ಹಾಸನ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್
ಹಾಸನ, ಮೇ 5: ಹಾಸನ ಜಿಲ್ಲೆಯಲ್ಲಿ ಕೊರೊನಾ ಸೋಂಕು ತೀವ್ರ ವೇಗದಲ್ಲಿ ಹರಡುತ್ತಿದ್ದರಿಂದ ಲಾಕ್ಡೌನ್ ಮಾಡುವ ನಿರ್ಧಾರ ಅನಿವಾರ್ಯವಾಗಿತ್ತು. ಹಾಸನ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ವಾರದಲ್ಲಿ ಮೂರು ದಿನ ಕಟ್ಟುನಿಟ್ಟಿನ ಲಾಕ್ಡೌನ್ ಮಾಡಲು ಸೂಚಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿ ಮಾಡಬೇಕು ಎಂಬ ಬಗ್ಗೆ ಪಕ್ಷಾತೀತವಾಗಿ ಎಲ್ಲ ಶಾಸಕರು ಜಿಲ್ಲಾಡಳಿತದ ಬೆಂಬಲಕ್ಕೆ ನಿಂತಿದ್ದಾರೆ. ನನ್ನ ಕ್ಷೇತ್ರದಲ್ಲಿ 1400 ಮಂದಿ ಹೋಂ ಐಸೊಲೇಶನ್ನಲ್ಲಿದ್ದಾರೆ. ಬೆಡ್ಗಳು ಸಿಗುತ್ತಿಲ್ಲ. ಇವರಿಂದ ಇನ್ನಷ್ಟು ಜನರಿಗೆ ಕೊರೊನಾ ಸೋಂಕು ಹರಡಬಹುದು ಎಂಬ ಭೀತಿಯಿದೆ ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಹೇಳಿದರು.
ಹಾಸನ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿ ಅನಿವಾರ್ಯವಾಗಿತ್ತು. ಜಿಲ್ಲೆಯ ಎಲ್ಲ ಶಾಸಕರು ಪಕ್ಷಾತೀತವಾಗಿ ಜಿಲ್ಲಾಡಳಿತ ಮತ್ತು ಸರ್ಕಾರವನ್ನು ಈ ನಿಟ್ಟಿನಲ್ಲಿ ಬೆಂಬಲಿಸುತ್ತಿದ್ದೇವೆ' ಎಂದು ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗಳಲ್ಲಿ ಕೊವಿಡ್ ಸಂಬಂಧಿತ ಸಮಸ್ಯೆಗಳನ್ನು ಸರಿಪಡಿಸಬೇಕು. ಮೆಡಿಕಲ್ ಅಕ್ಸಿಜನ್ ಸರಬರಾಜು ವ್ಯವಸ್ಥೆ ಜವಾಬ್ದಾರಿಯನ್ನು ಸಚಿವ ಜಗದೀಶ್ ಶೆಟ್ಟರ್ ಅವರಿಗೆ ವಹಿಸಲಾಗಿದೆ. ರೆಮ್ಡೆಸಿವರ್ ಪೂರೈಕೆ ನಿರ್ವಹಣೆ ಜವಾಬ್ದಾರಿಯನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ ಅವರು ವಹಿಸಿಕೊಂಡಿದ್ದಾರೆ.
ಆಸ್ಪತ್ರೆಗಳಲ್ಲಿನ ಬೆಡ್ಗಳ ಹೊಣೆಗಾರಿಕೆಯನ್ನು ಕಂದಾಯ ಸಚಿವ ಆರ್.ಅಶೋಕ್ ನೋಡಿಕೊಳ್ಳಲಿದ್ದು, ಹಾಗೆಯೇ, ಅರಣ್ಯ ಸಚಿವ ಅರವಿಂದ ಲಿಂಬಾವಳಿ, ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೂ ಕೆಲ ಜವಾಬ್ದಾರಿ ಹೊರಿಸಲಾಗಿದೆ. ರಾಜ್ಯದಲ್ಲಿ ಮಾಧ್ಯಮದವರನ್ನು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಅವರು ಮಂಗಳವಾರ ತಿಳಿಸಿದ್ದಾರೆ.
Recommended Video
ಇತರ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕನ್ನು ನಿಯಂತ್ರಣಗೊಳಿಸುವ ಸಲುವಾಗಿ ಕ್ರಮ ಕೈಗೊಳ್ಳಲಾಗುತ್ತಿದ್ದು, ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರ ಹೆಗಲಿಗೆ ಈ ಹೊಣೆ ನೀಡಲಾಗಿದೆ. ನಾಳೆಯಿಂದಲೇ ಜಿಲ್ಲಾ ಉಸ್ತುವಾರಿ ಸಚಿವರು ಅವರ ಜಿಲ್ಲೆಗಳಿಗೆ ಹೋಗಬೇಕು. ಅಲ್ಲಿಯೇ ಇದ್ದು, ಕೋವಿಡ್ ಪರಿಸ್ಥಿತಿ ನಿಭಾಯಿಸಬೇಕು. ಈ ಬಗ್ಗೆ ಸಭೆಯಲ್ಲಿ ಸೂಚಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಮಾಧ್ಯಮಗಳಿಗೆ ತಿಳಿಸಿದ್ದಾರೆ.