ಸಿದ್ದರಾಮಯ್ಯ ಫೋಟೋ ಇಟ್ಟು ಪೂಜೆ ಮಾಡ್ಬೇಕು..! ಶಾಸಕನಿಂದ ಗುಣಗಾನ
ಸಿಎಂ ಸಿದ್ದರಾಮಯ್ಯ ಅವರನ್ನು ಕೆಲವರು ಅನ್ನದ ದೇವರು ಎಂದು ಕರೆದಿರುವ ನಿದರ್ಶನಗಳಿವೆ. ಇನ್ನು ಕಾಂಗ್ರೆಸ್ ಶಾಸಕರು ಕೂಡ ಸಿದ್ದರಾಮಯ್ಯ ಅವರನ್ನು ದೇವರಿಗೆ ಹೋಲಿಸಿದ್ದಾರೆ. ಅಲ್ಲದೆ ಸಿದ್ದರಾಮಯ್ಯ ಅವರ ಫೋಟೋವನ್ನು ಮನೆಗಳಲ್ಲಿ ಇಟ್ಟು ಪೂಜೆ ಮಾಡಬೇಕು ಎಂದು ಗುಣಗಾನ ಮಾಡಿದ್ದಾರೆ.
ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಹಾಸನದಲ್ಲಿ ಈ ರೀತಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ಎತ್ತಿನಹೊಳೆ ಯೋಜನೆಯನ್ನು ಸಾಕಾರಗೊಳಿಸಿದರು. ಸಾವಿರಾರು ಅಡಿ ಆಳದಿಂದ ನೀರನ್ನು ಮೇಲಕ್ಕೆತ್ತಿ ಅರಸೀಕೆರೆಯಂತಹ ಬಯಲು ಸೀಮೆ ಭಾಗಕ್ಕೆ ಹರಿಸುವಂತಹ ಅವರ ಭಗೀರತ್ನ ಪ್ರಯತ್ನ ಮೆಚ್ಚಲೇಬೇಕು. ಅಂತಹ ಕೆಲಸವನ್ನು ರಾಜ್ಯ ರಾಜಕಾರಣದಲ್ಲಿ ಯಾವ ನಾಯಕರಿಂದಲೂ ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.

ಅರಸೀಕೆರೆಯ ಜನರು ಸಿಎಂ ಸಿದ್ದರಾಮಯ್ಯ ಅವರನ್ನು ಜೀವನಪರ್ಯಂತ ನೆನೆಯಲೇಬೇಕು. ಅಂತಹ ಕೆಲಸವನ್ನು ಅವರು ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಫೋಟೋಗಳನ್ನು ಅರಸೀಕೆರೆ ಜನ ಮನೆಗಳಲ್ಲಿಟ್ಟು ಪೂಜೆ ಮಾಡಬೇಕು. ಅವರನ್ನು ದೇವರ ರೂಪದಲ್ಲಿ ನೋಡಬೇಕು ಎಂದು ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ.
ಹಾಸನಾಂಬೆ ದರ್ಶನ ಪಡೆದ ಸಿಎಂ!
ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ಹಾಸನದ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿ, ದರ್ಶನ ಪಡೆದರು. ನಾಡಿನಲ್ಲಿ ಒಳ್ಳೆ ಮಳೆ, ಬೆಳೆಯಾಗಲಿ ಎಂದು ಕಳೆದ ಬಾರಿ ಹಾಸನಾಂಬೆಯ ಸನ್ನಿಧಿಯಲ್ಲಿ ಅತ್ಯಂತ ಶ್ರದ್ಧಾ-ಭಕ್ತಿಯಿಂದ ಪ್ರಾರ್ಥನೆ ಮಾಡಿದ್ದೆ. ಈ ಬಾರಿ ನಾಡಿನಲ್ಲಿ ಸಮೃದ್ಧ ಮಳೆ, ಬೆಳೆಯಾಗಿದೆ. ನಾಡು ಸರ್ವಜನಾಂಗದ ಶಾಂತಿಯ ತೋಟವಾಗಲಿ ಎಂದು ತಾಯಿಯಲ್ಲಿ ಮತ್ತೆ ಪ್ರಾರ್ಥನೆ ಮಾಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಹಾಸನ ನಗರ ಸಭೆಯನ್ನು ಮಹಾನಗರ ಪಾಲಿಕೆಯಾಗಿ ಉನ್ನತೀಕರಿಸಲು ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡಿದ್ದೇವೆ. ಹೇಮಾವತಿ ಜಲಾಶಯದ ಪ್ರದೇಶದಲ್ಲಿ ಉದ್ಯಾನವನ ನಿರ್ಮಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ. ಹಾಸನ ವಿಮಾನ ನಿಲ್ದಾಣವನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು. ಹೀಗೆ ಹಾಸನ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಪಣತೊಟ್ಟಿದೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.
ರಾಜ್ಯದಲ್ಲಿ ಒಳ್ಳೆ ಮಳೆ ಬೆಳೆಯಾಗಿದ್ದು, ಎಲ್ಲಾ ಜಲಾಶಯಗಳು ತುಂಬಿವೆ. ಜಲಾಶಯಗಳಲ್ಲಿ ಶೇ.90ರಷ್ಟು ನೀರು ಭರ್ತಿಯಾಗಿದೆ. ಸಮಾಜದಲ್ಲಿ ಅಸಮಾನತೆಯನ್ನು ಹೋಗಲಾಡಿಸುವುದು ನಮ್ಮೆಲ್ಲರ ಕರ್ತವ್ಯ. 2013 ರಿಂದ 2018ರವರೆಗೆ ಮುಖ್ಯಮಂತ್ರಿಯಾಗಿದ್ದಾಗ, ಬಡವರ ಕಾರ್ಯಕ್ರಮಗಳನ್ನು ಜಾರಿ ಮಾಡಲಾಗಿತ್ತು. 2023ರಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯಾದಾಗ, ಗ್ಯಾರಂಟಿ ಯೋಜನೆಗಳ ಮೂಲಕ ಎಲ್ಲ ಜಾತಿ, ಧರ್ಮದ, ಭಾಷೆಯ ಬಡವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸವನ್ನು ಮಾಡಲಾಗಿದೆ ಎಂದು ಹೇಳಿದರು.

ಜನಪರ ಯೋಜನೆಗಳನ್ನು ಜನರಿಗೆ ತಲುಪಿಸಿದಾಗ ಮಾತ್ರ ಸರ್ಕಾರದ ಉದ್ದೇಶ ಸಾರ್ಥಕವಾಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ಎಲ್ಲಾ ಶಾಸಕರು, ಸಚಿವರ ಪ್ರಯತ್ನ ನಿರಂತರವಾಗಿ ಇರುತ್ತದೆ ಎಂದು ಅಭಯ ನೀಡಿದರು. ಬಳಿಕ ಹಾಸನಾಂಬ ದೇವಿಯ ಜಾತ್ರೆಯ ಅಂಗವಾಗಿ ಬಣ್ಣಬಣ್ಣದ ವಿದ್ಯುತ್ ದೀಪಗಳಿಂದ ಸಿಂಗಾರಗೊಂಡ ಹಾಸನದ ಸೊಬಗನ್ನು ಕಣ್ತುಂಬಿಕೊಂಡರು. ತಾಯಿ ಹಾಸನಾಂಬೆಯ ಆಶೀರ್ವಾದ ನಾಡಿನ ಸಮಸ್ತ ಜನರ ಮೇಲಿರಲಿ ಎಂದು ಸಿದ್ದರಾಮಯ್ಯ ಪ್ರಾರ್ಥಿಸಿದರು.












Click it and Unblock the Notifications