ಹಾಸನ ಅಪಘಾತ: ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯ
ಹಾಸನ, ಅಕ್ಟೋಬರ್ 16: ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗಾಂಧಿನಗರದಲ್ಲಿ ಟೆಂಪೋ ಟ್ರಾವೆಲರ್, ಹಾಲಿನ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಒಂದೇ ಗ್ರಾಮದ 9 ಮಂದಿ ಸಾವನ್ನಪ್ಪಿದ್ದಾರೆ. ಹಾಸನದಲ್ಲಿ ನಡೆದ ಭೀಕರ ರಸ್ತೆ ಅಪಘಾತದ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸ ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.
ಲೀಲಾವತಿ (50), ಚೈತ್ರಾ (33), ಸಮರ್ಥ (10), ಡಿಂಪಿ (12), ತನ್ಮಯ್ (10), ಧ್ರುವ (2), ವಂದನಾ (20), ದೊಡ್ಡಯ್ಯ (60), ಭಾರತಿ (50) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಹಳ್ಳಿಕೆರೆ ಗ್ರಾಮದ ಜನರು ಟಿಟಿ ವಾಹನದಲ್ಲಿ ಧರ್ಮಸ್ಥಳಕ್ಕೆ ತೆರಳಿ, ಅಲ್ಲಿಂದ ಹಾಸನಕ್ಕೆ ಆಗಮಿಸಿ ಹಾಸನಾಂಬೆ ದೇವಿ ದರ್ಶನ ಪಡೆದು ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಹಾಲಿನ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿರುವ ಆರೋಪ ಕೇಳಿ ಬಂದಿದ್ದು, ಚಾಲಕನನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಾಸನದಲ್ಲಿ ನಡೆದ ಭೀಕರ ರಸ್ತೆ ಅಪಘಾತದ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. "ಶನಿವಾರ ರಾತ್ರಿ ಕೆಲ ಪುಣ್ಯಕ್ಷೇತ್ರಗಳ ಪ್ರವಾಸ ಮುಗಿಸಿ ತಮ್ಮ ಸ್ವಗ್ರಾಮಕ್ಕೆ ವಾಪಸಾಗುತ್ತಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳೂ ಸೇರಿ 9 ಜನರು ಹಾಸನ ಜಿಲ್ಲೆಯ ಅರಸೀಕೆರೆ ಸಮೀಪದ ಬಾಣಾವರದ ಬಳಿ ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿರುವುದು ನನ್ನ ಮನಸ್ಸಿಗೆ ತೀವ್ರ ಆಘಾತ ಉಂಟು ಮಾಡಿದೆ," ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಸಂತ್ರಸ್ತರ ಕುಟುಂಬಕ್ಕೆ ಸರಕಾರ ಕೂಡಲೇ ಸೂಕ್ತ ಪರಿಹಾರ ಘೋಷಣೆ ಮಾಡಬೇಕೆಂದು ಅಗ್ರಹಿಸುತ್ತೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಆ ಕುಟುಂಬಗಳಿಗೆ ಕರುಣಿಸಲಿ ಹಾಗೂ ಗಾಯಾಳುಗಳೆಲ್ಲರೂ ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ," ಎಂದಿದ್ದಾರೆ.
ಇನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಹಾಸನದಲ್ಲಿ ನಡೆದ ಅಪಘಾತದ ಬಗ್ಗೆ ಟ್ವೀಟ್ ಮಾಡಿದ್ದು, "ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಬಾಣಾವರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವಿಗೀಡಾದ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಶಾಂತಿ ಮತ್ತು ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ. ರಾಜ್ಯ ಸರ್ಕಾರ ಮೃತ ದುರ್ದೈವಿಗಳ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸುತ್ತೇನೆ," ಎಂದಿದ್ದಾರೆ.
ಶನಿವಾರ ರಾತ್ರಿ ಕೆಲ ಪುಣ್ಯಕ್ಷೇತ್ರಗಳ ಪ್ರವಾಸ ಮುಗಿಸಿ ತಮ್ಮ ಸ್ವಗ್ರಾಮಕ್ಕೆ ವಾಪಸಾಗುತ್ತಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳೂ ಸೇರಿ 9 ಜನರು ಹಾಸನ ಜಿಲ್ಲೆಯ ಅರಸೀಕೆರೆ ಸಮೀಪದ ಬಾಣಾವರದ ಬಳಿ ರಸ್ತೆ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವುದು ನನ್ನ ಮನಸ್ಸಿಗೆ ತೀವ್ರ ಆಘಾತ ಉಂಟು ಮಾಡಿದೆ. (1/2)
— H D Devegowda (@H_D_Devegowda) October 16, 2022