ಹಾಸನ: ಎತ್ತಿನಹೊಳೆ ಕಾಮಗಾರಿ ವೀಕ್ಷಣೆಗೆ ಆಗಮಿಸಿದ DCM ಡಿ.ಕೆ.ಶಿವಕುಮಾರ್
ಹಾಸನ, ಆಗಸ್ಟ್, 22: ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು (ಆಗಸ್ಟ್ 22) ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಬಳಿ ಎತ್ತಿನಹೊಳೆ ಕಾಮಗಾರಿ ವೀಕ್ಷಣೆ ಆಗಮಿಸಿದ್ದು, ಈ ವೇಳೆ ಕಾಮಗಾರಿ ಪ್ರಗತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಹಿಂದೆಯೂ ಡಿ.ಕೆ.ಶಿವಕುಮಾರ್ ಅವರು ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದಾಗಲೂ ಸಹ ಎತ್ತಿನಹೊಳೆ ಕಾಮಗಾರಿ ವೀಕ್ಷಣೆ ಮಾಡಿದ್ದರು. ಇದೀಗ ಸರ್ಕಾರ ಬಂದ ನಂತರ ಮೊದಲ ಬಾರಿಗೆ ಕಾಮಗಾರಿ ವೀಕ್ಷಣೆಗೆ ಆಗಮಿಸಿದ್ದಾರೆ.
ಇನ್ನು ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಎತ್ತಿನಹೊಳೆ ಯೋಜನೆಯ ಕುರಿತು ಹೆಬ್ಬನಹಳ್ಳಿಯ ಪವರ್ ಗ್ರಿಡ್ನಲ್ಲಿ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ, ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್, ಸಕಲೇಶಪುರ ಶಾಸಕ ಸಿಮೆಂಟ್ ಮಂಜು, ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಸತ್ಯಭಾಮ, ಎಸ್ಪಿ ಹರಿರಾಮ್ ಶಂಕರ್, ಸಿಇಓ ಪೂರ್ಣಿಮಾ ಸೇರಿದಂತೆ ಹಲವು ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.
ಸಭೆ ಬಳಿಕ ಡಿ.ಕೆ.ಶಿವಕುಮಾರ್ ಅವರು, ಸಕಲೇಶಪುರ ತಾದೊಡ್ಡನಾಗರ, ಕಾಡುಮನೆ ಎಸ್ಟೇಟ್ ಬಳಿಯೂ ಕಾಮಗಾರಿಯನ್ನು ವೀಕ್ಷಣೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ
ಮತ್ತೊಂದೆಡೆ ನಿನ್ನೆ ಕೃಷ್ಣರಾಜ ಸಾಗರದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಬಿಜೆಪಿ ಪಕ್ಷದ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದ್ದರು. ನಗರದ ಜಯ ಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರು ಕಿವಿ ಮೇಲೆ ಹೂವು ಇಟ್ಟುಕೊಂಡು, ಉರುಳಿ ಕಾಳು ಪ್ರದರ್ಶಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ವಾಹನ ಸಂಚಾರಕ್ಕೆ ಅಡ್ಡಿಪಡಿಸಿ ವೃತ್ತದಲ್ಲಿ ಬೆಂಕಿ ಹಾಕಿ ಅಕ್ರೋಶಿಸಿದ ಪ್ರತಿಭಟನಾಕಾರರು ಬೆಂಕಿ ನಂದಿಸಲು ಮುಂದಾದ ಪೊಲೀಸರ ಜೊತೆ ನೂಕಾಟ ನಡೆಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ ಪ್ರತಿಭಟನಕಾರರು ಕಾವೇರಿ ಕೊಳ್ಳದ ಪ್ರದೇಶದ ರೈತರಿಗೆ ನೀರು ಕೊಡದೆ ಜಮೀನು ಒಣಗಿಸಿ ಉರುಳಿ ಚೆಲ್ಲಿಸಲು ಮುಂದಾಗಿದೆ ಎಂದು ಕಿಡಿಕಾರಿದ್ದರು.
ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ ತಕ್ಷಣ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅಣತಿಯಂತೆ ಸುಪ್ರೀಂ ಕೋರ್ಟ್ ಮತ್ತು ಕಾವೇರಿ ನದಿ ಪ್ರಾಧಿಕಾರ ಮೆಚ್ಚಿಸಲು ಕಾವೇರಿ ಕೊಳ್ಳದ ಜಲಾಶಯಗಳಿಂದ ನೀರು ಬಿಡುಗಡೆ ಮಾಡಿ ರಾಜ್ಯದ ರೈತರಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.
ಕೆಆರ್ಎಸ್ನಲ್ಲಿ 113 ಅಡಿ ಇದ್ದ ನೀರು ಇದೀಗ 105 ಅಡಿಗೆ ಕುಸಿದಿದೆ, ಇದುವರೆಗೆ ಒಂದು ವಾರದಲ್ಲಿ 10 ಟಿಎಂಸಿ ನೀರು ಹರಿದುಹೋಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಅಭಾವ ಎದುರಾಗಲಿದೆ. ಈ ಮೂಲಕ ಕರ್ನಾಟಕ ರಾಜ್ಯದ ರೈತರಿಗೆ ದ್ರೋಹ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ನೀರನ್ನು ಬಿಟ್ಟು ಇದೀಗ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಅಷ್ಟೇ ಅಲ್ಲದೆ ಸರ್ವಪಕ್ಷ ಸಭೆ ಕರೆದಿರುವುದು ಕಾಂಗ್ರೆಸ್ ಸರ್ಕಾರದ ಹುನ್ನಾರವಾಗಿದೆ. ಮಂಡ್ಯ ಜಿಲ್ಲೆಯ ಶಾಸಕರು ಡಬಲ್ ಆಕ್ಟಿಂಗ್ ಬಿಡಬೇಕು, ರೈತರ ಎದುರು ನೀರು ಬಿಡಬೇಡಿ ಎಂದು ನಾಟಕವಾಡಿ ಅಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಎದುರು ತಲೆಕೆರೆದು ನಿಂತುಕೊಳ್ಳುತ್ತಾರೆ. ಏಕೆ ನೀರು ಬಿಟ್ಟಿದ್ದೀರಿ, ನಿಲ್ಲಿಸಿ ಎಂದು ಹೇಳುವ ತಾಕತ್ತು ಇವರಿಗಿಲ್ಲ ಎಂದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದುರಂಕಾರದ ಪರಮಾವಧಿಯಾಗಿದ್ದಾರೆ. ರೈತರೇ ಸುಪ್ರೀಂ ಕೋರ್ಟ್ಗೆ ಹೋಗುವುದಾದರೆ ನೀವು ಏಕೆ ಇದ್ದೀರಿ? ಕಾವೇರಿ ಕಣಿವೆ ರೈತರಿಗೆ ದ್ರೋಹ ಮಾಡಿರುವ ನಿಮಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ವೇಳೆ ಸಂಸದೆ ಸುಮಲತಾ ಅಂಬರೀಶ್, ಅಶ್ವತ್ಥ್ ನಾರಾಯಣ ಗೌಡ, ಪಿ.ಸಿ.ಮೋಹನ್, ಕೆ.ಸಿ.ನಂಜುಂಡೇಗೌಡ, ಕೆ.ಎಸ್.ಸಚ್ಚಿದಾನಂದ, ಅಶೋಕ್ ಜಯರಾಮ್ ಸೇರಿದಂತೆ ಮತ್ತಿತರರು ಇದ್ದರು.












Click it and Unblock the Notifications