ಆಮ್ಲಜನಕದ ಪೈಪ್ಲೈನ್ ಅಳವಡಿಕೆ ಶೀಘ್ರವೇ ಪೂರ್ಣ: ಹಾಸನ ಡಿಸಿ
ಹಾಸನ, ಆ. 25: ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ, ಡೆಡಿಕೇಟೆಡ್ ಕೋವಿಡ್ ಆರೋಗ್ಯ ಕೇಂದ್ರ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಆಮ್ಲಜನಕದ ಸರಬರಾಜಿಗೆ ಪೈಪ್ಲೈನ್ ಅಳವಡಿಕೆಯನ್ನು ಆಗಸ್ಟ್ 30 ರೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಆರ್. ಗಿರೀಶ್ ಸೂಚಿಸಿದ್ದಾರೆ.
Recommended Video
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ವೈದ್ಯಕೀಯ ಆಮ್ಲಜನಕ ಉಪಕರಣಗಳ ಪೂರೈಕೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಈಗಾಗಲೇ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಮ್ಲಜನಕದ ಅಗತ್ಯವಿರುವ ಸೋಂಕಿತರ ಸಂಖ್ಯೆ ಮಿತಿಗಿಂತಲೂ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ತಾಲ್ಲೂಕು ಆಸ್ಪತ್ರೆಗಳಲ್ಲಿಯೂ ಸಹ ವೆಂಟಿಲೇಟರ್ ಸೌಲಭ್ಯವುಳ್ಳ ಕೋವಿಡ್ ಚಿಕಿತ್ಸೆ ನೀಡಬೇಕಾದ ಪರಿಸ್ಥಿತಿ ಉಂಟಾಗುತ್ತಿರುವುದರಿಂದ ಜಿಲ್ಲೆಗೆ ಆಮ್ಲಜನಕ ಪೂರೈಕೆಯಲ್ಲಿ ಕೊರತೆಯುಂಟಾಗದಂತೆ ನಿಗಾ ವಹಿಸಲು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕೋವಿಡ್-19 ಸೊಂಕಿತರ ತಪಾಸಣೆಗೆ ತಾಲ್ಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕಯುಕ್ತ ಹಾಸಿಗೆಗಳನ್ನು ಅಳವಡಿಸಿದ ನಂತರ ಅದನ್ನು ನಿರ್ವಹಿಸಲು ಸಿಬ್ಬಂದಿಗಳಿಗೆ ಸೂಕ್ತ ತರಬೇತಿಯನ್ನು ನೀಡುವಂತೆ ಅವರು ತಿಳಿಸಿದರು.

ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಆಮ್ಲಜನಕದ ಕೊರತೆಯುಂಟಾಗಬಾರದು, ಈ ನಿಟ್ಟಿನಲ್ಲಿ ಅಗತ್ಯ ಮಾನವ ಸಂಪನ್ಮೂಲ ಹಾಗೂ ಇತರೆ ವ್ಯವಸ್ಥೆಗಳನ್ನು ಸಮರ್ಪಕವಾಗಿ ಮಾಡಿಕೊಳ್ಳಬೇಕು, ಕೈಗಾರಿಕಾ ಆಮ್ಲಜನಕ ಹಾಗೂ ವೈದ್ಯಕೀಯ ಆಮ್ಲಜನಕ ಎರಡು ಒಂದೇ ರೀತಿಯದ್ದಾಗಿರುವುದರಿಂದ ತುರ್ತು ಸಂದರ್ಭಗಳಲ್ಲಿ ಕೈಗಾರಿಕಾ ಆಮ್ಲಜನಕವನ್ನು ವೈದ್ಯಕೀಯ ಆಮ್ಲಜನಕವನ್ನಾಗಿ ಪರಿವರ್ತಿಸಿ ಸಿಲಿಂಡರ್ಗಳನ್ನು ಭರ್ತಿಮಾಡಿಕೊಡಲು ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಿ, ಸಿಬ್ಬಂದಿಗಳ ಪ್ರತ್ಯೇಕ ತಂಡಗಳನ್ನು ರಚಿಸಿಕೊಳ್ಳಿ ಎಂದು ಅವರು ಸೂಚನೆಗಳನ್ನು ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ ಪರಮೇಶ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ|| ಕೃಷ್ಣಮೂರ್ತಿ, ಸಹಾಯಕ ಔಷಧ ನಿಯಂತ್ರಕ ಗಿರೀಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಬಿಯಂತರರಾದ ಗಿರೀಶ್, ಬಯೋ ಮೆಡಿಕಲ್ ಇಂಜಿನಿಯರ್ ಮಂಜುಳ ಹಾಗೂ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.












Click it and Unblock the Notifications