ಹಾಸನ; ಸಹಕಾರಿ ಬ್ಯಾಂಕ್ ಚುನಾವಣೆ ಬಿಜೆಪಿಗೆ ಮುಖಭಂಗ, ಜೆಡಿಎಸ್ ಪಾರುಪತ್ಯ!
ಹಾಸನ, ಸೆಪ್ಟೆಂಬರ್ 25 : ಹಾಸನ ಜಿಲ್ಲೆ ಜೆಡಿಎಸ್ ಪಕ್ಷದ ಭದ್ರಕೋಟೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಹೆಡಿಸಿಸಿ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, 13 ಸ್ಥಾನಗಳಲ್ಲಿಯೂ ಜೆಡಿಎಸ್ ಗೆಲುವು ಸಾಧಿಸಿದೆ.
ಶುಕ್ರವಾರ ಹಾಸನ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಹೆಚ್ಡಿಸಿಸಿ) ಚುನಾವಣೆ ಫಲಿತಾಂಶ ಪ್ರಕಟವಾಯಿತು. ಪಟೇಲ್ ಶಿವರಾಂ, ಬಂಡೀಗೌಡ ರಾಜಣ್ಣ, ಜಯರಾಂ ಮತ್ತು ಗಿರೀಶ್ ಗೆಲುವು ಸಾಧಿಸಿದರು.
13 ನಿರ್ದೇಶಕರ ಸ್ಥಾನಗಳ ಪೈಕಿ 9ರಲ್ಲಿ ಜೆಡಿಎಸ್ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದರು. ಶುಕ್ರವಾರ ಉಳಿದ 4 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಎಲ್ಲಾ ಸ್ಥಾನಗಳು ಜೆಡಿಎಸ್ ಪಾಲಾಗಿವೆ.

ಹಾಸನ ಕ್ಷೇತ್ರದಲ್ಲಿ ಬಿಜೆಪಿಯ ಪ್ರೀತಂಗೌಡ ಶಾಸಕರು. ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲವು ಸಾಧಿಸಲಿದ್ದಾರೆ ಎಂಬ ನಿರೀಕ್ಷೆ ಇತ್ತು. ಆದರೆ, ಹಾಸನ ಜೆಡಿಎಸ್ ಭದ್ರಕೋಟೆ ಎಂಬುದು ಸಾಬೀತಾಗಿದ್ದು, ಎಲ್ಲಾ ಸ್ಥಾನ ಪಕ್ಷದ ಪಾಲಾಗಿದೆ.
ಇದೇ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿಗಳು ಚುನಾವಣಾ ಕಣಕ್ಕಿಳಿದಿದ್ದರು. ಆದ್ದರಿಂದ, ಯಾರು ಗೆಲ್ಲಬಹುದು ಎಂಬ ಕುತೂಹಲವಿತ್ತು. ಆದರೆ, ಒಂದು ಸ್ಥಾನದಲ್ಲಿಯೂ ಬಿಜೆಪಿ ಗೆಲ್ಲಲು ಸಾಧ್ಯವಾಗಲಿಲ್ಲ.
ರೇವಣ್ಣ ಪುತ್ರ ಆಯ್ಕೆ : ಕಳೆದ ಶನಿವಾರ 9 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದರು. ಅವರಲ್ಲಿ ಮಾಜಿ ಸಚಿವ ಎಚ್. ಡಿ. ರೇವಣ್ಣ ಪುತ್ರ ಸೂರಜ್ ರೇವಣ್ಣ ಸಹ ಒಬ್ಬರು. ಈ ಮೂಲಕ ದೇವೇಗೌಡರ ಕುಟುಂಬದ ಮತ್ತೊಬ್ಬರು ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ.












Click it and Unblock the Notifications