ಡಿಸಿ ರೋಹಿಣಿ ವರ್ಗಾವಣೆ ಮಾಡದಂತೆ ಸಾರ್ವಜನಿಕರ ಆಗ್ರಹ
ಹಾಸನ, ಜನವರಿ 10: ದಕ್ಷ, ಪ್ರಾಮಾಣಿಕ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗಬೇಡಿ. ಯಾವುದೇ ಆರೋಪವಿಲ್ಲದಿದ್ದರೂ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆಗೆ ಒತ್ತಾಯಿಸುತ್ತಿರುವುದು ಸರಿಯಲ್ಲ ಎಂದು ದಲಿತ ಮುಖಂಡ ಶಿವಕುಮಾರ್ ಹೇಳಿದ್ದಾರೆ.
ರೋಹಿಣಿ ಸಿಂಧೂರಿ ಅವರು ಜಿಲ್ಲಾಧಿಕಾರಿಯಾಗಿ ಬಂದ ಮೇಲೆ ಜಿಲ್ಲೆಯಲ್ಲಿ ಜನಪರ ಕಾರ್ಯಗಳು ಹೆಚ್ಚಾಗಿವೆ. ಬೇಲೂರು ತಾಲೂಕಿನಲ್ಲಿ ಜ್ಯೂನಿಯರ್ ಕಾಲೇಜ್ ಮೈದಾನವು ಅಕ್ರಮವಾಗಿ ಪರಭಾರೆಯಾಗುವುದನ್ನು ತಪ್ಪಿಸಿದ್ದಾರೆ. ಜಿಲ್ಲೆಯಲ್ಲಿನ ಕಂದಾಯ ಇಲಾಖೆ ಅಕ್ರಮಗಳಿಗೆ ಕಡಿವಾಣ ಬಿದ್ದಿದೆ.

ಪಡಿತರ ಚೀಟಿ ವಿತರಣೆಗೆ ಕ್ರಮ ವಹಿಸಿದ ಜಿಲ್ಲಾಧಿಕಾರಿಗಳು, ಬೆಳೆ ಸಮೀಕ್ಷೆಯಲ್ಲಿ ಹಾಸನವನ್ನು 2ನೇ ಸ್ಥಾನಕ್ಕೇರಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಜಮೀನು ಮಂಜೂರಾತಿಗಾಗಿ ಪ್ರಸ್ತಾವನೆ ಸಲ್ಲಿಸಿದ್ದಾರೆ.
ಶ್ರವಣಬೆಳಗೊಳದಲ್ಲಿ ಮಹಾ ಮಸ್ತಕಾಭಿಷೇಕದ ಅಂಗವಾಗಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದಾರೆ. ಅರಸೀಕೆರೆಯಲ್ಲಿ ಮೇವು ಶೇಖರಣಾ ಕೇಂದ್ರ ಆರಂಭಿಸಿದ್ದಾರೆ. ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದಾರೆ.
ಇತ್ತೀಚೆಗೆ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕರಿಸಲು ವೆಬ್ ಪೋರ್ಟಲ್ ವ್ಯವಸ್ಥೆ ಜಾರಿಗೊಳಿಸಿದ್ದಾರೆ. ಪರಿಸ್ಥಿತಿ ಹೀಗಿರುವಾಗ, ಜನರ ಆಶಯಕ್ಕೆ ವಿರುದ್ಧವಾಗಿ ರೋಹಿಣಿ ಅವರನ್ನು ವರ್ಗಾವಣೆ ಮಾಡಿದರೆ, ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.












Click it and Unblock the Notifications