100 ದಿನಗಳಲ್ಲಿ ಎತ್ತಿನಹೊಳೆಯಿಂದ ನೀರು ಹರಿಸಲಾಗುವುದು: ಡಿಕೆ ಶಿವಕುಮಾರ್
"ಮುಂದಿನ 100 ದಿನಗಳ ಒಳಗಾಗಿ ಎತ್ತಿನಹೊಳೆ ಮೊದಲ ಹಂತದ ಯೋಜನೆಯಲ್ಲಿ ನೀರು ಪಂಪ್ ಮಾಡಿ ಹರಿಸಲಾಗುವುದು" ಎಂದು ಡಿಸಿಎಂ ಹಾಗೂ ನೀರಾವರಿ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಎತ್ತಿನಹೊಳೆ ಯೋಜನೆ ಸಂಬಂಧ ಹಾಸನ ಜಿಲ್ಲೆ ಸಕಲೇಶಪುರದ ಹೆಬ್ಬನಹಳ್ಳಿ ಪವರ್ ಸಬ್ ಸ್ಟೇಷನ್ ಮತ್ತು ದೊಡ್ಡನಾಗರ ಪಂಪ್ ಹೌಸ್ಗೆ ಮಂಗಳವಾರ ಭೇಟಿ ನೀಡಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಶಿವಕುಮಾರ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

"ಪಶ್ಚಿಮ ಘಟ್ಟದಲ್ಲಿ ಹರಿಯುವ ನೀರಲ್ಲಿ ಕೋಲಾರದವರೆಗೆ ಒಟ್ಟು 24 ಟಿಎಂಸಿ ಹರಿಸುವುದು ಎತ್ತಿನಹೊಳೆ ಯೋಜನೆಯ ಉದ್ದೇಶ. ಈ ಹಿಂದೆ ಜಲ ಸಂಪನ್ಮೂಲ ಸಚಿವನಾಗಿದ್ದಾಗಲೂ ನಾನು ಇಲ್ಲಿಗೆ ಭೇಟಿ ಮಾಡಿ ಪರಿಶೀಲನೆ ನಡೆಸಿದ್ದೆ. ಕೆಲಸ ಆಗ ಎಲ್ಲಿತ್ತೋ ಈಗಲೂ ಅಲ್ಲೇ ಇದೆ." ಎಂದು ಹೇಳಿದರು.
ಈ ಯೋಜನೆ ವೆಚ್ಚ ಸದ್ಯಕ್ಕೆ 24 ಸಾವಿರ ಕೋಟಿ ರೂಪಾಯಿಗೆ ಏರಿಕೆ ಆಗಿದ್ದು, ಈ ಯೋಜನೆ ಪ್ರಗತಿ ಬಗ್ಗೆ ನನಗೆ ಸಮಾಧಾನ ಇಲ್ಲ. ಹೀಗಾಗಿ ನಾನೇ ಖುದ್ದಾಗಿ ಬಂದು ಪರಿಶೀಲನೆ ಮಾಡಿದ್ದೇನೆ. ಕೆಲವು ಪ್ರದೇಶಗಳಿಗೆ ಭೇಟಿ ನೀಡಿದ್ದೇನೆ. ಅಧಿಕಾರಿಗಳು ಅವರದೇ ಆದ ಕಾನೂನು ಬಳಸುತ್ತಿರುವುದರಿಂದ ಯೋಜನೆಗೆ ತೊಡಕಾಗಿದೆ ಎಂಬ ದೂರುಗಳು ಬಂದಿವೆ.
ಈ ಯೋಜನೆಗೆ ಎದುರಾಗಿರುವ ಸಮಸ್ಯೆಗಳಿಗೆ ಒಂದೊಂದಾಗಿ ಪರಿಹಾರ ನೀಡಲಾಗಿದೆ. ವಿದ್ಯುತ್ ಇಲಾಖೆ ಸಮಸ್ಯೆ, ಅರಣ್ಯ ಇಲಾಖೆ ಸಮಸ್ಯೆ, ಭೂ ಮಾಲೀಕರ ಸಮಸ್ಯೆ ಸೇರಿದಂತೆ ಎಲ್ಲದ್ದಕ್ಕೂ ಪರಿಹಾರ ಸೂಚಿಸಲಾಗಿದೆ.
ಈ ಯೋಜನೆ ಪೂರ್ಣಗೊಳಿಸಲು ಅಗತ್ಯ ಲೋಡ್ ಶೆಡ್ಡಿಂಗ್ಗೆ ಸೂಚನೆ ನೀಡಲಾಗಿದೆ. ಅರಣ್ಯ ಪ್ರದೇಶ ಸಮಸ್ಯೆಗಳ ಪರಿಹಾರಕ್ಕೆ ಸಹಕಾರ ನೀಡಲು ಅರಣ್ಯ ಇಲಾಖೆ ಅಧಿಕಾರಿಗಳು ಒಪ್ಪಿದ್ದಾರೆ. ಕಂದಾಯ ಭೂಮಿ ಸ್ವಾಧೀನ ಸಮಸ್ಯೆ ನಿವಾರಿಸುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ ಎಂದು ಹೇಳಿದರು.
100 ದಿನಗಳಲ್ಲಿ ಮೊದಲ ಹಂತದ ನೀರು ಪಂಪ್
ಅಧಿಕಾರಿಗಳ ಆಶ್ವಾಸನೆ ಮೇರೆಗೆ 100 ದಿನಗಳಲ್ಲಿ ಮೊದಲ ಹಂತದ ಯೋಜನೆಯ ನೀರನ್ನು ಪಂಪ್ ಮಾಡಲು ಕಾಲ ಮಿತಿ ನಿಗದಿ ಮಾಡಿದ್ದೇವೆ. ಈ ಭಾಗದ ರೈತರಿಗೆ ಬಾಕಿ ಇರುವ ಪರಿಹಾರಗಳನ್ನು ಆದ್ಯತೆ ಮೇರೆಗೆ ನೀಡಬೇಕು ಎಂದು ಹೇಳಿದ್ದೇನೆ ಎಂದರು.
ಕಳೆದ ಮೂರೂವರೆ ವರ್ಷ ಅವಧಿಯಲ್ಲಿ ಈ ಯೋಜನೆ ಹೆಚ್ಚು ಪ್ರಗತಿ ಕಂಡಿಲ್ಲ. ಈ ಯೋಜನೆಗೆ ಇದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ಇದಕ್ಕೆ ರಾಜಕೀಯ ಇಚ್ಛಾಶಕ್ತಿ ಕೊರತೆಯೇ ಕಾರಣ. ಹಿಂದಿನ ಬಿಜೆಪಿ ಸರಕಾರ ಯಾವುದೇ ಪ್ರಯತ್ನ ಮಾಡಿಲ್ಲ.
ಸರ್ಕಾರದ ಆಡಳಿತ ಯಂತ್ರ ಹೇಗೆ ಬಳಸಿಕೊಳ್ಳಬೇಕು ಎಂದು ಅರಿತು ಪರಿಹಾರ ನೀಡಲು ಅದಕ್ಕೆ ಆಗಲಿಲ್ಲ. ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸದ ಪರಿಣಾಮ 14 ಸಾವಿರ ಕೋಟಿ ರೂಪಾಯಿ ಇದ್ದ ಯೋಜನೆ ಈಗ 24 ಸಾವಿರ ಕೋಟಿಗೆ ಬಂದು ನಿಂತಿದೆ. ಇದರಿಂದ ಸರಕಾರಕ್ಕೆ ಅಂದರೇ ಜನರಿಗೆ ನಷ್ಟ. ಇದನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು. ಈ ವಿಚಾರವಾಗಿ ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ ಎಂದು ಹೇಳಿದರು.
ನೀರು ಮೇಲೆತ್ತುವುದು ಹಾಗೂ ವಿದ್ಯುತ್ ಕಾಮಗಾರಿಗಳು ಪ್ರಮುಖವಾದ ಕೆಲಸಗಳಾಗಿದ್ದು ಅವುಗಳನ್ನು ಮೊದಲು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯೋಜನೆ ಪೂರ್ಣಗೊಳ್ಳುವುದು ಯಾವಾಗ ಎಂಬ ಪ್ರಶ್ನೆಗೆ, "ಸದ್ಯಕ್ಕೆ ನಾವು 100 ಕಿ.ಮೀ ಆದ್ಯತೆ ಇಟ್ಟುಕೊಂಡಿದ್ದೇವೆ. ಎಲ್ಲೆಲ್ಲಿ ಅರಣ್ಯ ಪ್ರದೇಶ, ವಿದ್ಯುತ್, ಗುತ್ತಿಗೆದಾರರ ಸಮಸ್ಯೆ ಇದೆ ಎಂದು ಸ್ಥಳೀಯ ಶಾಸಕರ ಜೊತೆ ಚರ್ಚೆ ಮಾಡಿದ್ದೇನೆ. ಮುಂದಿನ ಹಂತದಲ್ಲಿ ತುಮಕೂರು ಹಾಗೂ ದೊಡ್ಡಬಳ್ಳಾಪುರದಲ್ಲಿರುವ ಬ್ಯಾಲೆನ್ಸ್ ರಿಸರ್ವಯರ್ ಜಾಗ ನೋಡಿ ಮುಂದಿನ ವಿಚಾರ ತೀರ್ಮಾನ ಮಾಡುತ್ತೇವೆ" ಎಂದು ತಿಳಿಸಿದರು.
ಗುತ್ತಿಗೆದಾರರು ಅವೈಜ್ಞಾನಿಕವಾಗಿ ಕಾಮಗಾರಿ ಮಾಡುತ್ತಿರುವ ಬಗ್ಗೆ ಕೇಳಿದಾಗ, "ಎಲ್ಲೆಲ್ಲಿ ಬದಲಾವಣೆ ಮಾಡಬೇಕು, ಎಲ್ಲೆಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು, ಆ ಬಗ್ಗೆ ಹೊಸ ಇಂಜಿನಿಯರ್ ಜತೆ ಚರ್ಚೆ ನಡೆಸುತ್ತೇನೆ" ಎಂದು ತಿಳಿಸಿದರು.
ಎತ್ತಿನಹೊಳೆ ಸರ್ಕಾರದ ಪ್ರತಿಷ್ಠಿತ ಯೋಜನೆ. ಕುಡಿಯುವ ನೀರು ಪೂರೈಸುವ ಈ ಯೋಜನೆಗೆ ವಿದ್ಯುತ್ ಉತ್ಪಾದಕರು, ಪ್ಲಾಂಟೇಷಶನರ್, ಭೂ ಮಾಲೀಕರು ಸೇರಿದಂತೆ ಯಾರೇ ಆದರೂ ಇದಕ್ಕೆ ಅಡ್ಡಿಪಡಿಸುವಂತಿಲ್ಲ. ಅಡ್ಡಿಪಡಿಸಿದರೆ ಸರ್ಕಾರ ತನ್ನದೇ ಆದ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು. ಈ ಯೋಜನೆಗೆ ಸೀಮಿತವಾಗಿ 400 ಕೆ.ವಿ ವಿದ್ಯುತ್ ಘಟಕ ನಿರ್ಮಾಣ ಮಾಡಲಾಗಿದೆ.












Click it and Unblock the Notifications