ಎಚ್. ಡಿ. ರೇವಣ್ಣಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ
ಬೆಂಗಳೂರು, ಆಗಸ್ಟ್ 03: ಮಾಜಿ ಸಚಿವ ಹಾಗೂ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್. ಡಿ. ರೇವಣ್ಣಗೆ ಚುನಾವಣಾ ತಕರಾರು ಅರ್ಜಿಯ ಸಂಕಷ್ಟ ಎದುರಾಗಿದೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಅವರು 88,103 ಮತಗಳನ್ನು ಪಡೆದು ಜಯಗಳಿಸಿದ್ದಾರೆ.
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ಅಕ್ರಮಗಳನ್ನು ನಡೆಸಿ ಹೊಳೆನರಸೀಪುರದಿಂದ ಜೆಡಿಎಸ್ ಅಭ್ಯರ್ಥಿ ಎಚ್ಜಯಗಳಿಸಿದ್ದು, ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಪರಾಜಿತ ಬಿಜೆಪಿ ಅಭ್ಯರ್ಥಿ ಹಾಗೂ ವಕೀಲ ದೇವರಾಜೇಗೌಡ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಈ ಚುನಾವಣಾ ತಕರಾರು ಅರ್ಜಿ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು. ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಬಳಿಕ ನ್ಯಾಯಾಲಯ ಪ್ರತಿವಾದಿಗಳಾದ ಎಲ್ಲರಿಗೂ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಸೆಪ್ಟೆಂಬರ್ 4ಕ್ಕೆ ಮುಂದೂಡಿತು.

ಅರ್ಜಿದಾರರ ವಾದವೇನು?; ಅರ್ಜಿದಾರರ ಪರ ವಕೀಲರು, ವಿಧಾನಸಭಾ ಚುನಾವಣೆಯಲ್ಲಿಎಚ್. ಡಿ. ರೇವಣ್ಣ ಭಾರಿ ಅಕ್ರಮಗಳನ್ನು ಎಸಗಿ ಜಯಗಳಿಸಿದ್ದಾರೆ. ಜತೆಗೆ ಮತಗಳಿಕೆಯಲ್ಲಿ 2ನೇ ಸ್ಥಾನದಲ್ಲಿದ್ದ ಶ್ರೇಯಸ್ ಪಟೇಲ್ ಕೂಡ ಮತದಾರರಿಗೆ ಆಮಿಷ ಒಡ್ಡಿದ್ದಾರೆ. ಹಾಗಾಗಿ ಇವರಿಬ್ಬರ ಮತಗಳಿಕೆಯನ್ನು ಅಸಿಂಧುಗೊಳಿಸಬೇಕೆಂದು ನ್ಯಾಯಾಲಯವನ್ನು ಕೋರಿದರು. ಅರ್ಜಿಯಲ್ಲಿ ಎಚ್. ಡಿ. ರೇವಣ್ಣ, ಶ್ರೇಯಸ್ ಎಂ. ಪಟೇಲ್, ಗೀತಾ ಶಿವಸ್ವಾಮಿ, ಬಿ. ಕೆ. ನಾಗರಾಜ, ಎಚ್. ಎಸ್. ತಾರೇಶ್, ಡಿ. ಆರ್. ರಂಗಸ್ವಾಮಿ ಸೇರಿದಂತೆ ಕಣದಲ್ಲಿದ್ದ ಎಲ್ಲರನ್ನೂ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಅಕ್ರಮ ಮಾರ್ಗದಲ್ಲಿ ಮತ: ಚುನಾವಣೆಯಲ್ಲಿಎಚ್. ಡಿ. ರೇವಣ್ಣ 88,103, ಎರಡನೇ ಅಭ್ಯರ್ಥಿ ಶ್ರೇಯಸ್ ಎಂ. ಪಟೇಲ್ 84,951 ಹಾಗೂ ಅರ್ಜಿದಾರರು 4850 ಮತಗಳನ್ನು ಪಡೆದಿದ್ದಾರೆ. ಉಳಿದ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ. ರೇವಣ್ಣ ವ್ಯಾಪಕ ಚುನಾವಣಾ ಅಕ್ರಮಗಳನ್ನು ಎಸಗಿದ್ದಾರೆ. ಆ ರೀತಿ ಅಕ್ರಮ ಎಸಗಿಗಳಸಿದ ಮತಗಳನ್ನು ಸಿಂಧುವೆಂದು ಪರಿಗಣಿಸಲು ಪ್ರಜಾಪ್ರತಿನಿಧಿ ಕಾಯಿದೆ 1951, ನೀತಿ ಸಂಹಿತೆ ಮತ್ತು ನಿಯಮ 1961 ಹಾಗೂ 2006ರ ಮಾರ್ಗಸೂಚಿಯಲ್ಲಿ ಅವಕಾಶವಿಲ್ಲ. ಹಾಗಾಗಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಮತ್ತು ಅರ್ಜಿದಾರರನ್ನು ಆಯ್ಕೆಯಾಗಿದ್ದಾರೆಂದು ಘೋಷಿಸಬೇಕೆಂದು ಕೋರಲಾಗಿದೆ.
ರೇವಣ್ಣ ಅವರು ಸಲ್ಲಿಸಿರುವ ನಾಮಪತ್ರವೇ ದೋಷಪೂರಿತವಾಗಿದೆ, ಅವರು ತಮ್ಮ ಆಸ್ತಿ ವಿವರಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿಲ್ಲ, ಹಲವು ಮಾಹಿತಿಯನ್ನು ಮರೆ ಮಾಚಿದ್ದಾರೆ. ಆದರೂ ಅವರ ನಾಮಪತ್ರವನ್ನು ಚುನಾವಣಾಧಿಕಾರಿ ಸಿಂಧು ಎಂದು ಘೋಷಿಸಿದ್ದಾರೆ. ಭವಾನಿ ರೇವಣ್ಣ ಅವರ ಆಸ್ತಿಯ ವಿವರಗಳೂ ಸಹ ಸುಳ್ಳಿನಿಂದ ಕೂಡಿವೆ ಎಂದೂ ಸಹ ಆರೋಪಿಸಲಾಗಿದೆ.
ಅಲ್ಲದೆ, ಪ್ರತಿವಾದಿ ರೇವಣ್ಣ ಅವರು ಪ್ರಜಾಪ್ರತಿನಿಧಿ ಕಾಯಿದೆ 1951ರ ಹಲವು ಸೆಕ್ಷನ್ಗಳಡಿ ಅಕ್ರಮಗಳನ್ನು ಎಸಗಿದ್ದಾರೆ. ರೇವಣ್ಣ ಅವರ ಬೆಂಬಲಿಗರು ಅಣ್ಣೆಹಳ್ಳಿಯಲ್ಲಿಮತದಾರರಿಗೆ 2 ಕೋಳಿಗಳು ಮತ್ತು 2,000 ರೂ. ನಗದನ್ನು ಹಂಚಿದ್ದಾರೆ. ಶಾಂತಿಗ್ರಾಮದ ಬಳಿ ಜನರಿಗೆ ಅಮಿಷವೊಡ್ಡುತ್ತಿದ್ದುದನ್ನು ತಡೆಯಲು ಹೋದಾಗ ರೇವಣ್ಣ ಅವರ ಬೆಂಬಲಿಗರು ತಮ್ಮ ಮೇಲೆ ಹಲ್ಲೆನಡೆಸಿದ್ದಾರೆ. ಈ ಬಗ್ಗೆ ಮಿಥುನ್, ಮೋಹನ್, ಮಂಜು ಮತ್ತು ಶಂಕರ್ ಸೇರಿ 30 ಮಂದಿ ವಿರುದ್ಧ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ ಎಂದು ಅರ್ಜಿಯಲ್ಲಿ ವಿವರಿಸಿದ್ದಾರೆ.












Click it and Unblock the Notifications