ಧರ್ಮಸ್ಥಳದ ಪಾದಯಾತ್ರಿಗಳ ಗಮನಕ್ಕೆ ವಿಶೇಷ ಸೂಚನೆ
ಹಾಸನ, ಮಾರ್ಚ್ 09: ಹಾಸನ ಜಿಲ್ಲಾಡಳಿತ ಶಿವರಾತ್ರಿ ಹಬ್ಬದ ಪ್ರಯುಕ್ತ ಧರ್ಮಸ್ಥಳಕ್ಕೆ ಶಿರಾಡಿ ಘಾಟ್ ಮೂಲಕ ಪಾದಯಾತ್ರೆ ಕೈಗೊಳ್ಳುವ ಭಕ್ತಾದಿಗಳಿಗೆ ವಿಶೇಷ ಸೂಚನೆಯನ್ನು ನೀಡಿದೆ. ಭಕ್ತರು ಜಿಲ್ಲಾಡಳಿತದ ಜೊತೆ ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ.
ಹಾಸನ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೆಂಪೊಳೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ರಸ್ತೆಬದಿಗಳಲ್ಲಿ ಕಾಡಾನೆಗಳ ಸಮಸ್ಯೆಯು ಹೆಚ್ಚಾಗಿದೆ ಎಂದು ಹಾಸನ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಶಿವರಾತ್ರಿ ಹಬ್ಬದ ಪ್ರಯುಕ್ತ ಧರ್ಮಸ್ಥಳಕ್ಕೆ ಕಾಲ್ನಡಿಗೆ ಕೈಗೊಂಡಿರುವ ಭಕ್ತಾದಿಗಳು ಈ ಭಾಗದಲ್ಲಿ ಸಂಚರಿಸುವಾಗ ಎಚ್ಚರಿಕೆಯಿಂದ ಹಾಗೂ ಗುಂಪುಗುಂಪಾಗಿ ಸಂಚರಿಸಬೇಕು ಎಂದು ಸೂಚನೆ ನೀಡಲಾಗಿದೆ.

ರಸ್ತೆ ಬದಿಯಲ್ಲಿ ಅಳವಡಿಸಿರುವ ಸೂಚನಾ ಫಲಕಗಳ ಮಾಹಿತಿಯನ್ನು ಕಟ್ಟುನಿಟ್ಟಾಗಿ ಅನುಸರಿಸಿ, ಈ ಸ್ಥಳಗಳಲ್ಲಿ ನಿಯೋಜಿಸಲಾಗಿರುವ ಅರಣ್ಯ ಸಿಬ್ಬಂದಿಗಳಿಗೆ ಸಹಕಾರ ನೀಡಿ ಎಂದು ಭಕ್ತರಿಗೆ ಮನವಿ ಮಾಡಿದೆ.
"ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸಬೇಕು. ಕತ್ತಲಾದ ನಂತರ ರಾತ್ರಿವೇಳೆಯಲ್ಲಿ ಪಾದಯಾತ್ರೆಗಳನ್ನು ಮುಂದುವರೆಸಬಾರದು" ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜ್ ತಿಳಿಸಿದ್ದಾರೆ.
ಶಿವರಾತ್ರಿ ಹಬ್ಬದ ಪ್ರಯುಕ್ತ ಹಲವಾರು ಭಕ್ತರು ದಕ್ಷಿಣ ಕನ್ನಡದಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಹೋಗುತ್ತಾರೆ. ಇಂತಹ ಸಂದರ್ಭದಲ್ಲಿ ಕಾಡಾನೆಗಳ ದಾಳಿಗೆ ಸಿಲುಕಬಾರದು ಎಂದು ಎಚ್ಚರಿಕೆಯನ್ನು ನೀಡಲಾಗಿದೆ.











Click it and Unblock the Notifications