೊಬ್ಬರಿ ಬೆಲೆ ಕುಸಿತದಿಂದ ರೈತರು ತೀವ್ರ ಸಂಕಷ್ಡ ಎದುರಾಗಿದೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸಿ ರೈತರ ನೆರವಿಗೆ ಧಾವಿಸಬೇಕು ಎನ್ನುವುದು ಸಾವಿರಾರು ರೈತರ ಒತ್ತಾಯವಾಗಿದೆ.