ಮೊಬೈಲ್ ಆಪ್ ಮೂಲಕ ಬೆಳೆ ಕಟಾವು ಪ್ರಯೋಗ: ರೋಹಿಣಿ ಸಿಂಧೂರಿ
ಹಾಸನ, ಜುಲೈ 19: ಬೆಳೆ ಕಟಾವು ಪ್ರಯೋಗಗಳನ್ನು ನಿಗದಿತ ವೇಳೆಯಲ್ಲಿ ಮೊಬೈಲ್ ಆಪ್ಗಳ ಮೂಲಕ ನಡೆಸಿ. ಜತೆಗೆ ಯಾವುದೇ ಪ್ರಯೋಗಗಳು ಹಾಳಾಗದಂತೆ ಎಚ್ಚರ ವಹಿಸಿ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರು ಬುಧವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹಾಸನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ರೋಹಿಣಿ
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಬೆಳೆ ಕಟಾವು ಪ್ರಯೋಗಗಳನ್ನು ಮೊಬೈಲ್ ಆಪ್ಗಳ ಮೂಲಕ ನಡೆಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಈ ಸೂಚನೆ ನೀಡಿದರು.
ಬೆಳೆ ಕಟಾವು ಪ್ರಯೋಗಗಳ ಬಗ್ಗೆ ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸೂಕ್ತ ಮೇಲ್ವಿಚಾರಣೆ ನಡೆಸುವಂತೆ ನಿರ್ದೇಶನ ನೀಡಿದರು. ಬೆಳೆ ಕಟಾವು ಪ್ರಯೋಗಗಳ ಬಗ್ಗೆ ರೈತಾಪಿ ವರ್ಗಕ್ಕೆ ಹೆಚ್ಚಿನ ಜಾಗೃತಿ ಮೂಡಿಸುವ ಜೊತೆಗೆ ಅವರ ಕೃಷಿ ಚಟುವಟಿಕೆಗಳಿಗೆ ಅಗತ್ಯ ನೆರವು ಮತ್ತು ಅರಿವನ್ನು ನೀಡಬೇಕು ಎಂದು ಹೇಳಿದರು.
ಜಂಟಿ ಕೃಷಿ ನಿರ್ದೇಶಕರಾದ ರಾಮಚಂದ್ರಯ್ಯ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಮಲ್ಲಿಕಾರ್ಜುನ್ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.