ರೋಹಿಣಿ ಸಿಂಧೂರಿ ವರ್ಗಾವಣೆ ವಿರೋಧಿಸಿ ಬಿಜೆಪಿ ಪ್ರತಿಭಟನೆ
ಹಾಸನ, ಜನವರಿ 23: ದಕ್ಷ, ಪ್ರಾಮಾಣಿಕ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗುತ್ತಿರುವ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರಕಲಗೂಡು ಮಂಜು ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಯಾವುದೇ ಆರೋಪವಿಲ್ಲದಿದ್ದರೂ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಮಾಡಿರುವುದು ಸರಿಯಲ್ಲ ಎಂದು ಬಿಜೆಪಿ ಪ್ರತಿಭಟನೆಗೆ ನಮ್ಮ ಬೆಂಬಲ ವ್ಯಕ್ತಪಡಿಸಿದ್ದೇವೆ ಎಂದು ದಲಿತ ಮುಖಂಡ ಶಿವಕುಮಾರ್ ಹೇಳಿದ್ದಾರೆ.
ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಸೇರಿದಂತೆ 6 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ರೋಹಿಣಿ ಸಿಂಧೂರಿ ಅವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದೂರು ನೀಡಲಾಗಿತ್ತು.

ಹಾಸನದ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿರುವುದರಿಂದ ಐದು ವರ್ಷಗಳಲ್ಲಿ6ನೇ ಜಿಲ್ಲಾಧಿಕಾರಿಯನ್ನು ಕಂಡಂತಾಗಿದೆ.
ರೋಹಿಣಿ ಸಿಂಧೂರಿ ದಾಸರಿ ಅವರನ್ನು ಕರ್ನಾಟಕ ರಾಜ್ಯ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ನಿಗಮದ (ಕೆಎಸ್ಐಐಡಿಸಿ) ವ್ಯವಸ್ಥಾಪಕ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ. ಎಂ.ವಿ.ವೆಂಕಟೇಶ್ ಅವರು ಹಾಸನದ ನೂತನ ಡಿಸಿಯಾಗಿ ನೇಮಕವಾಗಿದ್ದಾರೆ.
ರೋಹಿಣಿ ಸಿಂಧೂರಿ ಅವರು ಜಿಲ್ಲಾಧಿಕಾರಿಯಾಗಿ ಬಂದ ಮೇಲೆ ಜಿಲ್ಲೆಯಲ್ಲಿ ಜನಪರ ಕಾರ್ಯಗಳು ಹೆಚ್ಚಾಗಿವೆ. ಬೇಲೂರು ತಾಲೂಕಿನಲ್ಲಿ ಜ್ಯೂನಿಯರ್ ಕಾಲೇಜ್ ಮೈದಾನವು ಅಕ್ರಮವಾಗಿ ಪರಭಾರೆಯಾಗುವುದನ್ನು ತಪ್ಪಿಸಿದ್ದಾರೆ. ಜಿಲ್ಲೆಯಲ್ಲಿನ ಕಂದಾಯ ಇಲಾಖೆ ಅಕ್ರಮಗಳಿಗೆ ಕಡಿವಾಣ ಬಿದ್ದಿದೆ.
ಪಡಿತರ ಚೀಟಿ ವಿತರಣೆಗೆ ಕ್ರಮ ವಹಿಸಿದ ಜಿಲ್ಲಾಧಿಕಾರಿಗಳು, ಬೆಳೆ ಸಮೀಕ್ಷೆಯಲ್ಲಿ ಹಾಸನವನ್ನು 2ನೇ ಸ್ಥಾನಕ್ಕೇರಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಜಮೀನು ಮಂಜೂರಾತಿಗಾಗಿ ಪ್ರಸ್ತಾವನೆ ಸಲ್ಲಿಸಿದ್ದಾರೆ.
ಶ್ರವಣಬೆಳಗೊಳದಲ್ಲಿ ಮಹಾ ಮಸ್ತಕಾಭಿಷೇಕದ ಅಂಗವಾಗಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದಾರೆ. ಅರಸೀಕೆರೆಯಲ್ಲಿ ಮೇವು ಶೇಖರಣಾ ಕೇಂದ್ರ ಆರಂಭಿಸಿದ್ದಾರೆ. ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದರು.
ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕರಿಸಲು ವೆಬ್ ಪೋರ್ಟಲ್ ವ್ಯವಸ್ಥೆ ಜಾರಿಗೊಳಿಸಿದ್ದಾರೆ. ಪರಿಸ್ಥಿತಿ ಹೀಗಿರುವಾಗ, ಜನರ ಆಶಯಕ್ಕೆ ವಿರುದ್ಧವಾಗಿ ರೋಹಿಣಿ ಅವರನ್ನು ವರ್ಗಾವಣೆ ಮಾಡಿರುವುದರಿಂದ ಜಿಲ್ಲೆಗೆ ಅನ್ಯಾಯವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.












Click it and Unblock the Notifications